ಪ್ರತಿನಿಧಿ ವರದಿ ಆಲೂರು
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ತಾಲೂಕು ಬಿಜೆಪಿ ಅಧ್ಯಕ್ಷೆ ಉಮಾ ರವಿಪ್ರಕಾಶ್ ನೇತೃತ್ವದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಬಸ್ ನಿಲ್ದಾಣ ಮುಂಭಾಗ ರಸ್ತೆ ಸಂಚಾರ ತಡೆ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಂತರ ತಾಲೂಕೂ ಕಚೇರಿಗೆ ತೆರಳಿ ಉಪ ತಹಸೀಲ್ದಾರ್ ಸೋಮಣ್ಣ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆ ನಿಭಾಯಿಸಲು ಸಾಧ್ಯವಾಗದೆ ಆರ್ಥಿಕವಾಗಿ ದಿವಾಳಿಯಾಗಿದೆ. ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪೆಟ್ರೋಲ್, ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆಯನ್ನು ದಿಢೀರನೇ ದೊಡ್ಡ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ. ಇದರಿಂದ ರಾಜ್ಯದಲ್ಲಿ ಏಕಾಏಕಿ 1 ಲೀಟರ್ ಪೆಟ್ರೋಲ್ ಬೆಲೆಯನ್ನು 3 ರೂಪಾಯಿ ಮತ್ತು ಡೀಸೆಲ್ ದರವನ್ನು 3 ರೂಪಾಯಿ 50 ಪೈಸೆ ಹೆಚ್ಚಳವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಬಿಜೆಪಿ ಅಧ್ಯಕ್ಷ ಉಮಾ ರವಿಪ್ರಕಾಶ್ ಮಾತನಾಡಿ, ತೈಲ ಬೆಲೆ ಏರಿಕೆಯಿಂದ ಜನರ ಸಂಚಾರ ಹಾಗೂ ಸರಕು ಸಾಗಣೆ ವೆಚ್ಚ ಹೆಚಾಗುತ್ತದೆ ಇದರಿಂದ ದಿನ ನಿತ್ಯ ಖರೀದಿಸುವ ತರಕಾರಿ, ಔಷಧಿ, ದಿನಸಿ ವಸ್ತುಗಳು ಸೇರಿದಂತೆ ಎಲ್ಲ ಬೆಲೆ ಗಗನಕ್ಕೇರುತ್ತವೆ. ಇದರಿಂದ ಸಹಜವಾಗಿಯೇ ಬಡವರ ಮತ್ತು ಜನಸಾಮಾನ್ಯರ ತಿಂಗಳ ವೆಚ್ಚ ಹೆಚ್ಚುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ಮಾಜಿ ಅಧ್ಯಕ್ಷ ಡಾ.ಜಯರಾಜ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ 1 ವರ್ಷದಲ್ಲಿ ಹಾಲು, ಆಲ್ಕೋಹಾಲ್, ಸ್ಟ್ಯಾಂಪ್ ಡ್ಯೂಟಿ ಶುಲ್ಕ, ಆಸ್ತಿ ಮಾರ್ಗಸೂಚಿ ದರ, ವಿದ್ಯುತ್ ದರ ಹೆಚ್ಚಿಸಿದ್ದು, ಈಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡಿದೆ. ಈ ಮೂಲಕ ರಾಜ್ಯದ ಜನರ ತಲೆ ಮೇಲೆ ಕಲ್ಲು ಚಪ್ಪಡಿ ಹಾಕಿ, ಜೀವ ಹಿಂಡುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಹುಲ್ಲಳ್ಳಿ ನಾಗರಾಜ್ ಮಾತನಾಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಪಂಚ ಗ್ಯಾರಂಟಿಗಳು ಕೈ ಹಿಡಿಯಲಿವೆ ಎಂಬ ಭ್ರಮೆಯಲ್ಲಿದ್ದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ತೀರ್ಪಿನಿಂದ ಸೋತು, ಸೇಡನ್ನು ತೀರಿಸಿಕೊಳ್ಳಲು ರಾಜ್ಯದ ಜನರಿಗೆ ಬೆಲೆ ಏರಿಕೆಯ ಶಿಕ್ಷೆ ನೀಡುತ್ತಿದೆ. ಇಂತಹ ಸೇಡಿನ ರಾಜಕಾರಣ ಮಾಡುವ ಕಾಂಗ್ರೆಸ್ ಪಕ್ಷ ತನ್ನ ಬೆಲೆ ಏರಿಕೆಯ ನೀತಿಯನ್ನು ಹಿಂಪಡೆಯದಿದ್ದರೆ, ಮುಂದಿನ ದಿನಗಳಲ್ಲಿ ಜನರು ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿ ಮಾಡಿ ಸೇಡು ತೀರಿಸಿಕೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪೂರ್ವಯ್ಯ, ಯುವ ಮೋರ್ಚಾ ಅಧ್ಯಕ್ಷ ಅನುಫ್ ರಾಜ್, ಲೋಕೇಶ್ ಕಣಗಾಲ್, ತಾಲೂಕು ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಬಾಲ ಲೋಚನ, ಬಿಜೆಪಿ ಮುಖಂಡರಾದ ಎ.ಎಚ್.ರಮೇಶ್, ಶಶಿಧರ್, ಹೇಮಂತ್, ಮೋಹನ್ ಮಾವನೂರು, ನಟರಾಜ್ ಸೋಂಪುರ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.