ಕಲಬುರಗಿ: ಲೋಕಸಭಾ ಚುನಾವಣೆ ಫಲಿತಾಂಶ ಏನೇ ಆಗಲಿ, ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆ ಉದ್ಭವಿಸಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲುಂಟಾದರೆ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳು ನಿಂತುಹೋಗಲಿವೆಯೇ ಎಂದು ಕಲಬುರಗಿಯಲ್ಲಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಯೋಜನೆಗಳು ಚುನಾವಣೆಗೋಸ್ಕರ ಅಥವಾ ಚುನಾವಣೆ ಗೆಲ್ಲಲು ಆಗಿರಲಿಲ್ಲ, ಬಡವರ ಬದುಕನ್ನು ಹಸನಾಗಿಸಿ, ಬೆಲೆಗಳು ಗಗನಕ್ಕೇರಿರುವ ಇವತ್ತಿನ ದಿನಗಳಲ್ಲಿ ಅವರು ನಿರಾತಂಕದಿಂದ ನೆಮ್ಮದಿಯ ಬದುಕು ನಡೆಸಲಿ ಎಂಬ ಉದ್ದೇಶದಿಂದ ಜಾರಿಗೊಳಿಸಲಾಗಿದೆ, ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಹೇಳಿದರು.