– ನಗರದೆಲ್ಲೆಡೆ ಯದುವೀರ್ ಒಡೆಯರ್ ಪಾದಯಾತ್ರೆ
– ಚಾಮುಂಡೇಶ್ವರಿಯಲ್ಲಿ ಕೈ ನಾಯಕರ ಮತಬೇಟೆ
ಪ್ರತಿನಿಧಿ ವರದಿ ಮೈಸೂರು
ಪ್ರತಿಷ್ಠೆಯ ಕಣವಾಗಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರದ ಭರಾಟೆ ಜೋರಾಗಿದ್ದು, ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರುಗಳು ಕ್ಷೇತ್ರ ವ್ಯಾಪ್ತಿಯಲ್ಲಿ ಶನಿವಾರ ಭರ್ಜರಿ ಪ್ರಚಾರ ನಡೆಸಿದರು.
ಯದುವೀರ್ ಪಾದಯಾತ್ರೆ: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು ನಗರದ ವಿವಿಧೆಡೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಬೆಂಬಲದೊಂದಿಗೆ ಬಿರುಸಿನ ಪಾದಯಾತ್ರೆ ನಡೆಸಿದರು. ಚಾಮರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕನ್ನೇಗೌಡನ ಕೊಪ್ಪಲು, ಗಂಗೋತ್ರಿ ಬಡಾವಣೆ, ಮಂಡಿಮೊಹಲ್ಲಾ, ಅಕ್ಬರ್ ರಸ್ತೆ, ಶ್ರೀ ಟಾಕೀಸ್ ರಸ್ತೆ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ತೆರದ ವಾಹನದ ಮೂಲಕ ಮತಯಾಚಿಸಿದರು. ಇದಲ್ಲದೆ ಕಾಳಮ್ಮ ದೇವಸ್ಥಾನ ಬೀದಿ, ಇರ್ವೀನ್ ರಸ್ತೆ, ಅಶೋಕ ರಸ್ತೆ ಸೇರಿದಂತೆ ಹಲವೆಡೆ ಪ್ರಚಾರ ನಡೆಸಿದರು. ಬಳಿಕ ಸಂಜೆ ಖಾಸಗಿ ಹೋಟೆಲ್ನಲ್ಲಿ ವೈದ್ಯರೊಂದಿಗೆ ನಡೆದ ಸಭೆಯಲ್ಲಿ ಪಾಲ್ಗೊಂಡ ಅವರು, ಮೇಟಗಳ್ಳಿ ಮತ್ತು ಬಿಎಂಶ್ರೀ ನಗರದಲ್ಲಿ ಬಿರುಸಿನ ಪ್ರಚಾರ ನಡೆಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಯದುವೀರ್ ಒಡೆಯರ್ ಅವರು, ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಸಮನ್ವಯತೆಯಿಂದ ಪ್ರಚಾರ ನಡೆಸುತ್ತಿದ್ದಾರೆ. ಎರಡು ಪಕ್ಷಗಳ ಕಾರ್ಯಕರ್ತರು ಒಗ್ಗಟ್ಟಿನಿಂದ ಪ್ರಚಾರದಲ್ಲಿ ನಿರತರಾಗಿದ್ದು, ಎಲ್ಲ ಕಡೆಗಳಲ್ಲಿ ಜನರು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಮೈಸೂರು ಅರಮನೆ, ರಾಜಮನೆತನದ ಬಗ್ಗೆ ಜನರಿಗೆ ಇರುವ ಭಾವನಾತ್ಮಕ ಸಂಬಂಧಕ್ಕೆ ಇದು ಸಾಕ್ಷಿಯಾಗಿದೆ. ಪ್ರಚಾರದ ವೇಳೆ ಜನರ ಸಮಸ್ಯೆಗಳನ್ನು ಕಣ್ಣಾರೆ ಕಾಣುತ್ತಿದ್ದು, ಈ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು. ಬಿಜೆಪಿ ಮುಖಂಡ ಮೈ.ವಿ. ರವಿಶಂಕರ್, ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ, ಮಾಜಿ ಮೇಯರ್ ಲಿಂಗಪ್ಪ, ಪಾಲಿಕೆ ಮಾಜಿ ಸದಸ್ಯ ಪ್ರಮಿಳಾ ಭಾರತ್, ಕಿರಣ್ಗೌಡ ಇತರರಿದ್ದರು.
