ವಿವಿಧ ಸಂಘಟನೆಗಳು ಮಂಗಳವಾರ ಕರೆ ನೀಡಿದ್ದ ಬೆಂಗಳೂರು ಬಂದ್ ವೇಳೆ ರಾಜ್ಯದ ಶಾಂತಿಯುತ ಪ್ರತಿಭಟನೆ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಸೆ.29ರಂದು ಮತ್ತೊಂದು ಬಂದ್ ಮಾಡುವ ಅಗತ್ಯವಿಲ್ಲ. ನ್ಯಾಯಾಲಯ ಕೂಡ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾವೇರಿ ವಿಚಾರವಾಗಿ ಪಕ್ಷಾತೀತವಾಗಿ ಹೋರಾಟ ಮಾಡಿದ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಎಲ್ಲವೂ ಶಾಂತಿಯುತವಾಗಿ ನಡೆದಿದೆ.
ಈ ಮಧ್ಯೆ, ಕೆಲ ಸಂಘಟನೆಗಳು ಸೆ.29ಕ್ಕೆ ಮತ್ತೆ ರಾಜ್ಯ ಬಂದ್ ಮಾಡುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರ ಅಗತ್ಯವಿಲ್ಲ. ನ್ಯಾಯಾಲಯ ಕೂಡ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಭಾವಿಸಿದ್ದೇನೆ. ಹಾಗಾಗಿ ಮುಂದೆ ರಾಜ್ಯದ ಜನರೆಲ್ಲರೂ ಮಳೆಗಾಗಿ ಪ್ರಾರ್ಥನೆ ಮಾಡೋಣ ಎಂದರು. ಇನ್ನು, ಬಂದ್ ವೇಳೆ ಜಯನಗರದ ಹೋಟೆಲ್ ವೊಂದರ ಮೇಲೆ ಕಲ್ಲು ತೂರಿ ಕೆಲ ಕಿಡಿಗೇಡಿಗಳು ದಾಂಧಲೆ ನಡೆಸಿರುವ ಪ್ರಕರಣ ಸಂಬಂಧ ಅವರು ಯಾರೇ ಆಗಿದ್ದರು ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಇದೇ ವೇಳೆ ಡಿ.ಕೆ.ಶಿವಕುಮಾರ್ ಹೇಳಿದರು.