ಪ್ರತಿನಿಧಿ ವರದಿ ಚಾಮರಾಜನಗರ
ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಎಂ.ಕೃಷ್ಣಮೂರ್ತಿ ನಗರದ ರಾಮಸಮುದ್ರ ಬಡಾವಣೆಯ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಚುನಾವಣೆ ಪ್ರಚಾರ ಆರಂಭಿಸಿದರು.
ಬಡಾವಣೆಯಲ್ಲಿ ಪ್ರಮುಖ ಬೀದಿಗಳಲ್ಲಿ ಮತಯಾಚನೆ ಮಾಡಿದರು. ನಂತರ ಬೂದಿತಿಟ್ಟು, ಚಂದಕವಾಡಿ, ಬಸಪ್ಪನ ಪಾಳ್ಯ, ಸರಗೂರು, ಹುರುಳಿನಂಜನಪುರ, ಕಾಗಲವಾಡಿ, ಅಮ್ಮನಪುರ ಜ್ಯೋತಿಗೌಡನಪುರ, ನಾಗವಳ್ಳಿ, ದಡದಹಳ್ಳಿ ಹಾಗೂ ಸಿದ್ದಯ್ಯನಪುರ ಗ್ರಾಮಗಳಲ್ಲಿ ಮತ ಪ್ರಚಾರ ಮಾಡಿದರು.
ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ತಾಲೂಕುಗಳು ಬಹಳ ಹಿಂದುಳಿದಿವೆ. ಆಳ್ವಿಕೆ ಮಾಡಿದ ಕಾಂಗ್ರೆಸ್, ಬಿಜೆಪಿ, ಜನತಾದಳ ಪಕ್ಷಗಳು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಮಾಡದೆ ನಿರ್ಲಕ್ಷ್ಯ ವಹಿಸಿವೆ ಎಂದು ದೂರಿದರು.
ಈ ಪಕ್ಷಗಳು ಜನರಿಗೆ ಹಣ, ಮದ್ಯ ಹಂಚಿಕೆ ಮಾಡಿ ನೂರಾರು ಕೋಟಿ ಖರ್ಚು ಮಾಡಿ ಚುನಾವಣೆಯಲ್ಲಿ ಗೆದ್ದಿವೆ. ಜನಸಾಮಾನ್ಯರಿಗೆ ಯಾವುದೇ ಅನುಕೂಲ ಮಾಡದೆ ಬಂಡವಾಳ ಶಾಹಿಗಳ ಪರವಾಗಿ ಕೆಲಸ ಮಾಡಿವೆ. ಹಳ್ಳಿಗಳ ಅಭಿವೃದ್ಧಿ ಕುಂಠಿತವಾಗಿದೆ. ಸೂಕ್ತ ರಸ್ತೆ, ಚರಂಡಿ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ನನಗೊಂದು ಅವಕಾಶ ನೀಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ನಾಗಯ್ಯ, ಮುಖಂಡರಾದ ಬ.ಮ.ಕೃಷ್ಣಮೂರ್ತಿ, ಬ್ಯಾಡಮೂಡ್ಲು ಬಸವಣ್ಣ ಇತರರು ಇದ್ದರು.
13ಸಿಎಚ್ಎನ್.3:ಬಿಎಸ್ಪಿ ಅಭ್ಯರ್ಥಿ ಎಂ.ಕೃಷ್ಣಮೂರ್ತಿ ಅವರು ಚಾಮರಾಜನಗರದ ರಾಮಸಮುದ್ರ ಬಡಾವಣೆಯಲ್ಲಿ ಮತಯಾಚನೆ ಮಾಡಿದರು.