=================
ಬಾಕ್ಸ್
ಚಾಮುಂಡೇಶ್ವರಿಯಲ್ಲಿ ಕೈ ಅಬ್ಬರ
ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಅವರು ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯಲ್ಲಿ ಶನಿವಾರ ಕೂಡ ಭರ್ಜರಿ ಪ್ರಚಾರ ನಡೆಸಿದರು. ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಇನ್ನಿತರ ಮುಖಂಡರೊಂದಿಗೆ ಪ್ರಚಾರದ ಅಖಾಡಕ್ಕಿಳಿದ ಎಂ. ಲಕ್ಷ್ಮಣ್, ಚುನಾವಣೆಯಲ್ಲಿ ತಮಗೆ ಬೆಂಬಲ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದರು.
ಈ ವೇಳೆ ಮಾತನಾಡಿದ ಎಂ. ಲಕ್ಷ್ಮಣ್, ನಮ್ಮ ಗ್ಯಾರಂಟಿ ಸರ್ಕಾರದಷ್ಟೇ ಗ್ಯಾರಂಟಿಯಾಗಿ ನಿಮ್ಮ ಸೇವಕನಾಗಿ ಕೆಲಸ ಮಾಡಿಕೊಡುತ್ತೇನೆ ನನಗೊಂದು ಅವಕಾಶ ಕೊಡಿ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ. ಲಕ್ಷ್ಮಣ್ ಮನವಿ ಮಾಡಿದರು. ಎಲ್ಲ ಕಾರ್ಯಕ್ರಮಗಳನ್ನು ಕೊಡುವ ವ್ಯವಸ್ಥೆ ಇರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಾಗಿದೆ. ಪ್ರತಿಯೊಬ್ಬರನ್ನೂ ಒಟ್ಟಿಗೆ ಕರೆದೊಯ್ಯುವುದು ಕಾಂಗ್ರೆಸ್ ಪಕ್ಷವಾಗಿದೆ. ರಾಜ್ಯದಲ್ಲಿ ಬರಗಾಲ ಇದ್ದರೂ ಕೇಂದ್ರ ಸರ್ಕಾರ ನಯಾಪೈಸೆ ಕೊಡಲಿಲ್ಲ. ಸೆಪ್ಟಂಬರ್ನಲ್ಲೇ ವರದಿ ಕೊಟ್ಟು ಮನವಿ ಮಾಡಿದರೂ ಸ್ಪಂದನೆ ಮಾಡಲಿಲ್ಲ. ಎನ್ ಡಿಆರ್ ಎ ತಂಡವೇ ೧೮ ಸಾವಿರ ಕೋಟಿ ರೂ.ಪರಿಹಾರವನ್ನು ತ್ವತರಿತವಾಗಿ ಬಿಡುಗಡೆ ಮಾಡಬೇಕೆಂದು ವರದಿ ಕೊಟ್ಟರು ಐದು ಪೈಸೆ ಬಿಡುಗಡೆ ಮಾಡಿಲ್ಲ. ಅವರು ಪುಕ್ಕಟ್ಟೆ ಕೊಡದಿದ್ದರೂ ನಮ್ಮ ರಾಜ್ಯದ ತೆರಿಗೆ ಹಣದಲ್ಲಿ ನ್ಯಾಯಯುತವಾಗಿ ನೀಡಬೇಕಾದ ಅನುದಾನ ನೀಡಲಿಲ್ಲ. ಬರೀ ಸುಳ್ಳು ಹೇಳಿಕೊಂಡೆ ತಿರುಗಾಡುವ ಕೆಲಸ ಮಾಡುತ್ತಾರೆ. ಆದುದರಿಂದ ಜನತೆ ಅರ್ಥ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.
ಚಾಮುಂಡೇಶ್ವರಿ ಕ್ಷೇತ್ರದ ನಾಗನಹಳ್ಳಿ, ಸಿದ್ದಲಿಂಗಪುರ, ಕೆ.ಆರ್.ಮಿಲ್ ಕಾಲೋನಿ, ರಮ್ಮನಹಳ್ಳಿ, ಕಾಳಿಸಿದ್ದನಹುಂಡಿ, ಹಂಚ್ಯಾ, ಆಲನಹಳ್ಳಿ ಹಾಗೂ ಹೊಸುಂಡಿ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು.
=================