ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರತೊಡಗಿದೆ. ಇದರ ಮಧ್ಯೆ ಬಿಜೆಪಿ ಹೈಕಮಾಂಡ್, ಕೆಆರ್ಪಿಪಿ ಸಂಸ್ಥಾಪಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಮರಳಿ ಬಿಜೆಪಿಗೆ ಸೇರಿಸಿಕೊಳ್ಳಲು ಗ್ರೀನ್ ಸಿಗ್ನಲ್ ನೀಡಿದೆ. ಇತ್ತೀಚೆಗಷ್ಟೇ ಈ ಬಗ್ಗೆ ಚರ್ಚಿಸಲು ಹೈಕಮಾಂಡ್, ಶ್ರೀರಾಮುಲು ಅವರನ್ನು ಕರೆಯಿಸಿಕೊಂಡು ಮಾತುಕತೆ ನಡೆಸಿತ್ತು. ಬಳಿಕ ಖುದ್ದು ಅಮಿತ್ ಶಾ, ಜನಾದರ್ನ ರೆಡ್ಡಿಯನ್ನು ದೆಹಲಿಗೆ ಕರೆಯಿಸಿಕೊಂಡು ಅಂತಿಮ ಸುತ್ತಿನ ಮಾತುಕತೆ ನಡೆಸಿದ್ದರು. ಇದೀಗ ರೆಡ್ಡಿಯನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಮುಹೂರ್ತ ಸಹ ಫಿಕ್ಸ್ ಆಗಿದೆ. ನಾಳೆ ಜನಾರ್ದನ ರೆಡ್ಡಿ ಬಿಜೆಪಿ ಸೇರಲಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ತಮ್ಮ ಬೆಂಬಲಿಗರಿಗೆ ತಿಳಿಸಲು ಇಂದು ಸಂಜೆ ಮಹತ್ವದ ಸಭೆ ಕರೆದಿದ್ದಾರೆ.
ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾದರ್ನ ರೆಡ್ಡಿ ಪಕ್ಷದ ರಾಜ್ಯ ಪದಾಧಿಕಾರಿಗಳ ಸಭೆಯನ್ನು ಇಂದು ಸಂಜೆ ಬೆಂಗಳೂರಿನಲ್ಲಿ ಕರೆದಿದ್ದು, ಬಿಜೆಪಿ ಸೇರ್ಪಡೆ ಬಗ್ಗೆ ತಿಳಿಸಲಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಪಾರಿಜಾತ ಅಪಾರ್ಟ್ಮೆಂಟ್ ನಲ್ಲಿ ಕೆಆರ್ಪಿಪಿ ಪಕ್ಷದ ಮುಖಂಡರ ಜತೆ ಸಭೆ ನಡೆಯಲಿದ್ದು, ಸಭೆ ಬಳಿಕ ಸಂಜೆ 5 ಗಂಟೆಗೆ ರೆಡ್ಡಿ ತಮ್ಮ ನಿರ್ಧಾರವನ್ನು ಬಹಿರಂಗಪಡಿಸಲಿದ್ದಾರೆ.