ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 100 ಹೊಸ ಅಶ್ವಮೇಧ ಕ್ಲಾಸಿಕ್ ಬಸ್ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ನಡೆದ ಕಾರ್ಯಕ್ರಮದಲ್ಲಿ ಮೊದಲ ಹಂತದಲ್ಲಿ 100 ಹೊಸ ಕ್ಲಾಸಿಕ್ ಬಸ್ಗಳಿಗೆ ಹಸಿರು ನಿಶಾನೆ ದೊರೆತಿದ್ದು, ಮುಂದಿನ ದಿನಗಳಲ್ಲಿ ಒಂದು ಸಾವಿರ ಹೊಸ ಬಸ್ಗಳನ್ನು ಖರೀದಿಸುವ ಗುರಿ ಸಂಸ್ಥೆ ಹೊಂದಿದೆ. ಅಶ್ವಮೇಧ ಕ್ಲಾಸಿಕ್ ಬಸ್ಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ ಪ್ಯಾನಿಕ್ ಬಟನ್, ಜಿಪಿಎಸ್, ಎರಡು ರೇರ್ ಕ್ಯಾಮೆರಾ, ಮೊಬೈಲ್ ಚಾರ್ಜಿಂಗ್ ಪಾಯಿಂಟ್, 52 ಬಜೆಟ್ ಆಸನ, ಬಸ್ ಒಳಗೆ ಮತ್ತು ಹೊರಗೆ ಎಲ್ಇಡಿ ಮಾರ್ಗ ಫಲಕ ಅಳವಡಿಸಲಾಗಿದೆ. ಈ ಬಸ್ಗಳು ರಾಜಧಾನಿಯಿಂದ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಸಂಚರಿಸಲಿವೆ. ಇನ್ನು ಈ ಅಶ್ವಮೇಧ ಕ್ಲಾಸಿಕ್ ಬಸ್ಗಳಲ್ಲೂ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅವಕಾಶ ನೀಡಲಾಗಿದೆ.