- ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ವೀಕ್ಷಕ ಡಾ.ಜೆ.ರವಿಶಂಕರ್ ಮಾಹಿತಿ
ಪ್ರತಿನಿಧಿ ವರದಿ ಮಂಡ್ಯ
ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯು ಜೂ.3ರಂದು ನಡೆಯಲಿದ್ದು, ಚುನಾವಣಾ ಕಾರ್ಯವನ್ನು ಯಶಸ್ವಿಗೊಳಿಸಿ ಎಂದು ಅಬಕಾರಿ ಆಯುಕ್ತ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ವೀಕ್ಷಕ ಡಾ.ಜೆ.ರವಿಶಂಕರ್ ಮತಗಟ್ಟೆ ಅಧಿಕಾರಿಗಳಿಗೆ ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2024ರ ಸಂಬಂಧ ಆಯೋಜಿಸಲಾಗಿದ್ದ ಅಧ್ಯಕ್ಷಾಧಿಕಾರಿ ಹಾಗೂ ಮತಗಟ್ಟೆ ಅಧಿಕಾರಿಗಳಿಗೆ ಚುನಾವಣಾ ತರಬೇತಿಯಲ್ಲಿ ಭಾಗವಹಿಸಿ ಮಾತನಾಡಿದರು.
ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆಗೆ ತಹಸೀಲ್ದಾರ್ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಅಧ್ಯಕ್ಷಾಧಿಕಾರಿ ಹಾಗೂ ಮತಗಟ್ಟೆ ಅಧಿಕಾರಿಗಳಾಗಿ ನೇಮಕ ಮಾಡಲಾಗಿದ್ದು, ಇವರಿಗೆ ಚುನಾವಣೆ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಅನುಭವ ಇರುವುದರಿಂದ ಬಹಳ ಅನುಕೂಲಕರ ಹಾಗೂ ಸುಲಭವಾಗಿ ಚುನಾವಣಾ ಕಾರ್ಯವನ್ನು ನಿರ್ವಹಿಸಬಹುದು ಎಂದು ಅಭಿಪ್ರಾಯಪಟ್ಟರು.
17 ವರ್ಷಗಳ ಹಿಂದೆ ಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದು, ಇಂದು ಜಿಲ್ಲೆಗೆ ಚುನಾವಣಾ ವೀಕ್ಷಕನಾಗಿ ಬಂದಿರುವುದು ಸಂತೋಷದ ವಿಷಯವಾಗಿದೆ ಎಂದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಚುನಾವಣಾ ಅಧ್ಯಕ್ಷಾಧಿಕಾರಿ, ಮತಗಟ್ಟೆ ಅಧಿಕಾರಿಗಳು, ಸಿಬ್ಬಂದಿ ಚುನಾವಣೆಯ ಮಾರ್ಗಸೂಚಿಯನ್ನು ತಿಳಿದುಕೊಂಡು ಅದರಂತೆಯೇ ಕಾರ್ಯ ನಿರ್ವಹಿಸಿ ಎಂದರು.
ಮಂಡ್ಯ ಜಿಲ್ಲೆಯಲ್ಲಿ ಜೂ.3ರಂದು ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ ನಡೆಯಲಿದ್ದು, ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ಜರುಗಲಿದೆ. ಚುನಾವಣಾ ಸಿಬ್ಬಂದಿ ನಿಗಧಿ ಪಡಿಸಿದ ಸಮಯಕ್ಕೆ ಮತಗಟ್ಟೆಯಲ್ಲಿ ಹಾಜರಿರಬೇಕು ಎಂದು ಸೂಚಿಸಿದರು.
ಚುನಾವಣಾ ಅಧಿಕಾರಿ ಹಾಗೂ ಸಿಬ್ಬಂದಿ ಮತಗಟ್ಟೆಗೆ ಸಂಬಂಧಿಸಿದ ಎಲ್ಲ ಸಾಮಗ್ರಿಗಳನ್ನು ಪಡೆದುಕೊಂಡು ಯಾವುದೇ ಲೋಪದೋಷ ಬಾರದಂತೆ ನೋಡಿಕೊಳ್ಳಿ ಎಂದು ಹೇಳಿದರು.
ಮತಗಟ್ಟೆ ಸಂಪೂರ್ಣ ಜವಾಬ್ದಾರಿ ಪ್ರಿಸೈಡಿಂಗ್ ಅಧಿಕಾರಿಗಳ ಮೇಲಿದ್ದು, ಪ್ರಿಸೈಡಿಂಗ್ ಅಧಿಕಾರಿ ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಿ. ಮತದಾನದಲ್ಲಿ ನೋಟಗೆ ಅವಕಾಶವಿರುವುದಿಲ್ಲ. ಮತಗಟ್ಟೆಗಳಲ್ಲಿ ವಿಡಿಯೋ ಚಿತ್ರೀಕರಣಕ್ಕೆ ವ್ಯವಸ್ಥೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 5403 ಮತದಾರರಿದ್ದು, 3127 ಗಂಡಸರು ಹಾಗೂ 2276 ಹೆಂಗಸರಿದ್ದಾರೆ. ಚುನಾವಣೆಯಲ್ಲಿ ಮತ ಚಲಾಯಿಸುವವರು ಶಿಕ್ಷಕರಾಗಿದ್ದು, ಎಲ್ಲಾ ಮತದಾರರಿಗೆ ಮತದಾನದ ಬಗ್ಗೆ ಸರಿಯಾದ ಮಾಹಿತಿ ನೀಡಿ ಗೌರವದಿಂದ ವರ್ತಿಸಿ. ಯಾವುದೇ ಸಮಸ್ಯೆ ಬಾರದಂತೆ ಕಾರ್ಯ ನಿರ್ವಹಿಸಿ ಎಂದರು.
ಜಿಪಂನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.