ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಅಸಮಾಧಾನ
ಪ್ರತಿನಿಧಿ ವರದಿ ಕೋಲಾರ
ವಿಧಾನಸಭಾ ಕ್ಷೇತ್ರದಲ್ಲಿ ಜನಸಾಮಾನ್ಯರು ಹಾಗೂ ರೈತರು ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ಸ್ಪಂದಿಸದೇ ಇರುವುದು ಖಂಡನೀಯ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಗ್ರಾಹಕರಿಗೆ ಹಾಲು ಮಾರಾಟದ ದರವನ್ನು ೨ ರೂ. ಏರಿಕೆ ಮಾಡಿದ್ದಾರೆ. ಅದೇ ಸಂದರ್ಭದಲ್ಲಿ ಉತ್ಪಾದಕರಿಗೆ ಹಾಲು ಖರೀದಿ ದರವು ೨ ರೂ. ಕಡಿತ ಮಾಡಿದ್ದಾರೆ. ಕ್ಷೇತ್ರದ ಜನರು ಸಂಕಷ್ಟಕ್ಕೆ ಸಿಲುಕಿದ್ದರೂ ಯಾವ ವಿಚಾರಕ್ಕೂ ತಲೆ ಹಾಕದೆ, ಕಾಟಾಚಾರಕ್ಕೆ ಎಂಬಂತೆ ತಿಂಗಳಿಗೆ ಒಮ್ಮೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಸಭೆ ನಡೆಸಿ, ಮಾಧ್ಯಮದವರೊಂದಿಗೆ ಮಾತನಾಡಿ ಹೋಗುತ್ತಿದ್ದಾರೆ ಹೊರತು ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳ ಕಡೆಗೆ ಗಮನಹರಿಸುತ್ತಿಲ್ಲವೆಂದು ಆರೋಪಿಸಿದ್ದಾರೆ.
ಕ್ಷೇತ್ರವನ್ನು ಅಭಿವೃದ್ಧಿ ಮಾಡುವುದಾಗಿ ನಾನಾ ಭರವಸೆಗಳನ್ನು ಶಾಸಕರು ನೀಡಿದ್ದು, ಅವು ಹೇಳಿಕೆಗಷ್ಟೇ ಸೀಮಿತವಾಗಿವೆ ಹೊರತು ಯಾವುದೇ ಭರವಸೆಗಳು ಕಾರ್ಯರೂಪಕ್ಕೆ ಬಂದಿಲ್ಲ. ಆದರೂ ಸಹ ನಾನಾ ಅಭಿವೃದ್ಧಿ ಕೆಲಸ ಮಾಡಿರುವುದಾಗಿ ಹೇಳಿಕೊಂಡು ಓಡಾಡುತ್ತಿರುವುದು ಹಾಸ್ಯಾಸ್ಪದ ಸಂಗತಿಯಾಗಿದೆ.
ಶಾಸಕರಾಗಿ ೧೪ ತಿಂಗಳು ಕಳೆಯುತ್ತಿದ್ದರೂ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಮುಂದಾಗಿಲ್ಲ. ಸರ್ಕಾರಿ ಕಚೇರಿಗಳಲ್ಲಿ ಸಮರ್ಪಕವಾಗಿ ಕೆಲಸ ಕಾರ್ಯಗಳು ನಡೆಯದೇ, ಸಾರ್ವಜನಿಕರು ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ಆದರು ಶಾಸಕರು ಸಮಸ್ಯೆ ಬಗೆಹರಿಸಲು ಮುಂದಾಗುತ್ತಿಲ್ಲ. ಹೊರಗಿನವರನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ಈಗಾಗಲೇ ಕ್ಷೇತ್ರದ ಜನರು ಬೇಸರ ವ್ಯಕ್ತಪಡಿಸುತ್ತಿದ್ದು, ಇನ್ನಾದರೂ ಎಚ್ಚೆತ್ತು ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುವ ಜತೆಗೆ ಕ್ಷೇತ್ರದಲ್ಲೇ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಲಿ ಎಂದು ಓಂಶಕ್ತಿ ಚಲಪತಿ ಸಲಹೆ ನೀಡಿದ್ದಾರೆ.