ಮಡಿಕೇರಿ: ರಾಜ್ಯದಲ್ಲಿ ದುರದೃಷ್ಟವಶಾತ್ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. 8 ತಿಂಗಳಲ್ಲಿ 8 ಮೀಟರ್ ರಸ್ತೆ ಕೂಡ ಮಾಡಿಕೊಡಲು ಸಾಧ್ಯವಾಗಿಲ್ಲ. ರಾಜ್ಯದಲ್ಲಿ 80 ಲಕ್ಷ ರೈತಾಪಿ ವರ್ಗವಿದೆ. ಪರ ಪರಿಸ್ಥಿತಿಯಿಂದ ರೈತರು ಪರಿತಪಿಸುತ್ತಿದ್ದಾರೆ. ಆದ್ದರಿಂದ ರು.10 ಸಾವಿರ ಕೋಟಿ ಬಿಡುಗಡೆ ಮಾಡುವಂತೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಆಗ್ರಹಿಸಿದ್ದಾರೆ.
ಕೊಡಗು ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣ ಹಾಗೂ ಜಿಲ್ಲಾ ಕಾರ್ಯಕಾರಿಣಿ ಕಾರ್ಯಕ್ರಮವನ್ನು ಮಡಿಕೇರಿಯಲ್ಲಿ ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
ಬಿಜೆಪಿ ಸರ್ಕಾರದ ವಿರುದ್ಧ ಶೇ.40ರ ಕಮಿಷನ್ ಸರ್ಕಾರ ಎಂದು ಆರೋಪ ಮಾಡುತ್ತಿದ್ದರು. ಆದರೆ ಕಾಂಗ್ರೆಸ್ ಈಗ ಅದಕ್ಕಿಂತ ಹೆಚ್ಚು ಕಮಿಷನ್ ಪಡೆಯುತ್ತಿದೆ ಎಂದು ಕಾಂಗ್ರೆಸ್ ನ ಮುಖಂಡರೇ ಹೇಳುತ್ತಿದ್ದಾರೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಕೊಟ್ಟ ಅಕ್ಕಿ ಬಿಟ್ಟರೆ ರಾಜ್ಯ ಸರ್ಕಾರ ಒಂದು ಕಾಳು ಅಕ್ಕಿ ಕೂಡ ಕೊಟ್ಟಿಲ್ಲ. ಕೇಂದ್ರದ ಅಕ್ಕಿಯನ್ನು ನೀಡುವ ಮೂಲಕ ನಾವು ಕೊಟ್ಟ ಅಕ್ಕಿ ಎಂದು ಹೇಳುವ ಮೂಲಕ ಜನರ ಹಾದಿ ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಕಿಡಿಕಾರಿದರು.