ಮೈಸೂರು: ಸಿದ್ದರಾಮಯ್ಯ ಅವರು ಚುನಾವಣೆಗೋಸ್ಕರ ಕುಕ್ಕರ್ ಕೊಟ್ಟಿದ್ದಾರೆ ಅಂತ ನಾನು ಎಲ್ಲೂ ಹೇಳಿಲ್ಲ. ನಾನು ಹೇಳಿರುವುದೇ ಒಂದು, ಮಾಧ್ಯಮಗಳು ತೋರಿಸುತ್ತಿರುವುದೇ ಇನ್ನೊಂದು ಎಂದು ಮಾಜಿ ಶಾಸಕ ಹಾಗೂ ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ 26 ರಂದು ಮಡಿವಾಳ ಸಂಘದ ರಾಜ್ಯಾಧ್ಯಕ್ಷ ನಂಜಪ್ಪ ಅವರ ಹುಟ್ಟುಹಬ್ಬದ ಪ್ರಯಕ್ತ ಕುಕ್ಕರ್ ಹಾಗೂ ಐರನ್ ಬಾಕ್ಸ್ ವಿತರಣೆ ಮಾಡಲಾಗಿದೆ.
ನನ್ನ ತಂದೆ ಸ್ವತಃ ಅವರ ಕೈಯಿಂದ ಕೂಡ ಇದನ್ನು ಕೊಟ್ಟಿಲ್ಲ. ಇದರ ಬಗ್ಗೆಯಷ್ಟೆ ನಾನು ಮಾತನಾಡಿದ್ದು, ಆದರೆ ಮಾಧ್ಯಮಗಳಲ್ಲಿ ಚುನಾವಣೆಗಾಗಿ ಹಂಚಿಕೆ ಮಾಡಲಾಗಿದೆ ಎಂದು ಬರುತ್ತಿದೆ. ಆ ಕಾರ್ಯಕ್ರಮದ ವೀಡಿಯೋ, ಪೋಟೋಗಳೂ ಇವೆ. ನಮ್ಮ ತಂದೆ ಅವರ ಕೈಯಿಂದ ದುಡ್ಡು ಕೊಟ್ಟು ಎಲ್ಲಿಯೂ ಹಂಚಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ನಾನು ಮಾತನಾಡುವಾಗ ಸರಿಯಾಗಿ ಮಾತನಾಡದೇ ಇರಬಹುದು. ನನ್ನ ಹೇಳಿಕೆ ಆ ರೀತಿಯ ಅರ್ಥವನ್ನೂ ಕೊಟ್ಟಿರಬಹುದು. ಆದರೆ, ಈ ಘಟನೆ ನಡೆದಿರೋದು ಚುನಾವಣೆ ನೀತಿ ಸಂಹಿತೆಗೂ ಮುಂಚೆ ಎಂದರು.