ಬೆಂಗಳೂರು : ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಮಂಗಳವಾರ ಬೆಂಗಳೂರು , ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸೈಯದ್ ಖೈಲ್, ಮೂಲತಃ ಕೇರಳ ಇಡುಕ್ಕಿ ನಿವಾಸಿ, ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬಿಜು ಅಬ್ರಹಾಂ ಹಾಗೂ ಅತ್ತಾವರ ಗ್ರಾಮದ ನಬೀದ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಅಧಿಕಾರಿಗಳು ಉತ್ತರ ಕನ್ನಡ ಜಿಲ್ಲೆಯ ಅಂಕೋಲದಲ್ಲಿ ನಾಸಿರ್ ಖಾನ್ ಎಂಬಾತನಿಗಾಗಿ ಹುಡುಕಾಟ ನಡೆಸಿದರು. ಆರೋಪಿಗಳ ಬಗ್ಗೆ ಪೂರಕ ದಾಖಲೆಗಳನ್ನು ಸಂಗ್ರಹಿಸಿದ್ದ ಅಧಿಕಾರಿಗಳು, ಎರಡು ತಂಡಗಳಾಗಿ ಮಂಗಳೂರು ಮತ್ತು ಅಂಕೋಲಾಕ್ಕೆ ಭೇಟಿ ನೀಡಿದ್ದರು.
ಎನ್ಐಎ ಅಧಿಕಾರಿಗಳು ಮಂಗಳವಾರ ಏಕಕಾಲಕ್ಕೆ ಕರ್ನಾಟಕ, ತಮಿಳುನಾಡು, ತೆಲಂಗಾಣ, ಪಂಜಾಬ್, ಗುಜರಾತ್ ಮತ್ತು ಪಶ್ಚಿಮ ಬಂಗಾಳದ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದರು. ಈ ವೇಳೆ 25 ಮೊಬೈಲ್ ಫೋನ್ಗಳು, 6 ಲ್ಯಾಪ್ಟಾಪ್ಗಳು ಮತ್ತು 4 ಹಾರ್ಡ್ ಡಿಸ್ಕ್ಗಳು, ವಿವಿಧ ದಾಖಲೆಗಳು ಮತ್ತು ನಗದು ವಶಪಡಿಸಿಕೊಂಡಿದ್ದಾರೆ.