– ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ
– ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ
ಪ್ರತಿನಿಧಿ ವರದಿ ಮೈಸೂರು
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಕಾರ್ಯಕರ್ತರು ಬೂತ್ಮಟ್ಟದಲ್ಲಿ ಸಂಘಟಿತರಾಗಿ ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ರೆಡ್ಡಿ ಕರೆ ನೀಡಿದರು.
ಬಿಜೆಪಿ ಮೈಸೂರು ಗ್ರಾಮಾಂತರ ವಿಭಾಗದ ವತಿಯಿಂದ ಮಂಗಳವಾರ ಬೋಗಾದಿ ವೃತ್ತದಲ್ಲಿರುವ ಖಾಸಗಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿ.ಪಂ, ತಾ.ಪಂ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಯಾವಾಗ ಬೇಕಾದರೂ ಘೋಷಣೆಯಾಗಬಹುದು. ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಬೇಕೆಂಬುದು ಪಕ್ಷದ ನಾಯಕರ ನಿರೀಕ್ಷೆಯಾಗಿದೆ. ಪಕ್ಷವನ್ನು ಪೂರ್ಣ ಬಹುಮತದ ಮೂಲಕ ಅಧಿಕಾರಕ್ಕೆ ತರುವುದು ಪ್ರತಿಯೊಬ್ಬ ಕಾರ್ಯಕರ್ತರು, ಮುಖಂಡರ ಗುರಿಯಾಗಿರಬೇಕು. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಗಳಲ್ಲಿ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವಂತಾಗಬೇಕು ಎಂದು ತಿಳಿಸಿದರು.
ರಾಜ್ಯದ ಪ್ರತಿಯೊಂದು ಬೆಳವಣಿಗೆಯನ್ನು ಕೇಂದ್ರದ ನಾಯಕರು ಗಮನಿಸುತ್ತಿದ್ದು, ಪ್ರತಿ ದಿನವೂ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳಿಗೆ ದೂರವಾಣಿ ಮೂಲಕ ಪಕ್ಷದ ಚಟುವಟಿಕೆಗಳ ಕುರಿತು ಮಾಹಿತಿ ಪಡೆಯುತ್ತಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಆಗಸ್ಟ್ ೧೫ ರಿಂದ ೧೫ ದಿನಗಳ ಕಾಲ ಕಾರ್ಯಕರ್ತರು ತಮ್ಮ ಬೂತ್ಗಳ ವ್ಯಾಪ್ತಿಗೆ ಬರುವ ಪ್ರತಿ ಮನೆಗೂ ಹೋಗಬೇಕು. ಮತದಾರರನ್ನು ಮಾತನಾಡಿಸುವ ಮೂಲಕ ಅವರ ಮನ ಗೆಲ್ಲುವ ಪ್ರಯತ್ನವನ್ನು ಮಾಡಬೇಕು. ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತ, ಮಿತಿ ಮೀರಿದ ಭ್ರಷ್ಟಾಚಾರ, ಆಡಳಿತ ವೈಫಲ್ಯವನ್ನು ಜನರಿಗೆ ತಿಳಿಸಬೇಕು ಎಂದರು.
ಕಾರ್ಯಕಾರಣಿ ಸಭೆಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷ ಆರ್.ರಘು ಕೌಟಿಲ್ಯ, ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಅಲ್ಪಸಂಖ್ಯಾತರ ಮೋರ್ಚಾದ ರಾಜ್ಯಾಧ್ಯಕ್ಷ ಅನಿಲ್ ಥಾಮಸ್, ಬಿಜೆಪಿ ಮೈಸೂರು ವಿಭಾಗ ಪ್ರಭಾರಿ ಮೈ.ವಿ. ರವಿಶಂಕರ್, ಮಾಜಿ ಸಂಸದ ಮುನಿಸ್ವಾಮಿ, ಮಾಜಿ ಸಚಿವ ಸಿ.ಎಚ್. ವಿಜಯ ಶಂಕರ್, ಮಾಜಿ ಶಾಸಕರಾದ ಹರ್ಷವರ್ಧನ್, ಎನ್.ಬಾಲರಾಜು, ಮಾಜಿ ಎಂಎಲ್ಸಿ ಸಿದ್ದರಾಜು, ಪ್ರಮುಖರಾದ ಎಸ್.ಮಹದೇವಯ್ಯ, ಹೇಮಂತ್ ಕುಮಾರ್ ಗೌಡ, ಪುಟ್ಟಬುದ್ಧಿ, ಬಿಜೆಪಿ ಗ್ರಾಮಾಂತರ ಉಪಾಧ್ಯಕ್ಷ ಬಾಲಕೃಷ್ಣ, ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಮಡವಾಡಿ, ಕಿರಣ್ ಜಯರಾಮೇಗೌಡ, ವಕ್ತಾರ ದಯಾನಂದ ಪಟೇಲ್ ಇದ್ದರು.
=============