ಮೈಸೂರು: ದಸರಾ ಜಂಬೂಸವಾರಿ ಮೆರವಣಿಗೆ ಹಿನ್ನೆಲೆ ನಾಡದೇವತೆ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಅದ್ದೂರಿ ಮೆರವಣಿಗೆ ಮೂಲಕ ಅರಮನೆಗೆ ತರಲಾಯಿತು.
ಜಂಬೂಸವಾರಿ ಮೆರವಣಿಗೆಯ ಪ್ರಮುಖ ಆಕರ್ಷಣೆಯಾದ ಚಿನ್ನದ ಅಂಬಾರಿಯಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಮೆರವಣಿಗೆ ನಡೆಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿವರ್ಷವೂ ಚಾಮುಂಡಿಬೆಟ್ಟದಿಂದ ಚಾಮುಂಡಿ ತಾಯಿಯ ಉತ್ಸವ ಮೂರ್ತಿಯನ್ನು ತರಲಾಗುತ್ತದೆ. ಅದರಂತೆ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಚಾಮುಂಡಿಬೆಟ್ಟದಿಂದ ಮೆರವಣಿಗೆಯ ಮೂಲಕ ಉತ್ಸವ ಮೂರ್ತಿಯನ್ನು ಅರಮನೆಗೆ ತರಲಾಯಿತು. ಉತ್ಸವಮೂರ್ತಿಗೆ ಶಾಸಕ ಜಿ.ಟಿ. ದೇವೇಗೌಡ ಅವರ ಲಲಿತಾ ಜಿ.ಟಿ.ದೇವೇಗೌಡ ಅವರು ರಥದ ಬಳಿ ಪೂಜೆ ಸಲ್ಲಿಸಿ, ದೇವಿಯ ಆಶಿರ್ವಾದ ಪಡೆದರು.
ಇನ್ನೂ ಚಾಮುಂಡಿಬೆಟ್ಟದಿಂದ ಅರಮನೆಗೆ ಕರೆತರಲಾದ ಚಾಮುಂಡೇಶ್ವರಿ ದೇವಿಯ ಉತ್ಸವಮೂರ್ತಿಗೆ ದಸರಾ ಸಮಿತಿ ವತಿಯಿಂದ ವಿಶೇಷ ಸೀರೆ ಸಮರ್ಪಿಸಲಾಯಿತು. ನೀಲಿ ಬಣ್ಣದ ರೇಷ್ಮೆ ಸೀರೆಯಲ್ಲಿ ಅಲಂಕೃತಗೊಂಡಿದ್ದ ನಾಡದೇವತೆ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದು ಭಕ್ತರು ಪುನೀತರಾದರು.
ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ತರುವ ಸಂದರ್ಭದಲ್ಲಿ ಅಲಂಕೃತ ವಾಹನದೊಂದಿಗೆ ನಾದಸ್ವರ ತಂಡ, ಪೊಲೀಸ್ ಬ್ಯಾಂಡ್, ಅಶ್ವದಳ, ಭಜನಾ ತಂಡ, ವೇದ ಘೋಷ, ಚಂಡೆ, ನವದುರ್ಗೆಯರು ಸಾಗಿದರು. ತಾವರಕಟ್ಟೆ, ಇಟ್ಟಿಗೆಗೂಡು, ಹಾರ್ಡೀಂಜ್ ವೃತ್ತದ ಮೂಲಕ ಅರಮನೆ ಪ್ರವೇಶಿಸಿತು. ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯ ಭಕ್ತರು ಉತ್ಸವ ಮೂರ್ತಿಯ ಮೆರವಣಿಗೆಯೊಂದಿಗೆ ಸಾಗುತ್ತಾ, ನಾಡದೇವತೆಗೆ ಜೈಕಾರಾದ ಘೋಷಣೆಗಳನ್ನು ಕೂಗುವ ಮೂಲಕ ಮೆರವಣಿಗೆಯಲ್ಲಿ ಪಾಲ್ಗೊಂಡರು.