ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಡಗು ಪ್ರಾದೇಶಿಕ ಕಛೇರಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ಮಡಿಕೇರಿ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಕುರಿತು ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆ ನಡೆಸಲಾಯಿತು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿ, ನಾವು ಪ್ರಾಕೃತಿಕ ಸಂಪನ್ಮೂಲಗಳನ್ನು ಸಂರಕ್ಷಣೆ ಮಾಡುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡಬೇಕಿದೆ. ನೆಲ- ಜಲ, ಅರಣ್ಯ, ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಪರಿಸರ ಮಾಲಿನ್ಯ ಉಂಟಾಗದ ರೀತಿಯಲ್ಲಿ ಎಚ್ಚರಿಕೆ ವಹಿಸುವುದು ಅಗತ್ಯ. ಪ್ರಾಕೃತಿಕ ಸಂಪನ್ಮೂಲ ಸಂರಕ್ಷಣೆಗೆ ಎಲ್ಲರೂ ಪಣ ತೊಡಬೇಕಿದೆ ಎಂದರು.
ಜಿಲ್ಲಾ ಪರಿಸರ ಅಧಿಕಾರಿ ಎಂ.ಜಿ.ರಘುರಾಮ್ ಮಾತನಾಡಿ, ವಿದ್ಯಾರ್ಥಿ ಹಂತದಲ್ಲಿಯೇ ಗಿಡಮರ, ನೆಲ-ಜಲ, ಪರಿಸರ, ಪ್ರಕೃತಿಯ ಮೇಲೆ ಪ್ರೇಮ ಮೂಡಿಸಿದರೆ ಭವಿಷ್ಯದಲ್ಲಿ ಪರಿಸರ ಸಂರಕ್ಷಣೆ ಸಾಧ್ಯವಾಗುತ್ತದೆ ಎಂದರು.
ಪರಿಸರ ಸಂರಕ್ಷಣೆ ಮತ್ತು ಪರಿಸರ ಜಾಗತಿ ಆಂದೋಲನದ ಕುರಿತು ಇಕೋ-ಕ್ಲಬ್ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮ ಕುಮಾರ್, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ ಬಿ.ಸಿ.ದೊಡ್ಡೇಗೌಡ, ಕ್ರೆಸೆಂಟ್ ಶಾಲೆಯ ಪ್ರಭಾರ ಪ್ರಾಂಶುಪಾಲರಾದ ಸುಲ್ಹತ್, ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಸಂಸ್ಥೆಯ ಪ್ರಮುಖ ತರಬೇತುದಾರರಾದ ಕೆ.ಯು.ರಂಜಿತ್,ಮೈಥಿಲಿರಾವ್, ಸಂಸ್ಥೆಯ ಜಿಲ್ಲಾ ಸಂಘಟಕಿ ಯು.ಸಿ. ದಮಯಂತಿ, ಸಿ.ಆರ್.ಪಿ.ಗಳಾದ ಸಿ.ಡಿ.ಶ್ರುತಿ ಶ್ರೀ, ಕಲ್ಪನ ಇದ್ದರು.
ಚಿತ್ರಗಳು: ಸುಮಾರು 160 ಕ್ಕಿಂತಲೂ ಹೆಚ್ಚಿನ ಮಕ್ಕಳು ಚಿತ್ರಕಲೆ ಸ್ಪರ್ಧೆ, 30 ಮಕ್ಕಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮಕ್ಕಳ ಪರಿಸರ ಜಾಗೃತಿ ಮೂಡಿಸುವ ಚಿತ್ರ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಅಂಗನವಾಡಿ ಮಕ್ಕಳು, ಎಲ್.ಕೆ.ಜಿ. ಮತ್ತು ಯು.ಕೆ.ಜಿ.ಮಕ್ಕಳು ಉತ್ಸಾಹದಿಂದ ಪಾಲ್ಗೊಂಡರು.
ಫೋಟೋ 2 ಎಂಡಿಕೆ 07 ; ಚಿತ್ರಕಲೆ ಸ್ಪರ್ಧೆ