ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಸಮೀಪಿಸುತ್ತಿದೆ. ದಸರಾ ಹಿನ್ನೆಲೆ ಮೈಸೂರು ನಗರ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಜಂಬೂಸವಾರಿ ಮೆರವಣಿಗೆಗೆ ಕೇವಲ ಮೂರು ದಿನಗಳಷ್ಟೇ ಬಾಕಿ ಉಳಿದಿವೆ. ಇತ್ತ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿರುವ ಸ್ತಬ್ಧ ಚಿತ್ರಗಳಿಗೆ ಅಂತಿಮ ಸ್ಪರ್ಶ ನೀಡಲಾಗುತ್ತಿದೆ. ಐತಿಹಾಸಿಕ ಜಂಬೂ ಸವಾರಿ ಸಾಗುವ ಮಹಾ ಮೆರವಣಿಗೆಯಲ್ಲಿ ಹಲವು ಜನಪದ ಕಲಾತಂಡಗಳು, ನೃತ್ಯಗಳು, ಹೀಗೆ ಹಲವಾರು ವಿಶೇಷತೆಗಳಿರಲಿವೆ. ಅವುಗಳ ಪೈಕಿ ಸ್ತಬ್ದ ಚಿತ್ರಗಳು ಗಮನಾರ್ಹವಾಗಿದ್ದು, ನೋಡುಗರನ್ನು ಆಕರ್ಷಿಸಲಿದೆ. ಈ ಹಿನ್ನೆಲೆಯಲ್ಲಿ ಕುಶಲಕರ್ಮಿಗಳು ಕೊನೆ ಕ್ಷಣದ ಪೇಂಟಿಂಗ್ ಕೆಲಸಗಳನ್ನ ಮಾಡುತ್ತಿದ್ದಾರೆ.
ಮೈಸೂರಿನ ಹೊರವಲಯದಲ್ಲಿರುವ ಬಂಡಿಪಾಳ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಸ್ತಬ್ದಚಿತ್ರಗಳು ಸಿದ್ಧವಾಗುತ್ತಿವೆ.ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಹಾಸನ, ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು, ಬಳ್ಳಾರಿ, ಬೆಳಗಾವಿ, ಧಾರವಾಡ, ಹಾವೇರಿ, ಚಿತ್ರದುರ್ಗ, ಕೋಲಾರ ಸೇರಿದಂತೆ 31 ಜಿಲ್ಲೆಗಳ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಭಾಗಿಯಾಗುತ್ತಿದೆ. ಆಯಾ ಜಿಲ್ಲೆಗಳ ಸಂಸ್ಕೃತಿ, ಕಲೆ, ಸಾಹಿತ್ಯ, ಪರಂಪರೆ, ಐತಿಹಾಸಿಕ ಹಿನ್ನೆಲೆ ಕುರಿತು ಸ್ತಬ್ದ ಚಿತ್ರಗಳು ಬೆಳಕು ಚೆಲ್ಲಲಿದೆ.ಇದರ ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳು ಹಾಗು ನಿಗಮ ಮಂಡಳಿಗಳ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಭಾಗಿಯಾಗುತ್ತಿದ್ದು,ವಿಜಯದಶಮಿ ಜಂಬೂಸವಾರಿ ಮೆರವಣಿಗೆಯ ಮೆರುಗನ್ನ ಮತ್ತಷ್ಟು ಹೆಚ್ಚಿಸಲಿದೆ.