ಮೈಸೂರು: ನೇಹಾ ಹಿರೇಮಠ್ ಕೊಲೆ ಪ್ರಕರಣ ಕುರಿತು ಶಾಸಕ ತನ್ವೀರ್ ಸೇಠ್ ಬೇಸರ ವ್ಯಕ್ತಪಡಿಸಿದ್ದು, ಬಿಜೆಪಿ ಸಾವಿನ ಮನೆಯಲ್ಲಿ ರಾಜಕಾರಣ ಮಾಡುತ್ತಿದೆ. ಇದರಿಂದ ಬಿಜೆಪಿಯವರಿಗೆ ಒಳ್ಳೆಯದು ಆಗಲ್ಲ ಎಂದಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ರೀತಿ ಅಪರಾಧ ನಡೆಯಬಾರದಿತ್ತು, ನಡೆದು ಹೋಗಿದೆ. ಕಾಂಗ್ರೆಸ್ ಇನ್ನಷ್ಟು ಪರಿಣಾಮಕಾರಿಯಾಗಿ ನಡೆದುಕೊಳ್ಳಬಹುದಿತ್ತು. ಆರೋಪಿಯನ್ನು ಬಂಧಿಸಲಾಗಿದೆ. ಮಾಡಿದ ತಪ್ಪಿಗೆ ಸರಿಯಾದ ಶಿಕ್ಷೆ ಆಗಬೇಕು ಅನ್ನುವುದು ನನ್ನ ಆಗ್ರಹ. ಬಂಧಿತ ಆರೋಪಿ ಫಯಾಜ್ ಆಗದೇ ಬೇರೆ ಆಗಿದ್ದರೆ ಪರಿಸ್ಥಿತಿ ಬೇರೆ ಇರುತ್ತಿತ್ತು. ಸಾವಿನ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು. ಇದು ಬಿಜೆಪಿಯವರಿಗೆ ಶೋಭೆ ತರುವುದಿಲ್ಲ. ಬಿಜೆಪಿ ಕೇಂದ್ರ ಸರ್ಕಾರವನ್ನು ಯಶಸ್ವಿಯಾಗಿ ಮುನ್ನಡೆಸಲು ವಿಫಲವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಜನ ಕಾಂಗ್ರೆಸ್ಗೆ ಮತ ನೀಡಲಿದ್ದಾರೆ. ನರಸಿಂಹರಾಜ ಕ್ಷೇತ್ರದ ಜನ ನನಗೆ, ನನ್ನ ತಂದೆಗೆ ಆಶೀರ್ವಾದ ನೀಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲೂ ಉತ್ತಮವಾದ ಲೀಡ್ ಸಿಗಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಹೇಳಿದ್ದಾರೆ.