ಬೆಂಗಳೂರು, ಡಿಸೆಂಬರ್ 20: ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಬಿಜೆಪಿ ಜತೆ ಮಾತುಕತೆ ನಡೆಸಲು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ಡಿ ಕುಮಾರಸ್ವಾಮಿ ಇಂದು (ಬುಧವಾರ) ಸಂಜೆ ದೆಹಲಿಗೆ ತೆರಳಲಿದ್ದಾರೆ. 5 ರಿಂದ 7 ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಕುಮಾರಸ್ವಾಮಿ ಒಲವು ಹೊಂದಿದ್ದಾರೆ ಎನ್ನಲಾಗಿದೆ.
ಏಳು ಕ್ಷೇತ್ರಗಳನ್ನು ಜಡಿಎಸ್ಗೆ ನೀಡಬೇಕೆಂದು ಕುಮಾರಸ್ವಾಮಿ ಬೇಡಿಕೆ ಇಡುವ ಸಾಧ್ಯತೆ ಇದೆ. ಕನಿಷ್ಠ 5 ಕ್ಷೇತ್ರಕ್ಕೆ ಪಟ್ಟುಹಿಡಿಯುವ ಸಾಧ್ಯತೆ ಇದೆ. ಮಂಡ್ಯ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸೇರಿ ಏಳು ಕ್ಷೇತ್ರದ ಮೇಲೆ ಜೆಡಿಎಸ್ ಒಲವು ಹೊಂದಿದೆ ಎನ್ನಲಾಗಿದೆ.
2019ರಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 28 ಕ್ಷೇತ್ರಗಳ ಪೈಕಿ 25ರಲ್ಲಿ ಗೆಲುವು ಸಾಧಿಸಿತ್ತು. ಆದರೆ ಈ ಬಾರಿ ಗೆದ್ದೇ ಗೆಲ್ಲುವ 15ರಿಂದ 18 ಕ್ಷೇತ್ರಗಳ ಬಗ್ಗೆ ಮಾತ್ರ ಬಿಜೆಪಿ ಹೆಚ್ಚಿನ ಒತ್ತು ನೀಡಲು ತೀರ್ಮಾನಿಸಿದೆ ಎನ್ನಲಾಗಿದೆ. ಇನ್ನುಳಿದ ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟು ಕೊಡುವ ಲೆಕ್ಕಾಚಾರಗಳು ನಡೆದಿವೆ ಎಂದು ಮೂಲಗಳು ಈ ಹಿಂದೆ ತಿಳಿಸಿದ್ದವು.
ಈ ಮಧ್ಯೆ, ಖುದ್ದು ಕುಮಾರಸ್ವಾಮಿ ಅವರನ್ನೇ ಲೋಕಸಭಾ ಕಣಕ್ಕಿಳಿಸಿ ಕೇಂದ್ರ ಸಚಿವ ಮಾಡುವ ಬಗ್ಗೆ ಬಿಜೆಪಿ ಆಫರ್ ನೀಡಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ, ಈ ಕುರಿತು ಬಿಜೆಪಿ ಆಗಲೀ ಜೆಡಿಎಸ್ ಆಗಲೀ ಈವರೆಗೆ ಅಧಿಕೃತ ಹೇಳಿಕೆ ನೀಡಿಲ್ಲ.