ಬಗೆದಷ್ಟು ಬಯಲಾಗ್ತಿದೆ ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ಕಾನೂನು ಬಾಹಿರವಾಗಿ 14 ನಿವೇಶನದ ಪಡೆದಿದ್ದಾರೆ ಎನ್ನಲಾದ ವಿಚಾರ ಇದೀಗ ಕೋರ್ಟ್ ಅಂಗಳದಲ್ಲಿದೆ. ಇದರ ಬೆನ್ನಲ್ಲೇ ಮುಡಾ ಆಯುಕ್ತರ ಅನುಮೋದನೆಯೇ ಇಲ್ಲದೆ ನಿವೇಶನಗಳನ್ನು ಬಿಡುಗಡೆಗೊಳಿಸಿಕೊಂಡ ಮುಡಾ ಮಾಜಿ ಅಧ್ಯಕ್ಷರ ವಿರುದ್ಧ ಮಾಜಿ ಆಯುಕ್ತ ಡಿ.ಬಿ.ನಟೇಶ್ ರಾಜ್ಯ ಸರ್ಕಾರಕ್ಕೆ ಬರೆದಿದ್ದ ಪತ್ರಕ್ಕೆ ಸಂಬಂಧಿಸಿದಂತೆ ಮತ್ತೊಂದು ಹಗರಣದ ಬಗ್ಗೆ ಗಂಭೀರ ಚರ್ಚೆ ಶುರುವಾಗಿದ್ದು, ಆ ಮೂಲಕ ಎರಡು ವರ್ಷಗಳ ಹಳೆಯ ಪ್ರಕರಣಕ್ಕೆ ಮರು ಜೀವ ಸಿಕ್ಕಿದೆ.
ಮುಡಾ ಆಯುಕ್ತರ ವಿರುದ್ಧ ಭ್ರಷ್ಟಾಚಾರದ ಹಗರಣ ಕೇಳಿ ಬಂದ ಬೆನ್ನಲ್ಲೇ ಈಗ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಅಧ್ಯಕ್ಷರಾಗಿದ್ದಾಗ ಕೈಗೊಂಡಿದ್ದ ತೀರ್ಮಾನದ ವಿರುದ್ಧ 2022ರ ಫೆ.22ರಂದು ಸರ್ಕಾರದ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಡಿ.ಬಿ.ನಟೇಶ್ ಬರೆದಿರುವ ಪತ್ರ ದೊಡ್ಡಮಟ್ಟದಲ್ಲಿ ಸದ್ದು ಮಾಡಿದೆ. ಇದೀಗ ಈ ವಿಚಾರ ಮತ್ತೆ ಸ್ಫೋಟಗೊಂಡು ದೊಡ್ಡ ಸದ್ದು ಮಾಡಿರುವುದು ಮತ್ತೊಂದು ತಿರುವು ಪಡೆಯುವ ಸಾಧ್ಯತೆ ಇದೆ.
