ಸೈನಿಕರು ದೇಶದ ಹೆಮ್ಮೆ. ದೇಶದ ಒಳಗೆ ಪ್ರತಿಯೊಬ್ಬ ನಾಗರಿಕರೂ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಎಂದರೆ ಅದಕ್ಕೆ ಮುಖ್ಯ ಕಾರಣ ಸೈನಿಕರು. ದೇಶ ರಕ್ಷಣೆಗಾಗಿ ಅದೆಷ್ಟೋ ಸೈನಿಕರು ತ್ಯಾಗ ಮತ್ತು ಬಲಿದಾನವನ್ನು ಮಾಡಿದ್ದಾರೆ. ಹೀಗೆ ಭಾರತೀಯ ಸೇನೆ, ಭಾರತೀಯ ವಾಯುಪಡೆ ಮತ್ತು ಭಾರತೀಯ ನೌಕಾಪಡೆಯ ಸೈನಿಕರ ಶೌರ್ಯ, ತ್ಯಾಗ ಮತ್ತು ಸಮರ್ಪಣೆಯನ್ನು ಗೌರವಿಸಲು ಹಾಗೂ ವೀರ ಹುತಾತ್ಮ ಯೋಧರ ಸ್ಮರಣಾರ್ಥವಾಗಿ ಭಾರತದಲ್ಲಿ ಪ್ರತಿ ವರ್ಷ ಡಿಸೆಂಬರ್ 07 ರಂದು ಸಶಸ್ತ್ರ ಪಡೆಗಳ ಧ್ವಜ ದಿನವನ್ನು ಆಚರಿಸಲಾಗುತ್ತದೆ. ಮತ್ತು ಈ ದಿನದಂದು ಮುಖ್ಯವಾಗಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದಂತಹ ನಿವೃತ್ತ ಸೈನಿಕರ, ಹುತಾತ್ಮ ಯೋಧರ ಮತ್ತು ಸೇನಾ ಸಿಬ್ಬಂದಿಯ ಕುಟುಂಬಗಳ ಕಲ್ಯಾಣಕ್ಕಾಗಿ ಸಾರ್ವಜನಿಕರಿಗೆ ಧ್ವಜಗಳನ್ನು ವಿತರಿಸುವ ಮೂಲಕ ದೇಣಿಗೆಯನ್ನು ಸಂಗ್ರಹಿಸಲಾಗುತ್ತದೆ.
ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಇತಿಹಾಸ:
ಭಾರತೀಯ ಸಶಸ್ತ್ರ ಪಡೆಗಳ ಧ್ವಜ ದಿನವನ್ನು ಆಚರಿಸುವುದರ ಹಿಂದೆ ವಿಶೇಷ ಕಾರಣವಿದೆ. ಭಾರತವು ಸ್ವಾತಂತ್ರ್ಯ ಪಡೆದ ಎರಡು ವರ್ಷಗಳ ನಂತರ, ಅಂದರೆ 28 ಆಗಸ್ಟ್ 1949 ರಂದು, ಭಾರತ ಸರ್ಕಾರವು ಭಾರತೀಯ ಸೇನೆಯ ಸೈನಿಕರ ಕಲ್ಯಾಣಕ್ಕಾಗಿ ಸಮಿತಿಯೊಂದನ್ನು ರಚಿಸಿತು. ಈ ಸಮಿತಿಯು ಡಿಸೆಂಬರ್ 07ರಂದು ಸಶಸ್ತ್ರ ಪಡೆಗಳ ಧ್ವಜ ದಿನವನ್ನು ಆಚರಿಸುವ ವಿಶಿಷ್ಟ ಪರಿಕಲ್ಪನೆಯನ್ನು ಜಾರಿಗೆ ತಂದಿತು. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದಂತಹ ಯೋಧರ ಕಲ್ಯಾಣಕ್ಕಾಗಿ ನಿಧಿ ಸಂಗ್ರಹಿಸಲು ಈ ವಿಶೇಷ ದಿನಾಚರಣೆಯನ್ನು ಆಚರಿಸಲು ಪ್ರಾರಂಭಿಸಲಾಯಿತು. ಪ್ರತಿವರ್ಷ ಈ ವಿಶೇಷ ದಿನದಂದು ಸಾರ್ವಜನಿಕರಿಗೆ ಧ್ವಜಗಳನ್ನು ಹಂಚುವ ಮೂಲಕ ದೇಣಿಗೆಯನ್ನು ಸಂಗ್ರಹಿಸಲಾಗುತ್ತದೆ.
ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯನ್ನು ಏಕೆ ಆಚರಿಸಲಾಗುತ್ತದೆ ಮತ್ತು ಈ ವಿಶೇಷ ದಿನದ ಮಹತ್ವ:
ಭಾರತೀಯ ಭೂ ಸೇನೆ, ಭಾರತೀಯ ವಾಯುಪಡೆ ಮತ್ತು ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿದ ಯೋಧರ ಶೌರ್ಯ, ತ್ಯಾಗ ಮತ್ತು ಸಮರ್ಪಣೆಯನ್ನು ಗೌರವಿಸಲು ಮತ್ತು ಯೋಧರು ಹಾಗೂ ಅವರ ಕುಟುಂಬದ ಕಲ್ಯಾಣಕ್ಕಾಗಿ ಸಾರ್ವಜನಿಕರಿಂದ ನಿಧಿ ಸಂಗ್ರಹಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಯುದ್ಧದ ಸಮಯದಲ್ಲಿ ಮಡಿದ ಯೋಧರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲು, ಸೇನಾ ಸಿಬ್ಬಂದಿ ಮತ್ತು ಅವರ ಕುಟುಂಬಗಳ ಕಲ್ಯಾಣಕ್ಕಾಗಿ ಸಹಕಾರ ನೀಡಲು ಮತ್ತು ನಿವೃತ್ತ ಯೋಧರ ಕಲ್ಯಾಣ ಹೀಗೆ ಈ ಮೂರು ಮುಖ್ಯ ಉದ್ದೇಶಗಳಿಗಾಗಿ ದೇಣಿಗೆಯನ್ನು ಸಂಗ್ರಹಿಸಲಾಗುತ್ತದೆ. ಮತ್ತು ಸಶಸ್ತ್ರ ಪಡೆಗಳ ಧ್ವಜ ದಿನದಂದು ಕೆಂಪು, ಕಡು ನೀಲಿ ಮತ್ತು ತಿಳಿ ನೀಲಿ ಬಣ್ಣದ ಸೇನಾ ಧ್ವಜವನ್ನು ಸಾರ್ವಜನಿಕರಿಗೆ ವಿತರಿಸುವ ಮೂಲಕ ಸೈನಿಕರು ಮತ್ತು ಅವರ ಕುಟುಂಬದ ಕಲ್ಯಾಣಕ್ಕಾಗಿ ದೇಣಿಗೆಯನ್ನು ಸಂಗ್ರಹಿಸಲಾಗುತ್ತದೆ.
ಅಲ್ಲದೆ ಈ ದಿನದಂದು ಭಾರತೀಯ ಸೇನೆ, ಭಾರತೀಯ ವಾಯುಪಡೆ ಮತ್ತು ಭಾರತೀಯ ನೌಕಾಪಡೆ ಸೇರಿದಂತೆ ಭಾರತೀಯ ಸಶಸ್ತ್ರ ಪಡೆಗಳ ಎಲ್ಲಾ ಘಟಕಗಳು ತಮ್ಮ ಸಾಧನೆ ಮತ್ತು ಪ್ರಾಬಲ್ಯವನ್ನು ಎತ್ತಿ ಹಿಡಿಯಲು ವಿವಿಧ ಚಟುವಟಿಕೆಗಳನ್ನು ಸಹ ಆಯೋಜಿಸುತ್ತವೆ. ಹಾಗೂ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಮತ್ತು ದೇಶದ ಸಶಸ್ತ್ರ ಪಡೆಗಳ ಸೇವಾ ಕೊಡುಗೆಯನ್ನು ಗುರುತಿಸಲು ಈ ದಿನ ಹಲವಾರು ಧೇಶಭಕ್ತಿ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ.