ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರ ಕೈತಪ್ಪಿ ಜೆಡಿಎಸ್ ಪಾಲಾಗಿರುವುದರಿಂದ ಸಂಸದೆ ಸುಮಲತಾ ಅಂಬರೀಶ್ ಅವರು ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮಲತಾ ಅವರನ್ನು ಮನವೊಲಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಣಕ್ಕಿಳಿದಿದ್ದು, ಇದರ ಭಾಗವಾಗಿ ಬೆಂಗಳೂರಿನ ಜೆಪಿ ನಗರದಲ್ಲಿರುವ ಸುಮಲತಾ ಅವರ ನಿವಾಸಕ್ಕೆ ವಿಜಯೇಂದ್ರ ಭೇಟಿ ನೀಡಿ ಸುಮಲತಾ ಜೊತೆ ಮಹತ್ವದ ಚರ್ಚೆ ಮಾಡಿದರು. ಅಲ್ಲದೇ ಮೈತ್ರಿ ಧರ್ಮ ಪಾಲನೆ ಪ್ರಚಾರಕ್ಕೆ ಬರುವಂತೆ ಮನವೊಲಿಸುವ ಪ್ರಯತ್ನ ಮಾಡಿದರು. ಆದ್ರೆ, ಸುಮಲತಾ ಅವರು ಸದ್ಯಕ್ಕೆ ಯಾವುದೇ ನಿರ್ಧಾರ ಹೇಳದೆ ಬೆಂಬಲಗರ ಅಭಿಪ್ರಾಯ ಕೇಳಿ ಮಂಡ್ಯದಲ್ಲಿ ತಮ್ಮ ನಿಲುವು ಪ್ರಕಟಿಸುವುದಾಗಿ ಹೇಳಿದ್ದಾರೆ.