ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ ಸೂಚನೆ
ಪ್ರತಿನಿಧಿ ವರದಿ ಹಾಸನ
ಈಗಾಗಲೇ ಮಳೆಗಾಲ ಆರಂಭವಾಗಿದ್ದು, ಯಾವುದೇ ರೀತಿಯ ಕಾಯಿಲೆಗಳು ಹರಡದಂತೆ ಹೆಚ್ಚಿನ ಗಮನವಹಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಶಾಲೆಗಳು, ಆಸ್ಪತ್ರೆ, ದೇವಸ್ಥಾನಗಳು ಹಾಗೂ ಇನ್ನಿತರ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ತಿಳಿಸಿದರು. ವಿವಿಧ ಕಾಯಿಲೆಗಳ ಬಗ್ಗೆ ಸಾರ್ವಜನಿಕರಿಗೆ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ವಿಡಿಯೋ, ಛಾಯಾಚಿತ್ರಗಳನ್ನು ಡಿಜಿಟಲ್ ಡಿಸ್ಪ್ಲೇ ಬೋರ್ಡ್ಗಳಲ್ಲಿ ಪ್ರದರ್ಶಸಿಸುವಂತೆ ಸೂಚಿಸಿದ್ದಾರೆ
ಹೋಟೆಲ್ಗಳಿಗೆ ಉಪಹಾರ ಸೇವನೆಗೆ ಬರುವ ಎಲ್ಲ ಸಾರ್ವಜನಿಕರಿಗೆ ಬಿಸಿ ನೀರನ್ನೇ ಕಡ್ಡಾಯವಾಗಿ ನೀಡುವಂತೆ ನಿರ್ದೇಶನ ನೀಡಿ ಎಂದು ತಿಳಿಸಿದರು. ಅಂಗನವಾಡಿಯಲ್ಲಿರುವ ಮಕ್ಕಳಿಗೆ ಪ್ರತಿನಿತ್ಯ ಪೌಷ್ಠಿಕಾಂಶ ಆಹಾರ ನೀಡಬೇಕು ಎಂದರಲ್ಲದೆ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಂಗನವಾಡಿಯಲ್ಲಿ ಮೂಲ ಸೌಕರ್ಯಗಳಲ್ಲಿ ಯಾವುದೇ ರೀತಿಯ ಕೊರತೆಯಾಗದಂತೆ ನೋಡಿಕೊಳ್ಳಿ ಪ್ರತಿ ಅಂಗನವಾಡಿಯಲ್ಲಿ ಕಡ್ಡಾಯವಾಗಿ ಶೌಚಾಲಯ ಇರಬೇಕು ಹಾಗೂ ಸ್ವಚ್ಛತೆ ಕಾಪಾಡುವಂತೆ ತಿಳಿಸಿದರು. ಎಲ್ಲ ಇಲಾಖೆಗಳು ತಮ್ಮ ಇಲಾಖೆಯ ಪ್ರಗತಿಯ ಬಗ್ಗೆ ಹಾಗೂ ಇಲಾಖೆಯಿಂದ ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಿರುವವರ ಬಗ್ಗೆ ಯಶೋಗಾಥೆಗಳನ್ನೂ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಇದೇ ವೇಳೆ ಹಾಸನ ತಾಲೂಕು ಪಂಚಾಯಿತಿ ವತಿಯಿಂದ ವಿಶೇಷ ಚೇತನರಿಗೆ ವಾಕರ್, ವಾಕಿಂಗ್ ಸ್ಟಿಕ್ ಇನ್ನಿತರ ಉಪಕರಣಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪರಪ್ಪ ಸ್ವಾಮಿ ಅವರು ವಿತರಿಸಿದರು.
ಹಾಸನ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ಗಿರೀಶ್ ಮಾತನಾಡಿ, ಇಲಾಖೆಗಳ ಮಾಹಿತಿಯನ್ನು ಪಡೆದುಕೊಂಡು ಇಲಾಖೆಗಳಿಗೆ ನೀಡಿರುವ ಗುರಿಯನ್ನು ನಿಗದಿತ ಅವಧಿಯಲ್ಲಿ ಸಾಧಿಸುವಂತೆ ತಿಳಿಸಿದರು.
ಹಾಸನ ತಾಲೂಕಿನ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿ, ಹಾಸನ ತಾಪಂ ನಿರ್ದೇಶಕ ದಿನೇಶ್, ಯೋಜನಾಧಿಕಾರಿ ವಿನಾಯಕ ಅಗಸಿ ಇತರರು ಹಾಜರಿದ್ದರು.