ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿರುವ ಸಿದ್ದರಾಮಯ್ಯ ಏನು ತಪ್ಪು ಮಾಡಿಲ್ಲ ಎಂದು ಹೇಳಿಕೊಂಡು ನಾಳೆ ಜನಾಂದೋಲನ ಸಮಾವೇಶ ಮಾಡಲು ಮುಂದಾಗಿದ್ದಾರೆ. ತಾಕತ್ತಿದ್ದರೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಿ,ಇಲ್ಲದಿದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಎಂಎಲ್ಸಿ ಎನ್ ರವಿಕುಮಾರ್ ಆಗ್ರಹಿಸಿದ್ದಾರೆ.
ಮೈಸೂರು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಂ ಎಲ್ ಸಿ ಎನ್.ರವಿಕುಮಾರ್ ಸಿದ್ದರಾಮಯ್ಯಗೆ ತಾಕತ್ತಿದ್ದರೆ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲಿ, ಇಲ್ಲದಿದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ಕಳೆದ ಶನಿವಾರ ಹಮ್ಮಿಕೊಂಡಿದ್ದ ಪಾದಯಾತ್ರೆ ನಾಳಿದ್ದು ಶನಿವಾರ ಅಂತ್ಯಗೊಳ್ಳಲಿದೆ. ಇದರ ಅಂಗವಾಗಿ ಮೈಸೂರಿನಲ್ಲಿ ಬೃಹತ್ ಸಮಾವೇಶವನ್ನು ಆಯೋಜನೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಮುಡಾದಲ್ಲಿ ಅಕ್ರಮವಾಗಿ 14 ಸೈಟ್ ಪಡೆದಿರುವುದರ ವಿರುದ್ದ ಹೋರಾಟವನ್ನು ನಡೆಸಲಾಗುತ್ತಿದೆ ಎಂದರು
ಮೈಸೂರಿನ ಪ್ರತಿಷ್ಠಿತ ಬಡಾವಣೆಯಲ್ಲಿ ಸಿದ್ದರಾಮಯ್ಯ ಸೈಟ್ ಪಡೆದಿದ್ದಾರೆ.ರಾಜ್ಯ ಸರ್ಕಾರ ಸೂಚಿಸುವ ತನಿಖೆಯಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಹಾಗಾಗಿ ನಿಷ್ಪಕ್ಷಪಾತ ತನಿಖೆಗಾಗಿ ಸಿಬಿಐಗೆ ವಹಿಸುವಂತೆ ಆಗ್ರಹಿಸಿದರೂ ಕಾಂಗ್ರೆಸ್ ಒಪ್ಪುತ್ತಿಲ್ಲ.ವಿಧಾನಮಂಡಲದ ಅಧಿವೇಶನದಲ್ಲೂ ಚರ್ಚೆಗೆ ಅವಕಾಶವನ್ನು ನೀಡಲಿಲ್ಲ.ಮುಡಾ ಮಾತ್ರವಲ್ಲದೆ ವಾಲ್ಮೀಕಿ ನಿಗಮದಲ್ಲೂ ಅಕ್ರಮ ನಡೆದಿದೆ.ಇದನ್ನು ಸ್ವತಃ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲು ಪಾದಯಾತ್ರೆ ನಡೆಸುತ್ತಿದ್ದೇವೆ.
ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ಅಂತಿಮ ಹಂತದಲ್ಲಿದೆ. ಪಾದಯಾತ್ರೆಗೆ ಜೆಡಿಎಸ್ ಕೂಡ ಸಾಥ್ ನೀಡಿದೆ.ಶನಿವಾರ ಮೈಸೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಒಂದುವರೆ ಲಕ್ಷ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಎಂ ಎಲ್ ಸಿ ಎನ್.ರವಿಕುಮಾರ್ ಮೈಸೂರಿನಲ್ಲಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.