- ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್ ಗುರುಚರಣ್ ಹೇಳಿಕೆ
ಪ್ರತಿನಿಧಿ ವರದಿ ಮದ್ದೂರು
ನಾಯಿ ತಿನ್ನುವ ಬಿಸ್ಕೆಟ್ ಅನ್ನು ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಅವರು ತಿನ್ನಿಸುವ ಪರಿಪಾಠವನ್ನು ಬೆಳೆಸಿಕೊಂಡಿದ್ದಾರೆ. ಇದನ್ನು ಅರಿತ ಹಾಗೂ ಕಾಂಗ್ರೆಸ್ ಪಕ್ಷದಿಂದ ಅಪಾರ ನೋವು ಅನುಭವಿಸಿದ ನಮ್ಮ ದೊಡ್ಡಪ್ಪ ಎಸ್.ಎಂ. ಕೃಷ್ಣ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್ ಗುರುಚರಣ್ ಹೇಳುವ ಮೂಲಕ ಕಾಂಗ್ರೆಸ್ ನಾಯಕರಿಗೆ ಚಾಟಿ ಬೀಸಿದ್ದಾರೆ.
ತಾಲೂಕಿನ ಕೆ. ಹೊನ್ನಲಗೆರೆ ಗ್ರಾಮದಲ್ಲಿ ಮೈತ್ರಿ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಅವರ ಪರವಾಗಿ ಆಯೋಜಿಸಿದ್ದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದರು. ಕಾಂಗ್ರೆಸ್ ಹೈಕಮಾಂಡ್ ನವರು ಮನೆಯಲ್ಲಿ ನಾಯಿಗೆ ತಿನ್ನಿಸುವ ಬಿಸ್ಕೆಟ್ ಅನ್ನು ಕಾಂಗ್ರೆಸ್ ನಾಯಕರಿಗೆ ತಿನ್ನಿಸುತ್ತಾರೆ. ಹಾ ಬಿಸ್ಕೆಟ್ ಗೆ ಆಸೆ ಪಟ್ಟವರು ಕಾಂಗ್ರೆಸ್ ನಲ್ಲಿದ್ದಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದರು.
ನಾವು ಮತ್ತು ಬಿಜೆಪಿಯವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಒಂದಾಗಿದ್ದರೆ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿತ್ತು ನಮ್ಮ ಹಣೆಬರಹವು ಬದಲಾಗುತ್ತಿತ್ತು ಎಂದರು.
ವೆಂಕಟರಮಣೆಗೌಡ (ಸ್ಟಾರ್ ಚಂದ್ರು) ಅವರನ್ನು ಕಾಂಗ್ರೆಸ್ ಪಕ್ಷದವರು ಅರಕೆ ಕುರಿ ಮಾಡಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಮಾಡಿದ್ದಾರೆ. ಕುಮಾರಸ್ವಾಮಿಯವರ ಅಲೆಯ ಮುಂದೆ ಕಾಂಗ್ರೆಸ್ ಕೊಚ್ಚಿ ಹೋಗುತ್ತದೆ. ಏ. 26ರಂದು ನಡೆಯುವ ಚುನಾವಣೆಯಲ್ಲಿ ಕುಮಾರಸ್ವಾಮಿಯವರನ್ನು ಬೆಂಬಲಿಸುವ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಜೆಡಿಎಸ್ ಪಕ್ಷದ ತಾಲೂಕು ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ. ಸಂದರ್ಶ, ಎಸ್ಸಿ ಎಸ್ಟಿ ಘಟಕದ ತಾಲ್ಲೂಕು ಅಧ್ಯಕ್ಷ ಹೊಸಕೆರೆ ಕಾಳಯ್ಯ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಚಾಮನಹಳ್ಳಿ ಸ್ವಾಮಿಗೌಡ, ಬಿಳಿಯಪ್ಪ, ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಶಿವದಾಸ್ ಸತೀಶ್, ಮುಖಂಡರಾದ ಪ್ರಿಯಾಂಕ ಅಪ್ಪು ಪಿ. ಗೌಡ, ತಾಲೂಕು ಮಹಿಳಾ ಜೆಡಿಎಸ್ ಘಟಕದ ಅಧ್ಯಕ್ಷೆ ದಿವ್ಯಾ ರಾಮಚಂದ್ರ ಶೆಟ್ಟಿ, ಮುಖಂಡರಾದ ಕೆಂಗಲ್ ಗೌಡ, ಶಿವಲಿಂಗಯ್ಯ, ಹಳ್ಳಿಕೆರೆ ಮಾದೇಶ್ ಸೇರಿದಂತೆ ಇತರರಿದ್ದರು.
ಪೋಟೋ
ಮದ್ದೂರು ತಾಲೂಕು ಕೆ. ಹೊನ್ನಲಗೆರೆ ಗ್ರಾಮದಲ್ಲಿ ಜೆಡಿಎಸ್ ಬಿಜೆಪಿ ಪಕ್ಷದ ಮೈತ್ರಿ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಅವರ ಪರವಾಗಿ ಆಯೋಜಿಸಿದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್. ಗುರುಚರಣ್ ಅವರು ಮಾತನಾಡಿದರು.