ಹನೂರು: ಜಿಲ್ಲಾ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಮರಿಸ್ವಾಮಿ ಅವರು ಕಾಡ ಅಧ್ಯಕ್ಷರಾಗಿರುವುದರಿಂದ ತೆರವಾಗುವ ಡಿಸಿಸಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಈ ಬಾರಿ ಹನೂರು ವಿಧಾನಸಭಾ ಕ್ಷೇತ್ರಕ್ಕೆ ಆದ್ಯತೆ ನೀಡಬೇಕೆಂಬ ಕೂಗು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕೇಳಿಬಂದಿದೆ.
ಇದುವರೆಗೂ ಡಿಸಿಸಿ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿರುವ ಎಲ್ಲರೂ ಗುಂಡ್ಲುಪೇಟೆ ಮತ್ತು ಚಾಮರಾಜನಗರ ವಿಧಾನಸಭಾ ಕ್ಷೇತ್ರದವರೇ ಆಗಿದ್ದಾರೆ. ಈ ನಿಟ್ಟಿನಲ್ಲಿ ಈ ಬಾರಿ ಹನೂರು ವಿಧಾನಸಭಾ ಕ್ಷೇತ್ರದ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ.
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಡಳ್ಳಿಯ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಜವಾದ್ ಅಹಮದ್ ಅವರನ್ನು ಡಿಸಿಸಿ ಜಿಲ್ಲಾಧ್ಯಕ್ಷರನ್ನಾಗಿ ಮಾಡುವಂತೆ ಹನೂರು ಕಾಂಗ್ರೆಸ್ ಕಾರ್ಯಕರ್ತರು ಬೇಡಿಕೆ ಇಟ್ಟಿದ್ದಾರೆ . ಇದಲ್ಲದೆ ಕಾಂಗ್ರೆಸ್ ಮುಖಂಡ ನಾಗೇಂದ್ರ ಸಹ ಡಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನ ಮಾಡುತ್ತಿದ್ದಾರೆ. ಪಕ್ಷದ ವರಿಷ್ಠರು ಯಾರ ಪರ ಒಲವು ತೋರಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
ಹನೂರು ವಿಧಾನಸಭಾ ಕ್ಷೇತ್ರದ ಯೂಥ್ ಕಾಂಗ್ರೆಸ್ ಅಧ್ಯಕ್ಷನಾಗಿ, ತಾಪಂ ಸದಸ್ಯನಾಗಿ ಕಾರ್ಯನಿರ್ವಹಿಸಿದ್ದೇನೆ. ಪಕ್ಷದ ವರಿಷ್ಠರು ಅವಕಾಶ ನೀಡಿದರೆ ಪಕ್ಷ ಸಂಘಟನೆಗೆ ಆದ್ಯತೆ ನೀಡುತ್ತೇನೆ.
ಬಿ.ಎನ್.ಜವಾದ್ ಅಹಮದ್ ತಾಪಂ ಮಾಜಿ ಸದಸ್ಯ