ಮೈಸೂರು: ದೇಶಾಧ್ಯಂತ 78ನೇ ಸ್ವಾತಂತ್ರ್ಯ ದಿನವನ್ನು ಆಚರಿಸಿದರೆ, ಮುಖ್ಯಮಂತ್ರಿಗಳ ತವರು ಮೈಸೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ಜನಪ್ರತಿನಿಧಿಗಳ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಪ್ರತಿವರ್ಷದಂತೆ ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಸಮಾರಂಭ ಏರ್ಪಡಿಸಲಾಗಿತ್ತು. ಆದರೆ ಇಡೀ ದೇಶವೇ ಸಂಭ್ರಮಿಸುವ ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ಮೈಸೂರಿನ ಜನಪ್ರತಿನಿಧಿಗಳು ಮಾತ್ರ ನಿರುತ್ಸಾಹ ತೋರಿದರು. ಜಿಲ್ಲೆಯ ವಿವಿಧ ಕ್ಷೇತ್ರಗಳ ಶಾಸಕರಷ್ಟೇ ಅಲ್ಲದೇ ಮೈಸೂರು ನಗರ ವ್ಯಾಪ್ತಿಗೆ ಒಳಪಡುವ ಕ್ಷೇತ್ರಗಳ ಶಾಸಕರುಗಳು ಸಮಾರಂಭದಿಂದ ಹೊರಗುಳಿದಿದ್ದು, ಜನರಲ್ಲಿ ಅಸಮಾಧಾನ ಮೂಡಿಸಿತು.
ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಗೈರು ಹಾಜರಿಯಿಂದಾಗಿ ಸಮಾರಂಭದಲ್ಲಿ ಖಾಲಿ ಕುರ್ಚಿಗಳ ಪ್ರದರ್ಶನಗೊಂಡಿತು. ಪ್ರಮುಖವಾಗಿ ಸಂಸದ ಯದುವೀರ್ ಒಡೆಯರ್, ಶಾಸಕರಾದ ಕೆ. ಹರೀಶ್ ಗೌಡ, ಟಿ.ಎಸ್. ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರುಗಳಾದ ಡಾ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಕೆ. ವಿವೇಕಾನಂದ ಸೇರಿದಂತೆ ಹಲವು ಜನಪ್ರತಿನಿಧಿಗಳು ಗೈರು ಹಾಜರಿಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ನೆರವೇರಿತು.