ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ
ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದ್ದು, ಉತ್ತರ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ಮತದಾನದ 7 ಹಂತಗಳು
ದೇಶದಲ್ಲಿ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯಲಿದ್ದು, ಎರಡನೇ ಹಂತದ ಮತದಾದನ ಮೇ 7 ರಂದು ನಡೆಯಲಿದೆ.
ಏಪ್ರಿಲ್ 19ರಂದು ಮೊದಲ ಹಂತದ ಮತದಾನ
ಏಪ್ರಿಲ್ 26ರಂದು ಎರಡನೇ ಹಂತದ ಮತದಾನ
ಮೇ 7ರಂದು ಮೂರನೇ ಹಂತದ ಮತದಾನ
ಮೇ 20 ರಂದು ನಾಲ್ಕನೇ ಹಂತದ ಮತದಾನ
ಮೇ 25 ರಂದು ಐದನೇ ಹಂತದ ಮತದಾನ
ಮೇ 25 ರಂದು ಐದನೇ ಹಂತದ ಮತದಾನ
ಜೂನ್ 1 ರಂದು ಐದನೇ ಹಂತದ ಮತದಾನ
ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟ
ಏಪ್ರಿಲ್ 19ರಂದು ಮೊದಲ ಹಂತದ ಮತದಾನ
ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಘೋಷಿಸಿದ್ದಾರೆ.
ಅಭ್ಯರ್ಥಿಗಳು ಶತ್ರುಗಳ ರೀತಿ ವರ್ತಿಸಬಾರದು: ರಾಜೀವ್ ಕುಮಾರ್
ಪ್ರಚಾರದ ವೇಳೆ ಅಭ್ಯರ್ಥಿಗಳು ಗೌರವ ಕಾಪಾಡಿಕೊಳ್ಳಬೇಕು. ದ್ವೇಷ ಭಾಷಣ ಮಾಡಬಾರದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ಅಭ್ಯರ್ಥಿಗಳು ಶತ್ರುಗಳ ರೀತಿ ವರ್ತಿಸಬಾರದು. ಚುನಾವಣೆಯ ಶತ್ರುಗಳು ಮುಂದೆ ಸ್ನೇಹಿತರಾಗಬಹದು. ಅದಕ್ಕೆ ಉದಾಹರಣೆ ಇದೆ ಎಂದರು.
ವಿಭಜಿಸಲು ಪ್ರೇರೇಪಿಸುವ ರಾಜಕೀಯ ಭಾಷಣ ಮಾಡುವಂತಿಲ್ಲ: ರಾಜೀವ್ ಕುಮಾರ್
ವಿಭಜಿಸಲು ಪ್ರೇರೇಪಿಸುವ ರಾಜಕೀಯ ಭಾಷಣ ಮಾಡುವಂತಿಲ್ಲ ಎಂದು ರಾಜಕೀಯ ಪಕ್ಷಗಳಿಗೆ ಸಲಹೆ ನೀಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ವಿಷಯ ಆಧಾರಿತ ಪ್ರಚಾರ ಮಾಡಬೇಕು. ದ್ವೇಷದ ಭಾಷಣಗಳಿಗೆ ಅವಕಾಶವಿಲ್ಲ. ಯಾವುದೇ ಜಾತಿ ಅಥವಾ ಧಾರ್ಮಿಕ ವಿಷಯದ ಮೂಲಕ ಮತಯಾಚನೆ ಮಾಡುವಂತಿಲ್ಲ. ಖಾಸಗಿ ಜೀವನದ ಯಾವುದೇ ಅಂಶವನ್ನು ಟೀಕಿಸುವುದಿಲ್ಲ. ಪರಿಶೀಲಿಸದ ಮತ್ತು ತಪ್ಪುದಾರಿಗೆಳೆಯುವ ಜಾಹೀರಾತು ಪ್ರಕಟಿಸಬಾರದು. ಪಕ್ಷದ ಜಾಹೀರಾತುಗಳನ್ನು ಸುದ್ದಿಯಾಗಿ ನೀಡುವಂತಿಲ್ಲ. ಪ್ರತಿಸ್ಪರ್ಧಿಗಳನ್ನು ನಿಂದಿಸುವ/ಅವಮಾನಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್ಗಳ ಮೇಲೆ ನಿರ್ಬಂಧ ಹೇರಲಾಗುವುದು. ಸ್ಟಾರ್ ಪ್ರಚಾರಕರು ಪ್ರಚಾರದ ಗೌರವ ಕಾಪಾಡಿಕೊಳ್ಳಬೇಕು. ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸುವಂತಿಲ್ಲ ಎಂದರು.
