ಬೆಂಗಳೂರು, ಜನವರಿ 19: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಎನ್ಡಿಎ ಮೈತ್ರಿಕೂಟದ ನೇತೃತ್ವ ವಹಿಸುವಂತೆ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಹ್ವಾನ ಕೊಟ್ಟಿದ್ದಾರೆ. ಕುಮಾರಸ್ವಾಮಿ ಮತ್ತು ಅಮಿತ್ ಶಾ ಬುಧವಾರ ರಾತ್ರಿ ದೆಹಲಿಯಲ್ಲಿ ಮಾತುಕತೆ ನಡೆಸಿದ ವೇಳೆ ಈ ವಿಚಾರ ಪ್ರಸ್ತಾಪವಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಬಿಜೆಪಿ ನಾಯಕರ ಜತೆ ಸಮನ್ವಯ ಸಾಧಿಸಲು ಹೆಚ್ಡಿಕೆ ನೇತೃತ್ವ ವಹಿಸಲಿ ಎಂಬ ಅಭಿಪ್ರಾಯವನ್ನು ಅಮಿತ್ ಶಾ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ, ಜೆಡಿಎಸ್ ಕ್ಷೇತ್ರ ಹಂಚಿಕೆಯ ಬಗ್ಗೆಯೂ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ. ಜೆಡಿಎಸ್ ಗೆಲ್ಲಲು ಅವಕಾಶ ಇರುವ ಮೂರು ಕ್ಷೇತ್ರಗಳನ್ನು ಕುಮಾರಸ್ವಾಮಿ ಕೇಳಿದ್ದಾರೆ. ಇದರ ಜೊತೆಗೆ ರಾಜ್ಯಸಭಾ ಸ್ಥಾನ ಅಥವಾ ಮಂತ್ರಿಸ್ಥಾನ ನೀಡುವ ಭರವಸೆಯನ್ನೂ ಅವರಿಗೆ ಅಮಿತ್ ಶಾ ನೀಡಿದ್ದಾರೆ ಎನ್ನಲಾಗಿದೆ.