ಎಚ್.ವಿ.ರಾಜೀವ್ ಮುಡಾ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘದಿAದ ಕೇರ್ಗಳ್ಳಿ, ನಗರ್ತಳ್ಳಿ, ಬಲ್ಲಹಳ್ಳಿ ಗ್ರಾಮದ 252 ಎಕರೆ 10 ಗುಂಟೆ ಪ್ರದೇಶದಲ್ಲಿ ಬಡಾವಣೆ ನಿರ್ಮಾಣ ಮಾಡಲಾಗಿದೆ. ಈ ಬಡಾವಣೆ ನಗರಾಭಿವೃದ್ಧಿ ಪ್ರಾಧಿಕಾರದ 2018ರ ಆದೇಶದ ವಿರುದ್ಧವಾಗಿ ರಚನೆಯಾಗಿದೆ. ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಎಚ್.ವಿ.ರಾಜೀವ್ ಅವರೇ ಅಧ್ಯಕ್ಷರಾಗಿದ್ದಾರೆ. 252 ಎಕರೆ ಜಾಗದ ಕೆಲವು ಸರ್ವೆ ನಂಬರ್ಗಳ ವ್ಯಾಜ್ಯ ನ್ಯಾಯಾಲಯದಲ್ಲಿ ಇರುವ ಕಾರಣ ಬಡಾವಣೆ ನಿವೇಶನಗಳ ಹಕ್ಕುಗಳನ್ನು ಮುಡಾ ವರ್ಗಾವಣೆ ಮಾಡಬಾರದೆಂದು ನ್ಯಾಯಾಲಯ ಆದೇಶ ನೀಡಿತ್ತು. ಹೀಗಿದ್ದರೂ, ಎಚ್.ವಿ.ರಾಜೀವ್ 848 ನಿವೇಶನಗಳನ್ನು ಒಂದೇ ದಿನದಲ್ಲಿ ಮುಡಾದಿಂದ ಬಿಡುಗಡೆಗೊಳಿಸಿ ಖಾತೆ ಮಾಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಆಯುಕ್ತರ ಅನುಮೋದನೆ ಇಲ್ಲದಿದ್ದರೂ ನಿವೇಶನಗಳನ್ನು ಬಿಡುಗಡೆಗೊಳಿಸಿಕೊಂಡಿದ್ದಾರೆ ಎಂದು ಸರ್ಕಾರಕ್ಕೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದಲ್ಲದೆ, ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘದಿಂದ 252.10 ಎಕರೆಯಲ್ಲಿ ಬಡಾವಣೆ ವಿನ್ಯಾಸ ನಕ್ಷೆ ಅನುಮೋದನೆಗೆ ಸಂಬAಧಿಸಿದAತೆ ಅಗತ್ಯವಿರುವ ಕಡತಗಳನ್ನು ಆಯುಕ್ತರ ಕಚೇರಿಗೆ ಸಲ್ಲಿಸುವಂತೆ ಅಧ್ಯಕ್ಷರಿಗೆ 2022ರ ಫೆ.16ರಂದು ಬರೆದಿರುವ ಪತ್ರ ಈಗ ಬಹಿರಂಗವಾಗಿದೆ. ಮುಡಾ ಆದೇಶದ ವಿರುದ್ಧವಾಗಿ ೮೪೮ ನಿವೇಶನಗಳನ್ನು ಬಿಡುಗಡೆಗೊಳಿಸಿಕೊಂಡು ತರಾತುರಿಯಲ್ಲಿ ಒಂದೇ ದಿನದಲ್ಲಿ ಖಾತೆ ಮಾಡಿಸಿಕೊಂಡಿರುವುದು ನನ್ನ ಗಮನಕ್ಕೆ ಬಂದಿದೆ. ಈ ಸಂಬಂಧ ಅನೇಕ ದೂರುಗಳು ಸಹ ಸಲ್ಲಿಕೆಯಾಗಿವೆ. ಸಾರ್ವಜನಿಕರು ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿರುವ ದೂರಿನ ಮೇಲೆ ಮುಖ್ಯ ಕಾರ್ಯದರ್ಶಿಯವರ ಆಪ್ತ ಶಾಖೆಯಿಂದ ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ವರದಿ ಸಲ್ಲಿಸಬೇಕಿರುವ ಕಾರಣ ಕಡತಗಳನ್ನು ಹಿಂದಿರುಗಿಸುವಂತೆ ಕೇಳಿಕೊಂಡಿದ್ದರು.
