ಬೆಂಗಳೂರು : ಬ್ಯಾಡಗಿ ಮೆಣಸಿನಕಾಯಿ ಬೆಲೆ ಕುಸಿತಕ್ಕೆ ಕಾರಣವೇನೆಂದು ತಿಳಿದು, ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದೇನೆ. ವರದಿ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಗ್ನಿಶಾಮಕ ವಾಹನ ಸೇರಿದಂತೆ ಕನಿಷ್ಠ ಮೂರು ವಾಹನಗಳಿಗೆ ರೈತರು ಬೆಂಕಿ ಹಚ್ಚಿದ್ದಾರೆ. ಮತ್ತು ಎಪಿಎಂಸಿ ಕಚೇರಿಯಲ್ಲಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ತಿಳಿಸಿದರು.
ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ವಾಹನವನ್ನು ಮಾರುಕಟ್ಟೆ ಒಳಗೆ ಪ್ರವೇಶಿಸದಂತೆ ತಡೆದಿದ್ದಾರೆ. ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ವಾಗ್ವಾದ ನಡೆದಿದೆ. ಕೆಲ ಹೊತ್ತಿನ ಬಳಿಕ ಪೊಲೀಸರು ಗುಂಪನ್ನು ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.
ಗೃಹ ಸಚಿವ ಜಿ.ಪರಮೇಶ್ವರ ಸುದ್ದಿಗಾರರೊಂದಿಗೆ ಮಾತನಾಡಿ, ಒಂದೇ ದಿನದಲ್ಲಿ ಮೆಣಸಿನಕಾಯಿ ಬೆಲೆ ಕ್ವಿಂಟಲ್ ಗೆ 20 ಸಾವಿರದಿಂದ 8 ಸಾವಿರಕ್ಕೆ ಕುಸಿದಿದ್ದು, ಹಾವೇರಿ ಎಪಿಎಂಸಿ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದೆ. ಈ ರೀತಿಯ ಬೆಲೆ ಕುಸಿತ ಎಲ್ಲ ಎಪಿಎಂಸಿ ಮಾರುಕಟ್ಟೆಗಳಲ್ಲಿ ನಡೆದಿದೆಯೇ ಅಥವಾ ಹಾವೇರಿ ಮಾರುಕಟ್ಟೆಯಲ್ಲಿ ಮಾತ್ರವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.