ನವದೆಹಲಿ: ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ ಬೇಕೆಂಬ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಭಾರತ ವಿಭಜಿಸುವ ಹೇಳಿಕೆ ಸಹಿಸಲ್ಲ’ ಎಂದು ಹೇಳಿದ್ದಾರೆ. ‘ಕಾಂಗ್ರೆಸ್ ಪಕ್ಷದಲ್ಲಿ ದೇಶಕ್ಕಾಗಿ ಹಲವರು ತಮ್ಮ ಪ್ರಾಣತ್ಯಾಗ ಮಾಡಿದ್ದಾರೆ. ಅಂತಹ ಪಕ್ಷದಲ್ಲಿ ದೇಶ ಒಡೆಯುವ ಆಲೋಚನೆ ಬರಲು ಸಾಧ್ಯವೇ ಇಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಭಾರತ ಒಂದಾಗಿರಬೇಕೆಂದು ಕಾಂಗ್ರೆಸ್ ಬಯಸುತ್ತದೆ. ದೇಶ ವಿಭಜಿಸುವ ಹೇಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಒಂದು ವೇಳೆ ಡಿ.ಕೆ. ಸುರೇಶ್ ಅಂತಹ ಹೇಳಿಕೆಯನ್ನು ನೀಡಿದ್ದೇ ಆದಲ್ಲಿ, ಆ ಕುರಿತು ಹಕ್ಕುಬಾಧ್ಯತಾ ಸಮಿತಿಯಿಂದ ವಿಚಾರಣೆ ನಡೆಸಲಿ’ ಎಂದು ಸವಾಲು ಹಾಕಿದರು.