ರಕ್ಷಣೆ ಪಡೆಯಲು ಕಾಂಗ್ರೆಸ್ ಸೇರ್ಪಡೆ
ಮುಡಾ ಹಗರಣಗಳಿಂದ ತಮ್ಮನ್ನು ರಕ್ಷಣೆ ಮಾಡಿಕೊಳ್ಳಲು ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಕಾಂಗ್ರೆಸ್ ಸೇರಿದ್ದಾರೆ. ಆಯುಕ್ತರು ಕೇವಲ ಪತ್ರ ಬರೆದು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಕೆಲಸ ಮಾಡಿದ್ದಾರೆ. ಎರಡು ವರ್ಷಗಳಾದರೂ ಸರ್ಕಾರ ಯಾವುದೇ ಕ್ರಮವಹಿಸಿಲ್ಲ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಕಿಡಿಕಾರಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಒಂದೇ ದಿನದಲ್ಲಿ ೮೪೮ ನಿವೇಶನಗಳನ್ನು ಬಿಡುಗಡೆಮಾಡಿಸಿಕೊಂಡ ಪ್ರಕರಣ ದೊಡ್ಡ ಭ್ರಷ್ಟಾಚಾರವಾಗಿದೆ. ಎಚ್.ವಿ.ರಾಜೀವ್ ಇಂತಹ ಹಗರಣಗಳಿಂದ ಪಾರಾಗಲು, ರಕ್ಷಣೆ ಪಡೆಯಲು ಕಾಂಗ್ರೆಸ್ ಸೇರಿದ್ದಾರೆ. ಇಲ್ಲದಿದ್ದರೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲೇ ಪಕ್ಷ ಬಿಡಬಹುದಾಗಿತ್ತು. ಸರ್ಕಾರ ಬದಲಾದ ಕಾರಣಕ್ಕಾಗಿ ತಮ್ಮ ರಕ್ಷಣೆಗೆ ಕಾಂಗ್ರೆಸ್ ಸೇರಿಕೊಂಡರು ಎಂದು ಟೀಕಿಸಿದರು.
ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಎಚ್.ವಿ.ರಾಜೀವ್ ಮುಡಾ ಅಧ್ಯಕ್ಷರಾಗಿದ್ದಾಗ ಈ ನಿವೇಶನಗಳನ್ನು ಬಿಡುಗಡೆ ಮಾಡಿಸಿಕೊಂಡಿದ್ದಾರೆ. ಬಡಾವಣೆ ಕಾಮಗಾರಿ ಸಂಪೂರ್ಣ ಆಗದಿರುವುದು, ಸ್ಥಳೀಯ ಸಂಸ್ಥೆಗಳಿಂದ ಎನ್ಒಸಿ ಪಡೆಯದೆ ನಿವೇಶನ ಬಿಡುಗಡೆ ಮಾಡಿಸಿಕೊಂಡಿರುವುದು ಅಕ್ರಮ. ಇದರ ಬಗ್ಗೆ ಅಂದಿನ ಆಯುಕ್ತರು ಸರ್ಕಾರಕ್ಕೆ ಪತ್ರ ಬರೆದಿದ್ದರೂ ಯಾವುದೇ ಕ್ರಮಜರುಗಿಸಿಲ್ಲ ಎಂದು ಆರೋಪಿಸಿದರು.
ನಿವೇಶನ ಪಡೆದಿರುವ ಬಗ್ಗೆ ನನಗೇನು ಗೊತ್ತಿಲ್ಲ
ಇನ್ನೂ ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ 848 ನಿವೇಶನಗಳನ್ನು ಪಡೆದಿರುವ ಬಗೆಗೆ ಮಾತನಾಡಿರುವ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ತಮ್ಮ ಅಧ್ಯಕ್ಷತೆಯಲ್ಲಿರುವ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ 848 ನಿವೇಶನಗಳನ್ನು ಪಡೆದಿರುವ ಬಗ್ಗೆ ನನಗೇನೂ ಗೊತ್ತಿಲ್ಲ. ಮಾಧ್ಯಮವರು ಹೇಳಿದ ಮೇಲೆ ಗೊತ್ತಾಗಿದೆ ವಿಚಾರ ತಿಳಿದು ಮಾತನಾಡುತ್ತೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.