ಚಾಮರಾಜನಗರ : ಮೋದಿ ಸರ್ಕಾರದ ಗ್ಯಾರಂಟಿಗಳು ಕೇವಲ ಪೇಪರ್ ಮತ್ತು ಟಿವಿಗಳಿಗೆ ಸೀಮಿತವಾಗಿರುವ ಗ್ಯಾರಂಟಿಗಳಾಗಿವೆ ಎಂದು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಚಾಮರಾಜನಗರ ಬ್ಲಾಕ್ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಮತ್ತು ಮುಖಂಡರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಿಜೆಪಿಯನ್ನು 3ನೇ ಬಾರಿಗೆ ಅಧಿಕಾರಕ್ಕೆ ತಂದರೆ ದೇಶ ಹಾಳಾಗುವುದರ ಜತೆಗೆ ಸರ್ವಾಧಿಕಾರಿತನ ಹೆಚ್ಚಾಗಲಿದೆ. ಇವರು ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಸಂಚಾಕಾರ ಎದುರಾಗಲಿದೆ ಎಂದರು.
ಯುಪಿಎ ಸರ್ಕಾರದ ಅವಧಿಯಲ್ಲಿ ಡಾ.ಮೋಹನ್ ಸಿಂಗ್ ಅವರು ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದರು. ಅದೇ ರೀತಿ 2013-18ರಲ್ಲಿ ರಾಜ್ಯದಲ್ಲೂ ಕಾಂಗ್ರೆಸ್ ಸರ್ಕಾರ ಅನೇಕ ಕೆಲಸಗಳನ್ನು ಮಾಡಿದೆ. ಆದರೆ 2018-23ರ ವರೆಗೆ ಬಿಜೆಪಿ ಅಧಿಕಾರದಲ್ಲಿತ್ತು. ಇವರ ಮಿತಿ ಮೀರಿದ ಭ್ರಷ್ಟಾಚಾರ, ಜಾತಿ ರಾಜಕಾರಣದಿಂದ ಜನರು ಬೇಸತ್ತು ಬಿಜೆಪಿಯನ್ನು 2023ರಲ್ಲಿ ನಡೆದ ಚುನಾವಣೆಯಲ್ಲಿ ಅಧಿಕಾರದಿಂದ ದೂರವಿಟ್ಟರು ಎಂದರು.
ಕೇಂದ್ರದಲ್ಲಿ 2018ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ 600 ಭರವಸೆಗಳನ್ನು ಕೊಟ್ಟಿದ್ದರು. ಆದರೆ 10 ಭರವಸೆಗಳನ್ನು ಈಡೇರಿಸಲಿಲ್ಲ. ವರ್ಷಕ್ಕೆ ಎರಡು ಕೋಟಿ ಉದ್ಯೊಗ ಕೊಡುತ್ತೇನೆ ಎಂದು ಹೇಳಿ ಉದ್ಯೋಗ ಕೇಳುವ ಯುವಕರಿಗೆ ಪಕೋಡ ಮಾರಲು ಹೇಳಿದರು. ಅವರು ಕೊಟ್ಟ ಭರವಸೆಯನ್ನು ಈಡೇರಿಸಲಿಲ್ಲ. ಬಿಜೆಪಿಯವರು ಕೊಡುವ ಭರವಸೆ ಎಲ್ಲ ಸುಳ್ಳು ಎಂದರು.
ಕೇಂದ್ರ ಬಿಜೆಪಿ ಸರ್ಕಾರದಲ್ಲಿ ಮಿತಿ ಮೀರಿದ ಭ್ರಷ್ಟಾಚಾರ ನಡೆಯುತ್ತಿದೆ. ಆದರೆ ಅದು ಹೊರಗೆ ಬರುತ್ತಿಲ್ಲ. ಯಾಕೆಂದರೆ ಇಡಿ,ಐಟಿ ಹಾಗೂ ಸಿಬಿಐ ಎಲ್ಲ ಸಂಸ್ಥೆಗಳನ್ನು ತಮ್ಮ ಹಿಡಿತದಲ್ಲಿ ಇಟ್ಟು ಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಬಿಜೆಪಿಯಂತೆ ಸುಳ್ಳು ಭರವಸೆ ನೀಡದೆ, ಅಧಿಕಾರಕ್ಕೆ ಬಂದ ದಿನದಿಂದಲೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು.
ಬಿಜೆಪಿ ಅಭ್ಯರ್ಥಿ ಆಗಿರುವ ಎಸ್.ಬಾಲರಾಜು ಅವರು ಕಾಂಗ್ರೆಸ್ ಪಕ್ಷದಲ್ಲಿದ್ದ ಅವಧಿಯಲ್ಲಿ ಬಿಜೆಪಿಯನ್ನು ಬಲವಾಗಿ ವಿರೋಧಿಸುತ್ತಿದ್ದರು. ಈಗ ಬಿಜೆಪಿ ಸೇರ್ಪಡೆಗೊಂಡು ಕಾಂಗ್ರೆಸ್ ನ ಧ್ರುವನಾರಾಯಣ್ ಅವರ ಹೆಸರು ಬಳಸಿಕೊಂಡು ಕ್ಷೇತ್ರದಲ್ಲಿ ಮತ ಕೇಳುತ್ತಿದ್ದಾರೆ ಎಂದರು.