ದಾವಣಗೆರೆ: ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ವಿರುದ್ಧ ಕೇಸ್ ದಾಖಲಾಗಿದೆ. ದಾವಣಗೆರೆಯಲ್ಲಿ ನಡೆದ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಡಿ.ಕೆ ಸುರೇಶ್, ವಿನಯ್ ಕುಲಕರ್ಣಿ ವಿರುದ್ಧ ಈಶ್ವರಪ್ಪ ಕಿಡಿಕಾರಿ, ದೇಶ ದ್ರೋಹಿ ಹೇಳಿಕೆ ನೀಡಿದವರನ್ನ ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದಿದ್ದರು. ಇದು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದ್ದು, ದಾವಣಗೆರೆಯನಿಜಲಿಂಗಪ್ಪ ಬಡಾವಣೆಯ ನಿವಾಸಿ ಹನುಮಂತ ಎಂಬುವವರು ಪ್ರಾಣ ಬೆದರಿಕೆ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರು ನೀಡಿದ್ದಾರೆ.
ಪ್ರಕರಣ ದಾಖಲಾದ ಬೆನ್ನಲ್ಲೇ ಮಾಜಿ ಸಚಿವ ಕೆ. ಎಸ್.ಈಶ್ವರಪ್ಪ ಅವರಿಗೆ ದಾವಣಗೆರೆ ಬಡಾವಣೆ ಠಾಣೆಯ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಇಂದು ಬೆಳಗ್ಗೆ 8:30 ಸುಮಾರಿಗೆ ಬಡಾವಣೆ ಠಾಣೆ ಪೊಲೀಸರು ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಈಶ್ವರಪ್ಪ ನಿವಾಸಕ್ಕೆ ತೆರಳಿ ನೋಟಿಸ್ ಜಾರಿ ಮಾಡಿದ್ದು ಫೆಬ್ರವರಿ 15ರಂದು ಬೆಳಗ್ಗೆ 10:30ಕ್ಕೆ ಠಾಣೆಗೆ ಹಾಜರಾಗಲು ಸೂಚನೆ ನೀಡಲಾಗಿದೆ.