ನಾಡಹಬ್ಬ ದಸರಾ 2024 ಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಮೈಸೂರಲ್ಲಿ ಸಕಲ ಸಿದ್ಧತೆ ನಡೆದಿದ್ದು , ಐತಿಹಾಸಿಕ ಜಂಬೂಸವಾರಿಗೆ ಗಜಪಡೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ತಾಲೀಮು ನಡೆಸಲಾಗಿದೆ. ಇದೆಲ್ಲದರ ನಡುವೆ ದಸರಾ ಉದ್ಘಾಟಕರು ಯಾರು ಎಂಬ ಕೌತುಕಕ್ಕೆ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ನಾಡಿನ ಪ್ರಖ್ಯಾತ ಸಾಹಿತಿ ‘ಹಂಪನಾ’ ಅರ್ಥಾತ್ ಹಂಪಾ ನಾಗರಾಜಯ್ಯ ನಾಡಹಬ್ಬ ಉದ್ಘಾಟನೆ ಮಾಡಲಿದ್ದಾರೆ ಎಂದು ಘೋಷಿಸಿದ್ದಾರೆ .
ಮೈಸೂರಲ್ಲಿ ಮಾಧ್ಯಮಗಳ ಜತೆ ಮಾತಾಡಿದ ಸಿಎಂ ಸಿದ್ದರಾಮಯ್ಯ , ನಾಡಹಬ್ಬ ದಸರಾ ವನ್ನ ಹಂಪನಾ ಉದ್ಘಾಟಿಸಲಿದ್ದಾರೆ. ಕಳೆದ 40 ವರ್ಷಗಳಿಂದ ಕನ್ನಡ ಸಾಹಿತ್ಯಕ್ಕೆ ಹಂಪನಾ ಕೊಡುಗೆ ಅಪಾರ. ತಮ್ಮ ವಿಶಿಷ್ಟ ಸಾಹಿತ್ಯದ ಮೂಲಕ ಹಂಪನಾ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅವರ ಅಪಾರ ಸಾಧನೆ ಪರಿಗಣಿಸಿ ಈ ಬಾರಿಯ ದಸರಾ ಉದ್ಘಾಟನೆಗೆ ಅವರನ್ನು ಹೈಪವರ್ ಕಮಿಟಿಯಲ್ಲಿ ಚರ್ಚಿಸಿ ಆಯ್ಕೆ ಮಾಡಲಾಗಿದೆ ಎಂದರು.
ಹಂಪನಾ ಹಿನ್ನೆಲೆ ಏನು..?
ಹಂ.ಪ.ನಾಗರಾಜಯ್ಯನವರು ಕನ್ನಡ ಸಾರಸ್ವತ ಲೋಕದಲ್ಲಿ ‘ಹಂಪನಾ’ ಎಂದೇ ಚಿರಪರಿಚಿತರು. ಹಂಪನಾ ಅವರು ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಕನ್ನಡ ಸಾಹಿತ್ಯ ಲೋಕದಲ್ಲಿ ಅವಿರತವಾಗಿ ದುಡಿದಿದ್ದಾರೆ.ಇವರು ಇಂದಿನ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹಂಪಸಂದ್ರ ಎಂಬ ಗ್ರಾಮದಲ್ಲಿ ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಿಂದ ಎಂಎ ಪದವಿಯನ್ನೂ, ವಡ್ಡಾರಾಧನೆ ಸಮಗ್ರ ಅಧ್ಯಯನಕ್ಕಾಗಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನೂ ಪಡೆದಿದ್ದಾರೆ. ರಾಜ್ಯದ ಪ್ರತಿಷ್ಟಿತ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಇವರು, ವಿವಿಧ ಅವಧಿಗಳಲ್ಲಿ ಜೈನ ಸಂಶೋಧನ ಕೇಂದ್ರ, ಜೈನ ಅಧ್ಯಯನ ಸಂಸ್ಥೆ, ಕರ್ನಾಟಕ ಸರ್ಕಾರದ ಕನ್ನಡ ಸಂಸ್ಕೃತಿ ನಿರ್ದೇಶನಾಲಯಗಳ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು. ದೇಶವಿದೇಶಗಳಲ್ಲಿ ನಡೆದ ಹತ್ತಾರು ಸಾಹಿತ್ಯ ಸಮ್ಮೇಳನಗಳ ಅಧ್ಯಕ್ಷತೆ ವಹಿಸಿದ್ದಾರೆ. ಹಂಪನಾ ಅವರು ಸಾಹಿತ್ಯದ ಹಲವು ಪ್ರಕಾರಗಳಲ್ಲಿ ತಮ್ಮ ಪ್ರತಿಭೆಯನ್ನು ತೋರಿದ್ದಾರೆ. ಇವರ ಲೇಖನಿಯಿಂದ 115 ಪುಸ್ತಕಗಳು ಪ್ರಕಟವಾಗಿದೆ. ಹಂಪನಾ ಅವರಿಗೆ ಕನ್ನಡ ವಿಶ್ವಿವಿದ್ಯಾಲಯವು 2006ರಲ್ಲಿ ನಾಡೋಜ ಪ್ರಶಸ್ತಿ ನೀಡಿ ಗೌರವಿಸಿದೆ. ಇದಲ್ಲದೆ ಅವರನ್ನು ಹಲವಾರು ಪ್ರಶಸ್ತಿಗಳು ಹುಡುಕಿಕೊಂಡು ಬಂದಿವೆ.