ನಾನು ಮುಂಬರುವ ಲೋಕಸಭಾ ಚುನಾವಣೆಯ ಅಭ್ಯರ್ಥಿಯಲ್ಲ ಎಂದು ಮೈಸೂರಿನಲ್ಲಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ. ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಸಿದ್ದತೆ ನಡೆಯುತ್ತಿದೆ. ಮಂತ್ರಿಗಳು ಸ್ಪರ್ಧಿಸಬೇಕೆಂದು ಚರ್ಚೆಯಾಗಿಲ್ಲ. ಮಂತ್ರಿಗಳು ಸ್ಪರ್ಧಿಸಬೇಕೆಂಬ ಒತ್ತಾಯವಿಲ್ಲ. ಗೆಲ್ಲುವ ಅವಕಾಶ ಆಧರಿಸಿ ಅಭ್ಯರ್ಥಿಗಳ ಆಯ್ಕೆಯಾಗಲಿದೆ. ನಾನು ಲೋಕಸಭೆಗೆ ಅಭ್ಯರ್ಥಿಯಲ್ಲ. ನಾನು ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡುತ್ತೇನೆ ಎಂದರು. ಇದೇ ವೇಳೆ ತಮ್ಮ ಮಗನಿಗೆ ಟಿಕೆಟ್ ನೀಡುವ ವಿಚಾರಕ್ಕೆ ಮಾತನಾಡಿ, ನನ್ನ ಮಗ ಸುನಿಲ್ ಬೋಸ್ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ. ಸುನಿಲ್ ಬೋಸ್ ಗೆ ಮೂರು ಬಾರಿ ವಿಧಾನಸಭೆ ಚುನಾವಣೆಯ ಟಿಕೆಟ್ ಕೊಟ್ಟಿಲ್ಲ. ಆದರೂ ಬೇಸರ ಮಾಡಿಕೊಳ್ಳದೇ ಪಕ್ಷದ ಒಳಿತಿಗಾಗಿ ಕೆಲಸ ಮಾಡುತ್ತಿದ್ದಾನೆ. ಸಹಜವಾಗಿಯೇ ಅವನಿಗಿಂತ ಕಿರಿಯರು, ಪಕ್ಷದ ಸದಸ್ಯರಲ್ಲದವರೂ ಕಾಂಗ್ರೆಸ್ ನಲ್ಲಿ ಶಾಸಕರಾಗಿದ್ದಾರೆ. ನನ್ನ ಮಗನಿಗೇ ಟಿಕೆಟ್ ಕೊಡಿ ಎಂದು ಕೂಡ ನಾನು ಶಿಫಾರಸ್ಸು ಮಾಡಿಲ್ಲ. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ ಎಂದು ಹೇಳಿದರು.