ಬ್ಯಾಂಕ್ಗಳಿಗೆ ಚುನಾವಣಾ ಆಯೋಗ ನಿರ್ದೇಶನ
ಅನುಮಾನಾಸ್ಪದ ವಹಿವಾಟುಗಳ ಬಗ್ಗೆ ಮಾಹಿತಿ ನೀಡಬೇಕು. ಎಲ್ಲ ಬ್ಯಾಂಕ್ಗಳು ದೈನಂದಿನ ವರದಿಗಳನ್ನು ಕಳುಹಿಸಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನಿರ್ದೇಶ ನೀಡಿದರು.
ಸುಳ್ಳು ಸುದ್ದಿಗಳ ಮೇಲೆ ನಿಗಾ: ರಾಜೀವ್ ಕುಮಾರ್
ಸಾಮಾಜಿಕ ಜಾಲತಾಣದಲ್ಲಿ ಫೇಕ್ ಸುದ್ದಿಗಳ ಮೇಲೂ ನಿಗಾ ಇಡಲಾಗುವುದು ಎಂದು ರಾಜೀವ್ ಕುಮಾರ್ ಹೇಳಿದರು. ಅಭ್ಯರ್ಥಿಗಳನ್ನು ಬಗ್ಗೆ ಮಾತನಾಡಲು ಅವಕಾಶವಿದೆ. ಆದರೆ ಸುಳ್ಳು ಸುದ್ದಿಗಳ ಮೂಲಕ ತೆಗಳಲು ಅವಕಾಶವಿಲ್ಲ ಎಂದರು.
ರೈಲು ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ತಪಾಸಣೆ; ರಾಜೀವ್ ಕುಮಾರ್
ರೈಲ್ವೆ ಸ್ಟೇಷನ್, ಏರ್ಪೋರ್ಟ್ಗಳಲ್ಲಿ ತಪಾಸಣೆ ನಡೆಯಲಿದೆ. ಹೆಲಿಕಾಪ್ಟರ್, ಖಾಸಗಿ ವಿಮಾನಗಳಲ್ಲೂ ಕೂಡ ತಪಾಸಣೆ ನಡೆಸಲಾಗುವುದು. ಎಲ್ಲಾ ವಾಹನಗಳನ್ನು ಕೂಡ ತಪಾಸಣೆ ನಡೆಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು.
ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದರೆ ಜಾಮೀನು ರಹಿತ ಕೇಸ್: ರಾಜೀವ್ ಕುಮಾರ್
ಕ್ರಿಮಿನಲ್ ಹಿನ್ನೆಲೆ ಇರುವ ವ್ಯಕ್ತಿಗಳು ಇದ್ದರೆ ಮಾಹಿತಿ ನೀಡಿ, ಸ್ಥಳಿಯ ಪತ್ರಿಕೆಗಳು ಮತ್ತು ಟಿವಿಗಳಲ್ಲಿ ಮಾಹಿತಿ ನೀಡಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. 11 ರಾಜ್ಯಗಳ ಚುನಾವಣೆಯಲ್ಲಿ 3400 ಕೋಟಿ ರೂ. ಸೀಜ್ ಮಾಡಲಾಗಿದೆ. ಚುನಾವಣೆ ವೇಳೆ ವಶಕ್ಕೆ 3400 ಕೋಟಿ ರೂಪಾಯಿ ಸೀಜ್ ಮಾಡಲಾಗಿದೆ. ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದರೆ ಜಾಮೀನು ರಹಿತ ಕೇಸ್ ದಾಖಲಿಸಲಾಗುವುದು ಎಂದರು.
