ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡು ನರಳುತ್ತಿದ್ದ ವ್ಯಕ್ತಿಯನ್ನು ಮಾಜಿ ಶಾಸಕ ಆರ್.ನರೇಂದ್ರ ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ತಾಲೂಕಿನ ಎಲ್ಲೇಮಾಳ ಗ್ರಾಮದ ಆದಿಜಾಂಬವ ಸಮುದಾಯದ ಮುಖಂಡ ಮಹದೇವ ಅವರು ಹನೂರು ಪಟ್ಟಣಕ್ಕೆ ಕಾರ್ಯನಿಮಿತ್ತ ಆಗಮಿಸಿ ವಾಪಸ್ ಎಲ್ಲೇಮಾಳ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಎಲ್ಲೇಮಾಳ ಮುಖ್ಯ ರಸ್ತೆಯಲ್ಲಿರುವ ಕಣಿವೆ ಆಂಜನೇಯ ದೇವಾಲಯದ ಸಮೀಪ ಕೋತಿಯೊಂದು ಅಡ್ಡ ಬಂದಿದೆ. ಇದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಬಿದ್ದು ಗಾಯಗೊಂಡಿದ್ದಾರೆ.
ರಸ್ತೆಯಲ್ಲಿ ಹೋಗುತ್ತಿದ್ದ ವಾಹನ ಸವಾರರು ಅಪಘಾತದಲ್ಲಿ ವ್ಯಕ್ತಿ ಗಾಯಗೊಂಡಿರುವುದನ್ನು ನೋಡಿ 108 ತುರ್ತು ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಇದೇ ರಸ್ತೆಯ ಮೂಲಕ ಹನೂರು ಪಟ್ಟಣಕ್ಕೆ ಆಗಮಿಸುತ್ತಿದ್ದ ಮಾಜಿ ಶಾಸಕ ಆರ್ ನರೇಂದ್ರ ಅವರು ಅಪಘಾತದಲ್ಲಿ ಗಾಯಗೊಂಡಿರುವುದನ್ನು ನೋಡಿ ಅಂಬುಲೆನ್ಸ್ ಗೆ ಕಾಯದೇ ಗಾಯಗೊಂಡಿದ್ದ ಮಹದೇವರನ್ನು ಪಟ್ಟಣ ಪಂಚಾಯಿತಿ ಸದಸ್ಯ ಗಿರೀಶ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚೇತನ್ ಅವರ ಸಹಕಾರದೊಂದಿಗೆ ತಮ್ಮ ಸ್ಕಾರ್ಪಿಯೋ ವಾಹನದಲ್ಲಿಯೇ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಚಿಕಿತ್ಸೆಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲು ಕಳುಹಿಸಿಕೊಟ್ಟರು.
ಸುರಕ್ಷತೆಗಾಗಿ ಹೆಲ್ಮೆಟ್ ಬಳಸಿ: ಪ್ರತಿಯೊಬ್ಬ ವಾಹನ ಸವಾರರು ತಮ್ಮ ಆರೋಗ್ಯದ ದೃಷ್ಟಿಯಿಂದ ಸಂಚಾರ ಮಾಡುವಾಗ ಕಡ್ಡಾಯವಾಗಿ ಹೆಲ್ಮೆಟ್ ಬಳಸಿ ತಮ್ಮ ಅಮೂಲ್ಯವಾದ ಜೀವವನ್ನು ಕಾಪಾಡಿಕೊಳ್ಳಬೇಕು. ಸರ್ಕಾರ ವಾಹನ ಸವಾರರ ಪ್ರಾಣ ರಕ್ಷಣೆಯ ದೃಷ್ಟಿಯಿಂದ ಹಲವಾರು ಸಂಚಾರಿ ನಿಯಮಗಳನ್ನು ಅನುಷ್ಠಾನಗೊಳಿಸಿದೆ ಪ್ರತಿಯೊಬ್ಬರು ಸರ್ಕಾರದ ಮಾರ್ಗ ಸೂಚಿಗಳನ್ನು ಅನುಸರಿಸುವ ಮೂಲಕ ನಿಯಮ ಪಾಲನೆ ಮಾಡಬೇಕು ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು.