ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಹೊಸ ಕಂಪನ ಶುರುವಾಗಿದೆ. ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗಿದ್ದು ಒಂದು ಕಡೆಯಾದ್ರೆ ಮತ್ತೊಂದೆಡೆ ಟಿಕೆಟ್ಗಾಗಿ ಲಾಬಿ ನಡೆಸಿದವರು ಬಂಡಾಯದ ಮುನ್ಸೂಚನೆ ನೀಡಿದ್ದಾರೆ. ಅದರಲ್ಲೂ ಪ್ರಮುಖವಾಗಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಈ ಬಾರಿ ತಮ್ಮ ಮಗನಿಗೆ ಟಿಕೆಟ್ ಕೊಡಿಸಲು ಭಾರೀ ಕಸರತ್ತು ನಡೆಸಿದ್ದರು. ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಈಗ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂತೇಶ್ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಇದರಿಂದ ಬೇಸರಗೊಂಡಿರುವ ಈಶ್ವರಪ್ಪ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಗುಡುಗಿದ್ದಾರೆ.
ಈ ಬಗ್ಗೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಕೆ.ಇ.ಕಾಂತೇಶ್ ಗೆ ಹಾವೇರಿ ಬಿಜೆಪಿ ಟಿಕೆಟ್ ಕೊಡಿಸುತ್ತೇನೆಂದು ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದರು. ಹಾವೇರಿ ಭಾಗದಲ್ಲಿ ಕಾಂತೇಶ್ ಓಡಾಡಿ ಜನರ ವಿಶ್ವಾಸ ಗಳಿಸಿದ್ದ. ವಿವಿಧ ಮಠಾಧೀಶರು ನನ್ನ ಮಗ ಕಾಂತೇಶ್ ಬೆನ್ನಿಗೆ ನಿಂತಿದ್ದರು. ಆದ್ರೆ, ಇಂದು ನನ್ನ ಮಗ ಕೆ.ಇ.ಕಾಂತೇಶ್ ಗೆ ಟಿಕೆಟ್ ಕೈತಪ್ಪಿದೆ. ಯಡಿಯೂರಪ್ಪ ನಮಗೆ ಮೋಸ ಮಾಡಿದ್ದಾರೆಂದು ಬೇಸರವಿದೆ ಎಂದು ಅಸಮಾಧಾನ ಹೊರಕಿದರು.