ಶಾಸಕ ಸಿಮೆಂಟ್ ಮಂಜುನಾಥ್ ಅಭಿಪ್ರಾಯ ।ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ
ಪ್ರತಿನಿಧಿ ವರದಿ ಸಕಲೇಶಪುರ
ಮನುಷ್ಯ ಗಳಿಸಿದ ವಿದ್ಯೆಯನ್ನು ಯಾರೂ ಅಪಹರಿಸಲಾಗದ ಅಮೂಲ್ಯ ಸಂಪತ್ತು. ವಿದ್ಯಾರ್ಥಿಗಳು ಈ ಸಂಪತ್ತನ್ನು ನಿರಂತರ ಅಧ್ಯಯನದಿಂದ ಹಾಗೂ ಪರಿಶ್ರಮದಿಂದ ಗಳಿಸಿಕೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜುನಾಥ್ ಹೇಳಿದರು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲೂಕು ಪರಿಶಿಷ್ಟ ಜಾತಿ, ಪಂಗಡಗಳ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ 2022-23/2023-24ನೇ ಸಾಲಿನ ತಾಲೂಕು ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರು ಶಿಕ್ಷಣ ಪಡೆದಾಗ ಮಾತ್ರ ಆರ್ಥಿಕ, ಸಾಮಾಜಿಕ ಅಭಿವೃದ್ಧಿ ಸಾಧ್ಯವಿದೆ. ಈ ದಿಸೆಯಲ್ಲಿ ನಾವು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಅರಿವಿನೊಂದಿಗೆ ದೇಶದ ಸಮಸ್ಯೆಗಳಿಗೆ ಸೂಕ್ತ ಉತ್ತರ ಕಂಡುಕೊಳ್ಳುವ ಪ್ರಯತ್ನ ಸದ್ಯದ ಅತೀ ದೊಡ್ಡ ಸವಾಲು. ಆ ಸವಾಲು ಏದುರಿಸಬೇಕಾದರೆ ಈ ದೇಶದ ಪ್ರಜೆಗಳಾದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಅಂಬೇಡ್ಕರ್ ಅವರ ಚಿಂತನೆಗಳನ್ನು ಮೈಗೂಡಿಸಿಕೊಂಡು ಸಂವಿಧಾನದಡಿಯಲ್ಲಿ ಜೀವನ ಸಾಗಿಸುವ ಮತ್ತು ದೇಶವನ್ನು ಮುನ್ನಡೆಸುವ ತಿಳುವಳಿಕೆ ಶಕ್ತಿ ಸಾಮರ್ಥ್ಯಗಳನ್ನು ಹೊಂದಬೇಕು ಎಂದು ಹೇಳಿದರು. ತಾಲೂಕಿನಲ್ಲಿ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಐಎಎಸ್, ಐಪಿಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಉನ್ನತ ಸ್ಥಾನಕ್ಕೆ ಏರುವ ಜತೆಗೆ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಬೇಕೆಂದು ಕರೆ ನೀಡಿದರು.
ಮೂಡಿಗೆರೆಯ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತನಾಡಿ, ಶಿಕ್ಷಣದಿಂದ ಮಾತ್ರ ಸಮಾಜ ಹಾಗೂ ದೇಶದ ಅಭಿವದ್ಧಿ ಸಾಧ್ಯ ಎಂಬುದನ್ನು ಎಲ್ಲರು ಅರ್ಥ ಮಾಡಿಕೊಳ್ಳಬೇಕು. ಅಂಬೇಡ್ಕರ್ ಅವರ ಜೀವನ ಪ್ರತಿಯೊಬ್ಬ ವಿದ್ಯಾರ್ಥಿಗೆ ಆದರ್ಶವಾಗಬೇಕು, ಅವರು ಜ್ಞಾನಾರ್ಜನೆಗೆ ತೋರಿದ ಆಸಕ್ತಿ, ಸಂಪನ್ಮೂಲಗಳನ್ನು ಬಳಸಿಕೊಂಡ ಬಗೆ, ಸಮಾಜದ ಬೆಳವಣಿಗೆಗೆ ಶಿಕ್ಷಣವನ್ನು ಉಪಯೋಗಿಸಿ ಕೊಂಡ ರೀತಿ, ದೇಶಕ್ಕೆ ತೋರಿದ ಗೌರವ ಮತ್ತು ದೇಶ ಪ್ರೇಮ ಹಾಗೂ ಇಡೀ ಭಾರತವನ್ನು ಸಮಗ್ರವಾಗಿ ನೋಡಿದ ಪರಿ ಎಲ್ಲವೂ ಅನುಕರಣೀಯ ಮತ್ತು ಆದರ್ಶವಾಗಿದೆ ಎಂದರು.
