ಬೆಂಗಳೂರು: ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನ ತಕ್ಷಣ ಬಿಡುಗಡೆ ಮಾಡಲಿ. ಇಲ್ಲದಿದ್ದರೆ ಜನ ಮತ್ತು ಜಾನುವಾರುಗಳೊಂದಿಗೆ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎಚ್ಚರಿಕೆ ನೀಡಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸರ್ಕಾರ ಹಾಲು ಉತ್ಪಾದಕರ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದೆ. ಹಣ ಬಾಕಿ ಉಳಿಸಿಕೊಂಡಿದ್ದರಿಂದ ಹಾಲು ಉತ್ಪಾದನೆ ಕುಂಠಿತಗೊಂಡಿದೆ. ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡುತ್ತಿದ್ದರು. ಹೀಗಾಗಿ ಆಗ ಪ್ರತಿ ನಿತ್ಯ 26 ಲಕ್ಷ ರೈತರಿಂದ 85 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿತ್ತು. ಈಗ ಕಾಂಗ್ರೆಸ್ ಸರ್ಕಾರ 716 ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದರಿಂದ ರಾಜ್ಯದಲ್ಲಿ 10 ಲಕ್ಷ ಲೀಟರ್ ಹಾಲು ಸಂಗ್ರಹ ಕಡಿಮೆ ಆಗಿದೆ. ಜನ ಅಷ್ಟೇ ಅಲ್ಲ ಜಾನುವಾರುಗಳೂ ಕೂಡ ಸರ್ಕಾರದ ಮೇಲೆ ಶಾಪ ಹಾಕುತ್ತಿವೆ. ರಾಜ್ಯ ಸರ್ಕಾರ ಜಾನುವಾರುಗಳ ಕೋಪಕ್ಕೂ ಬಲಿಯಾಗಿದೆ. ರಾಜ್ಯ ಸರ್ಕಾರ ತನ್ನ ಹೊಣೆ ಮರೆತು ಕೇಂದ್ರದ ಕಡೆ ಬೊಟ್ಟು ಮಾಡುತ್ತಿದೆ. ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನ ತಕ್ಷಣ ಬಿಡುಗಡೆ ಮಾಡಲಿ. ಇಲ್ಲದಿದ್ದರೆ ರೈತರ ಹಣ ಬಾಕಿ ಉಳಿಸಿಕೊಂಡ ಪಾಪ ಸರ್ಕಾರಕ್ಕೆ ತಗಲುತ್ತದೆ. ಹಣ ಬಿಡುಗಡೆ ಮಾಡದಿದ್ದರೆ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.