ಪ್ರತಿನಿಧಿ ವರದಿ ಕೊಳ್ಳೇಗಾಲ
ಜಿಲ್ಲಾಡಳಿತ ಭವನದ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ನಿರ್ಮಿಸದ ಹೊರತು ಸರ್ಕಾರದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಾಲೂಕು ನಾಯಕರ ಸಂಘ ಪಟ್ಟುಹಿಡಿದೆ.
ತಾಪಂ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಶಾಸಕ ಎ.ಆರ್.ಕೆ. ಅಧ್ಯಕ್ಷತೆಯಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಕರೆದಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು.
ಸಭೆಯಲ್ಲಿ ಭಾಗವಹಿಸಿದ ಜಿಪಂ ಮಾಜಿ ಸದಸ್ಯ ಕೊಪ್ಪಾಳಿ ಮಹದೇವನಾಯಕ, ಕಸಬಾ ಮನೆ ಯಜಮಾನರಾದ ಚಿಕ್ಕಮಾದನಾಯಕ, ಶಂಕರ್ ನಾಯಕ, ತಾಲೂಕು ನಾಯಕರ ಸಂಘದ ಅಧ್ಯಕ್ಷ ಪಾಳ್ಯ ಜಗದೀಶ್ ನಾಯಕ ಅವರು ಈ ಕುರಿತು ಮಾತನಾಡಿ, ಕಳೆದ 10 ವರ್ಷಗಳಿಂದಲೂ ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆಯನ್ನು ನಿರ್ಮಿಸುವಂತೆ ನಾಯಕ ಜನಾಂಗದಿಂದ ಮನವಿ ಮಾಡಲಾಗಿದೆ. ಆದರೆ, ಈ ಬಗ್ಗೆ ಯಾರೂ ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಹಾಗಾಗಿ, ಅ.17 ರಂದು ಸರ್ಕಾರದಿಂದ ನಡೆಸುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಿಂದ ದೂರ ಉಳಿಯಲು ನಮ್ಮ ಜಿಲ್ಲಾ ವಾಲ್ಮೀಕಿ ಸಮಿತಿಯವರು ತಿಳಿಸಿದ್ದು, ಕೊಳ್ಳೇಗಾಲ ತಾಲೂಕು ಸೇರಿ ಜಿಲ್ಲೆಯ 5 ತಾಲೂಕಿನಲ್ಲಿಯೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದರು.
ಇದಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರತಿಕ್ರಿಯಿಸಿ, ಅ.14 ರಂದು ಚಾ.ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಶಾಸಕ ಪುಟ್ಟರಂಗಶೆಟ್ಟಿ, ಗಣೇಶ್ ಪ್ರಸಾದ್, ಮಂಜುನಾಥ್, ಸಂಸದ ಸುನೀಲ್ ಬೋಸ್, ಡಿಸಿ, ಜಿಪಂ ಸಿಇಒ, ಎಸ್ಪಿ ಜತೆ ನಾನು ಕುಳಿತು ಜಿಲ್ಲಾಡಳಿತ ಭವನದ ಆರಣದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ನಿರ್ಮಾಣದ ಬಗ್ಗೆ ಚರ್ಚೆ ನಡೆಸುತ್ತೇನೆ ಹಾಗೂ ಈ ಬಗ್ಗೆ ಪರಿಶಿಷ್ಟ ಪಂಗಡ ಇಲಾಖೆಯ ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ವಿಷಯ ತರಲಾಗುವುದು. ಈ ವಿಷಯದ ಬಗ್ಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಸಿಗುವ ಸಾದ್ಯತೆ ಇದೆ. ಹಾಗಾಗಿ, ಅ.17ರಂದು ಸರ್ಕಾರದಿಂದ ನಡೆಯುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ, ಯಶಸ್ವಿಗೊಳಿಸಿ ಎಂದು ಮನವಿ ಮಾಡಿದರು.
ಇದಕ್ಕೆ ತಾಲೂಕು ನಾಯಕರ ಸಂಘದ ಅಧ್ಯಕ್ಷ ಜಗದೀಶ್ ಪ್ರತಿಕ್ರಿಯಿಸಿ, ಸರ್ಕಾರದಿಂದ ಅನುಮತಿ ನೀಡಿದರೆ ಮತ್ತು ಬಳಿಕ ಜಿಲ್ಲಾ ವಾಲ್ಮೀಕಿ ಸಮಿತಿ ಯಾವ ತೀರ್ಮಾನ ಕೈಗೊಳ್ಳುವುದೋ ಅದರಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಹೇಳಿದರು. ಈ ಮಧ್ಯೆ ತಹಸೀಲ್ದಾರ್ ಬಸವರಾಜು ಕೂಡ ಅ.17ರಂದು ತಾಲೂಕು ಆಡಳಿತದಿಂದ ನಡೆಯುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಮುದಾಯದ ಮುಖಂಡರಲ್ಲಿ ಮನವಿ ಮಾಡಿದರು.
ನಗರಸಭಾಧ್ಯಕ್ಷೆ ಸಿ.ಎನ್.ರೇಖಾ ರಮೇಶ್, ತಾಪಂ ಇಒ ಗುರುಶಾಂತಪ್ಪ, ಬಿಇಒ ಮಂಜುಳ, ಪೌರಾಯುಕ್ತ ಎ.ರಮೇಶ್, ಪರಿಶಿಷ್ಟ ವರ್ಗಗಳ ತಾಲೂಕು ಕಲ್ಯಾಣಾಧಿಕಾರಿ ರಾಜೇಶ್ ಸೇರಿ ಇತರ ಅಧಿಕಾರಿಗಳು ಇದ್ದರು.
8ಕೆಜಿಎಲ್-5 ಫೋಟೋ ಶೀರ್ಷಿಕೆ: ಕೊಳ್ಳೇಗಾಲ ತಾ.ಪಂ ಕಚೇರಿ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಆಡಳಿತ ಕರೆದಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿದರು.