* ತಾಲೂಕು ಪಂಚಾಯಿತಿ ಕಾರ್ಯನಿರ್ವಾಣಾಧಿಕಾರಿ ಡಿ.ಬಿ ಸುನಿಲ್ ಕುಮಾರ್ ಮನವಿ
ಪ್ರತಿನಿಧಿ ವರದಿ ಪಿರಿಯಾಪಟ್ಟಣ
ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ವತಿಯಿಂದ ಪ್ರತಿಯೊಬ್ಬರೂ ಕಡ್ಡಾಯ ಮತದಾನ ಮಾಡಲು ಜಾಗೃತಿ ಮೂಡಿಸುವ ಉದ್ದೇಶದಿಂದ ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮವನ್ನು ವಿಶೇಷವಾಗಿ ಹಮ್ಮಿಕೊಳ್ಳಾಲಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಿ.ಬಿ. ಸುನೀಲ್ ಕುಮಾರ್ ತಿಳಿಸಿದರು.
ತಾಲೂಕು ಸ್ವೀಪ್ ಸಮಿತಿ ವತಿಯಿಂದ ತಾಲೂಕು ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ ವಿಷಯ ಕುರಿತು ಮಾತನಾಡಿದರು.
ಏ.26 ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾರರಲ್ಲಿ ಜಾಗೃತಿ ಮೂಡಿಸಲು ಅಗತ್ಯ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುವಂತೆ ತಾಲೂಕಿನ 34 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಿಡಿಒ ಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಮತಗಟ್ಟೆಗಳಲ್ಲಿ ಮೂಲ ಸೌಲಭ್ಯಗಳು ಇರುವುದನ್ನು ಖಚಿತ ಪಡಿಸಿಕೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಿಡಿಒಗಳ ನೇತೃತ್ವದಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ, ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮವನ್ನು ಏ.21 ರಂದು ಎಲ್ಲ ಮತಗಟ್ಟೆಗಳಲ್ಲಿ ರಾಷ್ಟ್ರೀಯ ಹಬ್ಬ ಮಾದರಿಯಲ್ಲಿ ಹಮ್ಮಿಕೊಳ್ಳುವಂತೆ ತಿಳಿಸಲಾಗಿದೆ ಎಂದು ಹೇಳಿದರು.
ಏ. 26 ಮತದಾನದ ದಿನ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಚುನಾವಣಾ ಆಯೋಗದ ಸೂಚನೆಯಂತೆ ಗಂಟೆಗೊಮ್ಮೆ ಮತದಾನ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.
ಸಭೆಯಲ್ಲಿ ಮತದಾನ ಜಾಗೃತಿ ಪೋಸ್ಟರ್ ಗಳನ್ನು ಬಿಡುಗಡೆಗೊಳಿಸಲಾಯಿತು. ಬಳಿಕ ತಾಲೂಕು ಪಂಚಾಯಿತಿ ಆವರಣದಿಂದ ಸಾರಿಗೆ ಬಸ್ ನಿಲ್ದಾಣದವರೆಗೆ ಪಿಡಿಒಗಳು, ಬಿಎಲ್ಗಒಳ ಸಮ್ಮುಖದಲ್ಲಿ ಜಾಥಾ ನಡೆಸಿ ಸಾರ್ವಜನಿಕರಿಗೆ ಕಡ್ಡಾಯ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.
ಟಿಪಿಒ ವಸಂತಲಕ್ಷ್ಮೀ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಜಿ.ಸಿ ಮಹದೇವ್, ಪುರಸಭೆ ಹೆಲ್ತ್ ಇನ್ಸ್ಪೆಕ್ಟರ್ ಮೋಹನ್ ಕುಮಾರ್, ಸಾರಿಗೆ ಸಂಚಾರ ನಿಯಂತ್ರಕ ಶ್ರೀಧರ್ ಇದ್ದರು.