– ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ನಡೆದ ರಥೋತ್ಸವ
ಪ್ರತಿನಿಧಿ ವರದಿ ಮೈಸೂರು
ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ, ದಕ್ಷಿಣಕಾಶಿ ಎಂದೇ ಕರೆಯಲ್ಪಡುವ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಶ್ರೀಕಂಠೇಶ್ವರಸ್ವಾಮಿಯ ಪಂಚಮಹಾರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.
ಪಂಚಮಹಾರಥೋತ್ಸವದ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ನಂಜನಗೂಡಿನಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಶುಕ್ರವಾರ ಬೆಳಗ್ಗೆ 6.30ರಿಂದ 6.50ರೊಳಗಿನ ಶುಭ ಮೀನ ಲಗ್ನದಲ್ಲಿ ದೊಡ್ಡ ಜಾತ್ರಾ ಮಹೋತ್ಸವದ ಅಂಗವಾಗಿ ಪಂಚಮಹಾರಥೋತ್ಸವ ಅದ್ದೂರಿಯಾಗಿ ನೆರವೇರಿತು. ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಅಸಂಖ್ಯಾತ ಭಕ್ತಾದಿಗಳು ಶ್ರೀಕಂಠೇಶ್ವರಸ್ವಾಮಿಯ ಮಹಾ ರಥೋತ್ಸವದಲ್ಲಿ ಪಾಲ್ಗೊಳ್ಳುವ ಮೂಲಕ ದೇವರ ಕೃಪೆಗೆ ಪಾತ್ರರಾದರು.
ಶುಭ ಮೀನ ಲಗ್ನದಲ್ಲಿ ಪಂಚರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ನೆರೆದಿದ್ದ ಅಸಂಖ್ಯಾತ ಭಕ್ತರು ಶ್ರೀಕಂಠೇಶ್ವರಸ್ವಾಮಿಯ ರಥವನ್ನು ಎಳೆದು ಸಂಭ್ರಮಿಸಿದರು. ಪಂಚಮಹಾರಥೋತ್ಸವಕ್ಕೆ ಚಾಲನೆ ದೊರೆಯುತ್ತಿದ್ದಂತೆ ವಿಘ್ನನಿವಾರಕ ಗಪಣತಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದ ರಥ ಮುಂಚೂಣಿಯಲ್ಲಿ ಸಾಗಿದರೆ, ಇದಾದ ನಂತರದಲ್ಲಿ ಶ್ರೀಕಂಠೇಶ್ವರಸ್ವಾಮಿ, ಪಾರ್ವತಿದೇವಿ, ಸುಬ್ರಹ್ಮಣ್ಯಸ್ವಾಮಿ ಹಾಗೂ ಚಂಡಿಕೇಶ್ವರಸ್ವಾಮಿಯ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ರಥಗಳು ಸಾಗಿದವು. ವಿವಿಧ ಬಗೆಯ ಹೂವುಗಳಿಂದ ಅಲಂಕೃತಗೊಂಡಿದ್ದ 205 ಟನ್ ತೂಕ ಹಾಗೂ 108 ಅಡಿ ಎತ್ತರ ಗೌತಮ ರಥದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀಕಂಠೇಶ್ವರಸ್ವಾಮಿಯ ರಥೋತ್ಸವ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗುತ್ತಿದ್ದಂತೆ ನೆರದಿದ್ದ ಅಸಂಖ್ಯಾತ ಭಕ್ತಾದಿಗಳ ಜೈಕಾರದ ಘೋಷಣೆ ಮುಗಿಲು ಮುಟ್ಟಿತು. ಪಂಚ ರಥಗಳಿಗೂ ವಿವಿಧ ಬಣ್ಣದ ಬಾವುಟಗಳನ್ನು ಕಟ್ಟಿ, ವಿವಿಧ ಬಗೆಯ ಹೂವುಗಳು, ತಳಿರು ತೋರಣಗಳಿಂದ ಅಲಂಕಾರ ಮಾಡಲಾಗಿತ್ತು.