ಚುನಾವಣೆಯಲ್ಲಿ ಹಿಂಸೆಗೆ ಅವಕಾಶ ನೀಡಲ್ಲ: ರಾಜೀವ್ ಕುಮಾರ್
ಚುನಾವಣೆಯಲ್ಲಿ ಹಿಂಸೆಗೆ ಅವಕಾಶ ನೀಡಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ಎಲ್ಲಾ ಕಡೆ ಚೆಕ್ಪೋಸ್ಟ್ ಇರಲಿವೆ, ಡ್ರೋನ್ ಮೂಲಕ ಕಣ್ಗಾವಲು ಇರಿಸಲಾಗುವುದು. 24 ಗಂಟೆಗಳ ಕಂಟ್ರೋಲ್ ರೂಂಗಳು ಕರ್ತವ್ಯ ನಿರ್ವಹಿಸಲಿವೆ. ಸಿಆರ್ಪಿಎಫ್ ತುಕಡಿಗಳನ್ನು ನಿಯೋಜನೆ ಮಾಡಲಾಗುವುದು. ರೌಡಿಶೀಟರ್ಗಳ ಮೇಲೂ ತೀವ್ರ ನಿಗಾ ಇಡಲಾಗುವುದು. ಅಂತರಾಷ್ಟ್ರೀಯ ಗಡಿಯಲ್ಲೂ ಡ್ರೋಣ್ ಮೂಲಕ ಕಣ್ಗಾವಲು ಇರಿಸಲಾಗುವುದು ಎಂದರು.
ಅಕ್ರಮದ ಬಗ್ಗೆ ಆ್ಯಪ್ ಮೂಲಕ ಮಾಹಿತಿ ನೀಡಿ: ರಾಜೀವ್ ಕುಮಾರ್
ಆ್ಯಪ್ ಮೂಲಕ ತಮ್ಮ ಅಭ್ಯರ್ಥಿಗಳ ಮಾಹಿತಿ ಲಭ್ಯ ಇರಲಿದೆ. ಅಭ್ಯರ್ಥಿಗಳ ಅಪರಾಧ ಪ್ರಕರಣಗಳ ಕುರಿತು ಮಾಹಿತಿ ಆ್ಯಪ್ನಲ್ಲಿರಲಿದೆ. ಚುನಾವಣಾ ಅಕ್ರಮಗಳನ್ನು ಮತದಾರ ಬಯಲು ಮಾಡಬಹುದು. ಆ್ಯಪ್ ಮೂಲಕ ಅಕ್ರಮದ ಫೋಟೋ, ವಿಡಿಯೋ ಅಪ್ಲೋಡ್ ಮಾಡಬಹುದು. ಕೂಡಲೇ ಅಕ್ರಮ ಎಸಗುವ ಅಭ್ಯರ್ಥಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ರಾಜೀವ್ ಕುಮಾರ್ ಹೇಳಿದರು.
ದಿವ್ಯಾಂಗರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ: ರಾಜೀವ್ ಕುಮಾರ್
ಮತದಾನ ಕೇಂದ್ರಗಳಲ್ಲಿ ನೀರು, ಶೌಚಾಲಯ, ಹೆಲ್ಪ್ಡೆಸ್ಕ್, ವಿದ್ಯುತ್ ಸೇರಿ ಮೂಲಕ ಸೌಕರ್ಯಗಳ ವ್ಯವಸ್ಥೆ ಮಾಡಲಾಗುತ್ತದೆ. 85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ ಮಾಡಲಾಗುವುದು. 40%ಕ್ಕೂ ಹೆಚ್ಚು ದಿವ್ಯಾಂಗರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು. ಮತದಾನ ಕೇಂದ್ರಗಳಲ್ಲಿ ವ್ಹೀಲ್ಚೇರ್ ವ್ಯವಸ್ಥೆ ಇರಲಿದ್ದು, ಸ್ವಯಂಸೇವಕರೂ ಇರಲಿದ್ದಾರೆ.
