ಪ್ರತಿನಿಧಿ ವರದಿ ಚಾಮರಾಜನಗರ
ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಜಿಲ್ಲಾಘಟಕದಿಂದ ಜು.10 ರಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಉಪಾಧ್ಯಕ್ಷ ಎ.ಎಂ.ಮಹೇಶ್ ಪ್ರಭು ತಿಳಿಸಿದರು.
ಹೊಸದಾಗಿ ಕೊಳವೆಬಾವಿ ಕೊರೆಸಿರುವ ರೈತರು ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಪ್ರಸ್ತುತ 2 ರಿಂದ 3 ಲಕ್ಷ ರೂ.ವೆಚ್ಚಮಾಡಬೇಕು. ಇದರಿಂದ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಿಂದೆ ವಿದ್ಯುತ್ ಸಂಪರ್ಕಕ್ಕೆ ನಿಗಧಿ ಮಾಡಿದ್ದ 24 ಸಾವಿರ ರೂ.ಪಾವತಿಸಿ ಸಂಪರ್ಕ ಪಡೆಯುವ ಆದೇಶ ಜಾರಿ ಮಾಡಬೇಕು. ಎಲ್ಲ ಬೆಳೆಗಳಿಗೂ ಪಿಎಂ ಫಸಲ್ ಬಿಮಾ ಯೋಜನೆ ಜಾರಿ ಮಾಡಬೇಕು. ಎಲ್ಲ ಬೆಳೆಗಳಿಗೂ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು. ರಾಜ್ಯದ ಎಲ್ಲ ಹೋಬಳಿ ಕೇಂದ್ರಗಳಲ್ಲೂ ಖರೀದಿ ಕೇಂದ್ರ ತೆರೆಯಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಕಾಡು ಪ್ರಾಣಿಗಳಿಂದ ಉಂಟಾಗುವ ಬೆಳೆನಷ್ಟಕ್ಕೆ ಸರ್ಕಾರ ವೈಜ್ಞಾನಿಕ ಪರಿಹಾರ ನೀಡಬೇಕು. ಕಾಡು ಪ್ರಾಣಿಗಳ ಹಾವಳಿ ತಡೆಯಲು ಅರಣ್ಯ ಇಲಾಖೆಯವರು ಅರಣ್ಯ ದಂಚಿನ ಜಮೀನುಗಳಲ್ಲಿ ರೈಲು ಕಂಬಿಗಳನ್ನು ಅಳವಡಿಸಬೇಕು ಎನ್ನುವ ಹಕ್ಕೊತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸಲಿದ್ದೇವೆ. ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಅನಿರ್ದಿಷ್ಟಾವಧಿ ಧರಣಿಯಲ್ಲಿ ಭಾಗವಹಿಸಿ ಸರ್ಕಾರಕ್ಕೆ ನಮ್ಮ ಶಕ್ತಿ ಪ್ರದರ್ಶನ ತೋರಬೇಕಿದೆ ಎಂದು ಮನವಿ ಮಾಡಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಶಿವಪುರ ಮಹಾದೇವಪ್ಪ, ಮುಖಂಡರಾದ ಹೆಬ್ಬಸೂರು ಬಸವಣ್ಣ, ಜ್ಯೋತಿಗೌಡನಪುರ ಸಿದ್ದರಾಜು, ಯುವಘಟಕದ ಅಧ್ಯಕ್ಷ ಯಶವಂತ್, ಮರಿಯಾಲ ಮಹೇಶ್, ತಾಲೂಕು ಅಧ್ಯಕ್ಷ ಮೂಡ್ನಾಕೂಡು ಪ್ರಕಾಶ್ ಇದ್ದರು.
6ಸಿಎಚ್ಎನ್.3:
ಚಿತ್ರವಿದೆ