ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ರ ಸಂಭ್ರಮ ಮಾನೆಮಾಡಿದೆ. ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿ ದೇವತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಖ್ಯಾತ ಸಾಹಿತಿ ನಾಡೋಜ ಹಂಪನಾ ಅವರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿದ್ದಾರೆ. ಸಾಹಿತಿ ಹಂಪನಾ ಜೊತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಸೇರಿದಂತೆ ಸಚಿವರು, ಶಾಸಕರುಗಳು ಚಾಮುಂಡಿ ದೇವಿಗೆ ಪುಷ್ಪಾರ್ಚನೆ ನೇರವೇರಿಸಿದ್ದಾರೆ. ಬೆಳ್ಳಿರಥದಲ್ಲಿ ಪ್ರತಿಷ್ಠಾಪಿಸಿದ್ದ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಗಣ್ಯರು ಪುಷ್ಪಾರ್ಚನೆ ಮಾಡಿದ್ದಾರೆ. ಬೆಳಿಗ್ಗೆ 9.15 ರಿಂದ 9.45ರ ಒಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ದಸರಾ ಮಹೋತ್ಸವದ ಉದ್ಘಾಟನೆ ನೆರವೇರಿಸಲಾಗಿದೆ.
ಸಚಿವ ಕೆ ವೆಂಕಟೇಶ್, ಹೆಚ್ ಕೆ ಪಾಟೀಲ್, ಶಿವರಾಜ್ ತಂಗಡಗಿ, ಶಾಸಕರಾದ ಜಿ ಟಿ ದೇವೇಗೌಡ, ತನ್ವಿರ್ ಸೇಠ್, ದರ್ಶನ್ ದೃವನಾರಾಯಣ್, ಅನಿಲ್ ಚಿಕ್ಕಮಾಧು, ಕೆ ಹರೀಶ್ ಗೌಡ, ರವಿಶಂಕರ್, ಎ ಆರ್ ಕೃಷ್ಣಮೂರ್ತಿ, ಶ್ರೀವತ್ಸ, ರಮೇಶ್ ಬಂಡಿ ಸಿದ್ದೇಗೌಡ, ಡಾ ತಿಮ್ಮಯ್ಯ, ಸಿ ಎನ್ ಮಂಜೇಗೌಡ, ಮುಡಾ ಅಧ್ಯಕ್ಷ ಮರೀಗೌಡ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷೆ ಪುಷ್ಪ ಅಮರನಾಥ್, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಡಿಸಿ ಲಕ್ಷ್ಮಿಕಾಂತ ರೆಡ್ಡಿ ಸೇರಿದಂತೆ ಹಲವಾರು ಗಣ್ಯರು ನಾಡಹಬ್ಬ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಇನ್ನು ಇಂದಿನಿಂದ ಅಕ್ಟೋಬರ್ 12ರ ವರೆಗೆ ಮೈಸೂರು ದಸರಾ ನಡೆಯಲಿದೆ. ಪ್ರತಿದಿನವೂ ವಿಶೇಷ ಪೂಜಾ ಕೈಂಕರ್ಯಗಳು ಅಂಬಾವಿಲಾಸ ಅರಮನೆ ಹಾಗೂ ಚಾಮುಂಡೇಶ್ವರಿ ದೇಗುಲದಲ್ಲಿ ಜರುಗಲಿವೆ. ಅ.12 ರಂದು ಜಗತ್ಪ್ರಸಿದ್ಧ ದಸರಾ ಜಂಬೂ ಸವಾರಿ ಮೆರವಣಿಗೆ ನಡೆಯಲಿದ್ದು, ದಸರಾ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತು ರಾಜಬೀದಿಗಳಲ್ಲಿ ಸಾಗುವನು. ಅಲ್ಲದೆ ಇಂದಿನಿಂದ ದಸರಾ ಅಂಗವಾಗಿ ಆಯೋಜಿಸಲಾಗಿರುವ ಎಲ್ಲಾ ಕಾರ್ಯಕ್ರಮಗಳು ಉದ್ಘಾಟನೆಗೊಳ್ಳಲಿದೆ. ದಸರಾ ಚಲನಚಿತ್ರೋತ್ಸವ, ದಸರಾ ಆಹಾರ ಮೇಳ, ಫಲಪುಷ್ಪ ಪ್ರದರ್ಶನ, ದಸರಾ ಕುಸ್ತಿ, ದಸರಾ ಶಿಲ್ಪಕಲೆ ಮತ್ತು ಚಿತ್ರಕಲಾ ಶಿಬಿರ, ದಸರಾ ಸಿಎಂ ಕಪ್ ಕ್ರೀಡಾಕೂಟ, ಪುಸ್ತಕ ಮೇಳ, ನವರಾತ್ರಿ ಜಾನಪದ ರಂಗ ಉತ್ಸವ, ವಸ್ತು ಪ್ರದರ್ಶನ ಸೇರಿದಂತೆ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಗಣ್ಯರಿಂದ ಚಾಲನೆ ನೀಡಲಾಗುತ್ತಿದೆ.