12 ರಾಜ್ಯಗಳಲ್ಲಿ ಮಹಿಳಾ ಮತದಾರರು ಹೆಚ್ಚು: ರಾಜೀವ್ ಕುಮಾರ್
12 ರಾಜ್ಯಗಳಲ್ಲಿ ಪುರುಷ ಮತದಾರಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ರಾಷ್ಟ್ರಕ್ಕೆ ನಿಜವಾದ ಹಬ್ಬದ, ಪ್ರಜಾಸತ್ತಾತ್ಮಕ ವಾತಾವರಣವನ್ನು ನೀಡಲು ನಾವು ಬದ್ಧರಾಗಿದ್ದೇವೆ. 17 ನೇ ಲೋಕಸಭೆಯ ಅವಧಿಯು 16 ಜೂನ್ 2024 ರಂದು ಮುಕ್ತಾಯಗೊಳ್ಳಲಿದೆ. ಆಂಧ್ರಪ್ರದೇಶ, ಒಡಿಶಾದ ಶಾಸನ ಸಭೆಗಳ ಅವಧಿ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ಕೂಡ ಜೂನ್ 2024 ರಲ್ಲಿ ಮುಕ್ತಾಯಗೊಳ್ಳಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿವೆ ಎಂದರು.
ಮೊದಲ ಬಾರಿ ಮತಚಲಾವಣೆ ಮಾಡಲಿದ್ದಾರೆ 1.8 ಕೋಟಿ ಮತದಾರರು
ದೇಶದಲ್ಲಿ 1.8 ಕೋಟಿ ಮತದಾರರು ಮೊದಲ ಬಾರಿಗೆ ಮತಚಲಾವಣೆ ಮಾಡಲಿದ್ದಾರೆ ಎಂದು ಹೇಳಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, 49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರಿದ್ದಾರೆ. 48 ಸಾವಿರ ತೃತೀಯ ಲಿಂಗಿ ಮತದಾರರು ಮತಚಲಾಯಿಸಲಿದ್ದಾರೆ. 85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರು ಮತಚಲಾಯಿಸಲಿದ್ದಾರೆ. 19.74 ಕೋಟಿ ಯುವ ಮತದಾರರು ಮತ ಚಲಾಯಿಸಲಿದ್ದಾರೆ ಎಂದರು.
ಲೋಕಸಭಾ ಚುನಾವಣೆ ನಡೆಸಲು ಆಯೋಗ ಸರ್ವಸನ್ನದ್ಧ: ಮುಖ್ಯ ಚುನಾವಣಾ ಆಯುಕ್ತ
ಲೋಕಸಭಾ ಚುನಾವಣೆ ನಡೆಸಲು ಆಯೋಗ ಸರ್ವಸನ್ನದ್ಧವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುತ್ತಿರುವ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಚುನಾವಣೆಯೂ ನಮಗೆ ಪರೀಕ್ಷೆ ಇದ್ದಂತೆ. ಮುಕ್ತ ನ್ಯಾಯಸಮ್ಮತ, ಪಾರದರ್ಶಕ ಚುನಾವಣೆ ನಮ್ಮ ಉದ್ದೇಶವಾಗಿದೆ. ದೇಶಾದ್ಯಂತ 97 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ದೇಶಾದ್ಯಂತ 10.5 ಲಕ್ಷ ಮತದಾನ ಕೇಂದ್ರಗಳು ಇದ್ದು, ಚುನಾವಣಾ ಕರ್ತವ್ಯಕ್ಕೆ ಒಂದೂವರೆ ಕೋಟಿ ಸಿಬ್ಬಂದಿ ಬಳಕೆ ಮಾಡಲಾಗುವುದು. ಮತದಾನಕ್ಕೆ ಒಟ್ಟು 55 ಲಕ್ಷ ಇವಿಎಂಗಳ ವ್ಯವಸ್ಥೆ ಮಾಡಲಾಗುವುದು ಎಂದರು.