ಪ್ರತಿನಿಧಿ ವರದಿ ಹಾಸನ
ಪಶ್ಚಿಮ ಘಟ್ಟ ಹಾಗೂ ಆನೆಗಳು ವಾಸ ಮಾಡುವ ಪ್ರದೇಶಗಳಲ್ಲಿ ನಡೆಯುತ್ತಿರುವ ಗಣಿಗಾರಿಕೆ ನಿಷೇಧಿಸುವಂತೆ ಆಗ್ರಹಿಸಿ ಮುಂದಿನ ಕೆಲ ದಿನಗಳಲ್ಲಿ ಪಾದಯಾತ್ರೆ ಮೂಲಕ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪಶ್ಚಿಮ ಘಟ್ಟ ಉಳಿಸಿ ಜಂಟಿ ಹೋರಾಟ ಸಮಿತಿಯ ಪುಟ್ಟೇಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಘಟ್ಟಕ್ಕೆ ಹೊಂದಿಕೊಂಡಂತೆ ಇರುವ ಜಿಲ್ಲೆಯ ಮಲೆನಾಡು ಭಾಗವಾದ ಸಕಲೇಶಪುರ ಮತ್ತು ಆಲೂರು ತಾಲೂಕಿನಲ್ಲಿ ಹಲವು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ. ಆದರೆ ಸಕಲೇಶಪುರ ತಾಲೂಕಿನ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೋಟೆ ಬೆಟ್ಟದ ರೋಡಿಕ್ ಕಾಫಿ ಎಸ್ಟೇಟ್ ವ್ಯಾಪ್ತಿಯ 12 ಎಕರೆ ಪ್ರದೇಶದಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆಯನ್ನು ಮಾಡುತ್ತಿದ್ದಾರೆ. ಇದಕ್ಕೆ ಅರಣ್ಯ ಇಲಾಖೆಯಿಂದಲೂ ಎನ್ಒಸಿ ದೊರೆತಿದ್ದು, ವಿದ್ಯುತ್ ಸಂಪರ್ಕವನ್ನು ಸಹ ಒದಗಿಸಲಾಗಿದೆ ಎಂದು ಆರೋಪಿಸಿದರು.
ಈ ಹಿಂದೆ ಇದೇ ಪ್ರದೇಶದಲ್ಲಿ 12ಕ್ಕೂ ಹೆಚ್ಚು ಗಣಿಗಾರಿಕೆಯನ್ನು ಪಶ್ಚಿಮಘಟ್ಟ ವಲಯ ಇರುವ ಕಾರಣ ಸ್ಥಗಿತಗೊಳಿಸಲಾಗಿದೆ. ಆದರೆ ಹೊಸಕೋಟೆ ಬೆಟ್ಟದ ಸಮೀಪ ಮುಂದಿನ 30 ವರ್ಷದವರೆಗೂ ಗಣಿಗಾರಿಕೆಗೆ ಅವಕಾಶ ನೀಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಇಲ್ಲಿನ ಗಣಿಗಾರಿಕೆಯನ್ನು ಸ್ಥಗಿತಗೊಳಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೂ ಮನವಿ ಸಲ್ಲಿಸಿದರು ಯಾವುದೇ ಕ್ರಮ ಕೈಗೊಂಡಿಲ್ಲ. ಇಂತಹ ಪ್ರದೇಶದಲ್ಲಿ ಗಣಿಗಾರಿಕೆಯನ್ನು ನಿಷೇಧ ಮಾಡದಿದ್ದ ಪಕ್ಷದಲ್ಲಿ ಕೇರಳಾದ ವಯನಾಡು ಪ್ರದೇಶದಲ್ಲಿ ಆದಂತಹ ಅನಾಹುತ ಸಂಭವಿಸುವ ಕಾಲ ದೂರ ಇಲ್ಲ ಎಂದು ಎಚ್ಚರಿಸಿದರು.
4000 ಅಡಿಗಳಷ್ಟು ಎತ್ತರದ ಪ್ರದೇಶದಲ್ಲಿ ಈ ಗಣಿಗಾರಿಕೆ ನಡೆಯುತ್ತಿದ್ದು ಮಲೆನಾಡಿಗೆ ತುಂಬ ತೊಂದರೆಯಾಗುವ ಸನ್ನಿವೇಶ ದೂರವಿಲ್ಲ. ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಬೆದರಿಕೆ ಹಾಕುತ್ತಿದ್ದಾರೆ. 2007ರಲ್ಲಿ ಗಣಿಗಾರಿಕೆ ಸ್ಥಗಿತಗೊಂಡಿತ್ತು, ಇದೀಗ ಮತ್ತೊಮ್ಮೆ ಪ್ರಾರಂಭವಾಗಿದ್ದು, ಕೂಡಲೇ ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಒತ್ತಾಯಿಸಿದರು.
ಹೇಮಂತ್ ಕುಮಾರ್, ಪುಟ್ಟಸ್ವಾಮಿಗೌಡ, ರಮೇಶ್ ಇತರರಿದ್ದರು