ಸರ್ಕಾರ ಹಾಗೂ ಮೈಸೂರು ರಾಜವಂಶಸ್ಥರ ನಡುವಿನ ಚಾಮುಂಡಿಬೆಟ್ಟ ಪ್ರಾಧಿಕಾರ ವಿವಾದಕ್ಕೆ ಎಲ್ಲೆಡೆಯಿಂದ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ಮೈಸೂರಿನ ಚಾಮುಂಡಿ ಬೆಟ್ಟ ಮಹಾರಾಜರ ಆಸ್ತಿ ಎಂದಿದ್ದ ರಾಜಮಾತೆ ಪ್ರಮೋದಾದೇವಿ ಒಡೆಯರ್ ಪರ ಶಾಸಕ ಜಿ ಟಿ ದೇವೇಗೌಡ ಬ್ಯಾಟಿಂಗ್ ನಡೆಸಿದ್ದಾರೆ.
ಚಾಮುಂಡಿ ಬೆಟ್ಟದ ದೇಗುಲವನ್ನು ರಾಜ್ಯ ಸರ್ಕಾರ ನಿರ್ವಹಣೆ ಮಾಡುತ್ತಿದೆ ಅಷ್ಟೇ. ಆದರೆ ಚಾಮುಂಡಿ ಬೆಟ್ಟದ ದೇಗುಲ ಮಹಾರಾಜರಿಗೆ ಸೇರಿದ ಆಸ್ತಿಯಾಗಿದೆ.ಚಾಮುಂಡಿ ಬೆಟ್ಟದ ಪ್ರಾಧಿಕಾರವನ್ನು ರಾಜ್ಯ ಸರ್ಕಾರ ಯಾವ ಮಾದರಿಯಲ್ಲಿ ರಚನೆ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ. ಈ ವಿಚಾರದಲ್ಲಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ನಿಲುವು ಸ್ಪಷ್ಟವಾಗಿದೆ.ಅವರ ಹೇಳಿಕೆಗೆ ತಮ್ಮ ಸಂಪೂರ್ಣ ಬೆಂಬಲ ಇದೆ ಅಂತ ಶಾಸಕ ಜಿ ಟಿ ದೇವೇಗೌಡ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ. ತುಂಗಭದ್ರ ಜಲಾಶಯದ ಕ್ರಸ್ಟ್ ಗೇಟ್ ದುರಸ್ತಿಗೆ ರಾಜ್ಯ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು. ಜಲಾಶಯದ ಕ್ರಸ್ಟ್ ಗೇಟ್ ಕಳಚಿ ಬಿದ್ದಿರುವುದರಿಂದ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.ವಿದೇಶಿ ತಜ್ಞರನ್ನು ಕರೆಸಿ ಜಲಾಶಯದ ಕ್ರಸ್ಟ್ ಗೇಟ್ ದುರಸ್ತಿ ಮಾಡಿಸಬೇಕು. ವಿದೇಶಗಳಲ್ಲಿ ನೀರಿನೊಳಗೆ ತೆರಳಿ ದುರಸ್ತಿ ಮಾಡುವ ತಜ್ಞರಿದ್ದಾರೆ. ಅಂತಹ ನುರಿತ ತಜ್ಞರನ್ನು ರಾಜ್ಯಕ್ಕೆ ಕರೆಸಿ ಆದಷ್ಟು ಬೇಗ ಕ್ರಸ್ಟ್ ಗೇಟ್ ದುರಸ್ತಿ ಮಾಡಿಸಬೇಕು.ಇದರ ಜೊತೆಗೆ ರಾಜ್ಯದ ಎಲ್ಲಾ ಜಲಾಶಯಗಳ ಸಮರ್ಪಕ ನಿರ್ವಹಣೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಜಿಟಿ ದೇವೇಗೌಡ ಹೇಳಿದ್ರು.
ಮೈಸೂರು ಮಹಾನಗರ ಪಾಲಿಕೆಯನ್ನು ಬಿಬಿಎಂಪಿ ಮಾದರಿಯಲ್ಲಿ ಬೃಹತ್ ಮಹಾನಗರ ಪಾಲಿಕೆಯನ್ನಾಗಿ ಪರಿವರ್ತಿಸಬೇಕು, ಮೈಸೂರು ನಗರಕ್ಕೆ ಹೊಂದಿಕೊಂಡಿರುವ ಬಹುತೇಕ ಬಡಾವಣೆಗಳು ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿವೆ. ಪರಿಣಾಮ ಆ ಬಡಾವಣೆ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.ಬಹುತೇಕ ಬಡಾವಣೆಗಳಲ್ಲಿ ಕುಡಿಯುವ ನೀರಿನ ಕೊರತೆಯಿದೆ. ಒಳಚರಂಡಿ, ರಸ್ತೆಗಳು, ಉದ್ಯಾನವನಗಳು ಸುಸಜ್ಜಿತವಾಗಿ ನಿರ್ಮಾಣವಾಗಿಲ್ಲ.ಹಾಗಾಗಿ ಮೈಸೂರನ್ನು ಬಿಬಿಎಂಪಿ ಮಾದರಿಯಲ್ಲಿ ಬೃಹತ್ ಮಹಾನಗರ ಪಾಲಿಕೆಯನ್ನಾಗಿ ಪರಿವರ್ತಿಸಬೇಕು.ಇದಕ್ಕೆ ಅಗತ್ಯವಾಗಿರುವ ಸುಮಾರು ಎರಡು ಸಾವಿರ ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ನೀಡಬೇಕು ಎಂದು ಶಾಸಕ ಜಿ ಟಿ ದೇವೇಗೌಡ ಮೈಸೂರಿನಲ್ಲಿ ಹೇಳಿಕೆ ನೀಡಿದರು.