ರಾಜ್ಯ ಉಗ್ರಾಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎನ್.ಈ.ಕ್ರಾಂತಿ ಮಾತನಾಡಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಮಾಜದ ವತಿಯಿಂದ ಪ್ರೋತ್ಸಾಹ ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಸಕರಾತ್ಮಕ ಮನೋಭಾವನೆ ಬೆಳೆಯುತ್ತದೆ. ಶಿಕ್ಷಣದಿಂದ ಮಾತ್ರ ಬದಲಾವಣೆ ತರಲು ಸಾಧ್ಯ. ವಿದ್ಯೆಯನ್ನು ಯಾರು ಕಸಿಯುವುದಿಲ್ಲ. ಜತೆಗೆ ಸಮಾಜದಲ್ಲಿ ಗೌರವವೂ ದೊರೆಯುತ್ತದೆ. ಇಂದು ವಿವಿಧ ಕ್ಷೇತ್ರಗಳಲ್ಲಿ ವಿಪುಲ ಅವಕಾಶಗಳಿವೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ದೊರೆಯಬೇಕು. ಎಚ್ಚರಿಕೆ ಹೆಜ್ಜೆ ಇಡುವ ಮೂಲಕ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಆನಂದ್ ಮೂರ್ತಿ ಮಾತಾನಾಡಿ, ಶಿಕ್ಷಣದಿಂದ ಮಾತ್ರ ಬಡತನ ನಿಮೂರ್ಲನೆ ಸಾಧ್ಯವಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶಿಸ್ತಿನಿಂದ ಓದಿನ ಕಡೆ ಗಮನಕೊಡುವ ಮೂಲಕ ಉತ್ತಮ ಪ್ರಜೆಗಳಾಗಿ ಸಾಮಾಜಿಕ ಪಿಡುಗಳು ವಿರುದ್ಧ ಹೋರಾಡಿ ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸಬೇಕು. ಶೋಷಣೆಗೊಳಗಾದ ದಲಿತ ಸಮುದಾಯ ಮುಂದೆ ಬರಬೇಕಾದರೆ ಅದು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಅರಿತಿದ್ದ ಅಂಬೇಡ್ಕರ್, ಶಿಕ್ಷಣದ ಮೂಲಕ ಸಾಮಾಜಿಕ ಬದಲಾವಣೆ ಬಯಸಿದ್ದರು ಎಂದರು. ತಾಲೂಕಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ವಿದ್ಯಾರ್ಥಿಗಳು ತಯಾರಿ ನಡೆಸಲು ಸುಸಜ್ಜಿತವಾದ ಗ್ರಂಥಾಲಯದ ಅವಶ್ಯಕತೆಯಿದ್ದು ಶಾಸಕರು ಈ ನಿಟ್ಟಿನಲ್ಲಿ ಗಮನಹರಿಸುವಂತೆ ಮನವಿ ಮಾಡಿದರು.
ಕಾಂಗ್ರೆಸ್ ಮುಖಂಡ ಮುರುಳಿ ಮೋಹನ್ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಸರಿಯಾದ ರೀತಿಯಲ್ಲಿ ಸದುಪಯೋಗ ಪಡೆದುಕೊಂಡು ಉತ್ತಮ ಸಾಧನೆ ಮಾಡಬೇಕು. ಇದಕ್ಕಾಗಿ ಪರಿಶ್ರಮ ಅತಿ ಮುಖ್ಯವಾಗಿದೆ. ಪೋಷಕರು ಈ ದಿಸೆಯಲ್ಲಿ ಮಕ್ಕಳಿಗೆ ಅನುಕೂಲತೆ ಕಲ್ಪಿಸಿ ಕೊಡಬೇಕು. ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಮುಂದಿನ ದಿನಗಳಲ್ಲಿ ತಾಲೂಕಿನ ಅಭಿವೃದ್ಧಿಗಾಗಿ ಶ್ರಮ ವಹಿಸುತ್ತೇನೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿಯ 200 ಹಾಗೂ ದ್ವಿತೀಯ ಪಿ.ಯು.ಸಿಯ 50 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿಲಾಯಿತು. ಇದೇ ವೇಳೆ ರಾಜ್ಯ ಸರ್ಕಾರಿ ನೌಕರರನ್ನೂ ಸನ್ಮಾನಿಸಲಾಯಿತು.
ತಾಲೂಕು ಪರಿಶಿಷ್ಟ ಜಾತಿ, ಪಂಗಡಗಳ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಂ.ಎಸ್.ಮಹೇಶ್, ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಎಚ್.ಎಸ್.ಕರುಣಾಕರ್, ಇಂಡಿಯಾ ಪೋಸ್ಟ್ ಪೆಮೆಂಟ್ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ವಿನಯ್ ಕುಮಾರ್, ವಲಯ ಅರಣ್ಯಾಧಿಕಾರಿ ಶಿಲ್ಪಾ, ಕಾರವಾರ ಕೃಷಿ ಅಧಿಕಾರಿ ಯು.ಎಂ.ಪ್ರಕಾಶ್, ನಿವೃತ್ತ ಮುಖ್ಯ ಶಿಕ್ಷಕ ಗುದ್ದು ಲಕ್ಕಪ್ಪ, ನಿವೃತ್ತ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್.ಆರ್.ಕೊಮಾರಾಯ್ಯ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಸದಸ್ಯರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.