ಹರಕೆ ತೀರಿಸಿದ ಭಕ್ತರು:
ಶ್ರೀಕಂಠೇಶ್ವರಸ್ವಾಮಿಯ ಪಂಚಮಹಾರಥೋತ್ಸವದ ಹಿನ್ನೆಲೆಯಲ್ಲಿ ಪಾಲ್ಗೊಂಡಿದ್ದ ಭಕ್ತಾದಿಗಳು ಮುಂಜಾನೆಯೇ ಕಪಿಲಾ ನದಿಯಲ್ಲಿ ಪುಣ್ಯಸ್ನಾನ ಮಾಡಿ, ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ರಥೋತ್ಸವದ ಸಂದರ್ಭದಲ್ಲಿ ಪಂಚರಥಗಳು ಸಾಗುತ್ತಿದ್ದ ವೇಳೆ ರಥಗಳ ಮೇಲೆ ಹಣ್ಣುಜವನವನ್ನು ಎಸೆದು ಹರಕೆ ತೀರಿಸುವ ಮೂಲಕ ಭಕ್ತಿಭಾವ ಮೆರೆದರು. ಮಹಾರಥೋತ್ಸವದ ಹಿನ್ನೆಲೆಯಲ್ಲಿ ಮೈಸೂರು ಸೇರಿದಂತೆ ಮಂಡ್ಯ, ಚಾಮರಾಜನಗರ, ಹಾಸನ ಸೇರಿದಂತೆ ರಾಜ್ಯದ ವಿವಿಧ ಕಡೆಗಳಿಂದ ಭಕ್ತರು ಆಗಮಿಸಿದ್ದರು.
ದೇವರಿಗೆ ವಿಶೇಷ ಪೂಜೆ:
ಪಂಚಮಹಾರಥೋತ್ಸವದ ಹಿನ್ನೆಲೆಯಲ್ಲಿ ಶುಕ್ರವಾರ ಮುಂಜಾನೆಯೇ ಶ್ರೀಕಂಠೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕರ ನೇತೃತ್ವದಲ್ಲಿ ದೇವರಿಗೆ ವಿವಿಧ ಧಾರ್ಮಿಕ ಪೂಜಾಕೈಂಕರ್ಯಗಳನ್ನು ನೆರವೇರಿಸಲಾಯಿತು. ಮಹಾರಥೋತ್ಸವಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ದಾಸೋಹ ಸೇರಿದಂತೆ ಎಲ್ಲ ರೀತಿ ಸೌಕರ್ಯಗಳನ್ನು ಕಲ್ಪಿಸಲಾಗಿತ್ತು. ರಥೋತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವ ಸಲುವಾಗಿ ಪಟ್ಟಣದಲ್ಲಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು.
ಶ್ರೀಕಂಠೇಶ್ವರಸ್ವಾಮಿಯ ಪಂಚಮಹಾರಥೋತ್ಸವದಲ್ಲಿ ಸ್ಥಳೀಯ ಶಾಸಕ ದರ್ಶನ್ ಧ್ರುವನಾರಾಯಣ್, ಮಾಜಿ ಶಾಸಕರಾದ ಹರ್ಷವರ್ಧನ್, ಕಳಲೆ ಕೇಶವಮೂರ್ತಿ, ಕಾಂಗ್ರೆಸ್ ಮುಖಂಡ ಸುನೀಲ್ ಬೋಸ್, ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಎಎಸ್ಪಿ ನಂದಿನಿ, ಡಿವೈಎಸ್ಪಿ ರಘು, ತಹಶೀಲ್ದಾರ್ ಶಿವಕುಮಾರ್ ಸೇರಿದಂತೆ ದೇವಸ್ಥಾನದ ಆಡಳಿತ ಮಂಡಳಿ ಅಧಿಕಾರಿಗಳು ಭಾಗವಹಿಸಿದ್ದರು.
=====================
ಬಾಕ್ಸ್
ಕಳಚಿಕೊಂಡ ರಥದ ಚಕ್ರ
ಪಂಚಮಹಾರಥೋತ್ಸವದ ಸಂದರ್ಭದಲ್ಲಿ ಗಣಪತಿ ರಥದ ಚಕ್ರ ಕಳಚಿಕೊಂಡ ಪರಿಣಾಮ ಕೆಲಕಾಲ ಆತಂಕ ಉಂಟಾಗಿತ್ತು. ನಂಜನಗೂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿದ ಗಣಪತಿ ರಥ ಸ್ವಸ್ಥಾನಕ್ಕೆ ತಲುಪಿದ ಸಂದರ್ಭದಲ್ಲಿ ರಥದ ಎಡ ಭಾಗದ ಹಿಂಬದಿಯ ಚಕ್ರ ಕಳಚಿಕೊಂಡಿದೆ. ಈ ವೇಳೆ ಸ್ಥಳದಲ್ಲಿದ್ದ ದೇವಸ್ಥಾನದ ಸಿಬ್ಬಂದಿ ಕೂಡಲೇ ರಥದ ಚಕ್ರವನ್ನು ಸರಿಪಡಿಸಿದ ಪರಿಣಾಮ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಲಿಲ್ಲ.
==================