ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕ ಹಾಗೂ ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು ಶನಿವಾರ ರಾತ್ರಿ ನಿಧನರಾದರು. ವಿಜಯನಗರ ಬಡಾವಣೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ತೀವ್ರ ಹೃದಯಾಘಾತಕ್ಕೊಳಗಾಗಿ ಸಾವಿಗೀಡಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಮೈಸೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕರಾಗಿದ್ದ ಅವರು ಕಳೆದ ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು.
ಸಾಮಾಜಿಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಪ್ರೊ.ಮಹೇಶ್ ಚಂದ್ರಗುರು, ಹತ್ತಾರು ಬಾರಿ ತಮ್ಮ ಹೇಳಿಕೆಗಳ ಮೂಲಕ ವಿವಾದಕ್ಕೆ ಒಳಗಾಗಿದ್ದರು.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರೊ. ಮಹೇಶ್ ಚಂದ್ರ ಗುರು ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗ್ಯಾಂಗ್ರೀನ್ ಕಾರಣದಿಂದ ಕಾಲುನೋವಿನ ಸಮಸ್ಯೆ ಎದುರಿಸುತ್ತಿದ್ದ ಪ್ರೊ.ಮಹೇಶ್ ಚಂದ್ರ ಗುರು ಅವರಿಗೆ ಇಂದು ಸಂಜೆ 7.30 ರ ಸುಮಾರಿಗೆ ಹೃದಯಘಾತ ಸಂಭವಿಸಿ, ನಿಧನರಾಗಿರುವುದಾಗಿ ತಿಳಿದುಬಂದಿದೆ.
ಭಾರತದಲ್ಲಿ ಮೊದಲ ದಲಿತ-ಬೌದ್ಧ ಮಾಧ್ಯಮ ಅಧ್ಯಯನ ಪ್ರಾಧ್ಯಾಪಕರಾಗಿ ಕೂಡ ಗುರುತಿಸಿಕೊಂಡಿದ್ದರು.
ನಿವೃತ್ತಿಯ ಬಳಿಕ ಪ್ರಗತಿಪರ ಚಳವಳಿಗಳಲ್ಲಿ ಗಣನೀಯವಾಗಿ ಗುರುತಿಸಿಕೊಂಡಿದ್ದ ಪ್ರೊ .ಮಹೇಶ್ ಚಂದ್ರ ಗುರು ಅವರು ಎಡಪಂಥೀಯ ವಾದವನ್ನು ಪ್ರತಿಪಾದಿಸುತ್ತಿದ್ದರು. ನಾಡ ಹಬ್ಬ ದಸರಾ ವೇಳೆ ಮಹಿಷಾ ದಸರಾ ಆಚರಣೆಗೊಳ್ಳಲು ಇವರು ಪ್ರಮುಖ ಪಾತ್ರ ವಹಿಸಿದ್ದರು.
– ಸಂಕ್ಷಿಪ್ತ ಪರಿಚಯ :
ಚಾಮರಾಜನಗರಕ್ಕೆ ಸೇರಿದ ಗುಂಡ್ಲುಪೇಟೆ ಪಟ್ಟಣದಲ್ಲಿ ದಿ.ಪಿ.ಎಸ್.ಬಸವರಾಜು ಮತ್ತು ದಿ.ಜಿ.ಬಿ.ಬನಶಂಕರಮ್ಮ ಅವರ ಪುತ್ರರಾಗಿ ೩೧-೦೧-೧೯೫೭ರಂದು ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಿಂದ ೧೯೮೦ರಲ್ಲಿ ಸಮೂಹ ಸಂಪರ್ಕ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಮಂಗಳೂರು ವಿಶ್ವವಿದ್ಯಾಲಯದಿಂದ ೧೯೯೯ರಲ್ಲಿ ಅಭಿವೃದ್ಧಿ ಸಂವಹನ ವಿಷಯದಲ್ಲಿ ಪಿ.ಎಚ್.ಡಿ. ಪದವಿ ಗಳಿಸಿದ್ದಾರೆ. ೧೯೮೦ರಿಂದ ಇದುವರೆವಿಗೂ ಮೈಸೂರಿನ ಹೆಸರಾಂತ ಬಂಡಾಯ ಪತ್ರಿಕೆ ಪಂಚಮದಲ್ಲಿ ವರದಿಗಾರ/ಉಪಸಂಪಾದಕ, ಹೈದರಾಬಾದಿನ ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಸಂಸ್ಥೆಯಲ್ಲಿ ಸಂಶೋಧನಾಧಿಕಾರಿ, ಚಂಡಿಘಡದ ಭಾರತೀಯ ಮಾಪನ ಸಂಸ್ಥೆಯಲ್ಲಿ ಸಾರ್ವಜನಿಕ ಸಂಪರ್ಕ ಸಹಾಯ ನಿರ್ದೇಶಕ, ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಲ್ಲಿ ಉಪನ್ಯಾಸಕ, ಮಂಗಳೂರು ವಿಶ್ವವಿದ್ಯಾಲಯದ ಸಂವಹನ ಸಂಪರ್ಕ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಪ್ರವಾಚಕ ಮತ್ತು ಮೈಸೂರು ವಿಶ್ವವಿದ್ಯಾಲಯದ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಇದೇ ಅವಧಿಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಸಂಯೋಜನಾಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ.
ವಿಶ್ವವಿದ್ಯಾಲಯಗಳಲ್ಲಿ ಸಂದರ್ಶಕ ಪ್ರಾಧ್ಯಾಪಕ, ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ನೇಮಕ ಸಮಿತಿ ಸದಸ್ಯ, ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಕ, ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷಕ, ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ ಪರೀಕ್ಷಕ, ನ್ಯಾಕ್ ಸಮಿತಿ ಸದಸ್ಯ ಇವೇ ಮೊದಲಾದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಮಾತ್ರವಲ್ಲ, ದಲಿತ ಚಳವಳಿ, ರೈತ ಚಳವಳಿ, ಬಂಡಾಯ ಸಾಹಿತ್ಯ ಚಳವಳಿ ಮೊದಲಾದ ಪ್ರಗತಿಪರ ಚಳವಳಿಗಳಲ್ಲಿಯೂ ಸಕ್ರಿಯವಾಗಿ ದುಡಿದಿದ್ದಾರೆ. ಸುಮಾರು ೩೨ ಗ್ರಂಥಗಳನ್ನು ಕನ್ನಡ ಮತ್ತು ಆಂಗ್ಲಭಾಷೆಗಳಲ್ಲಿ ರಚಿಸಿ ಸಮೂಹ ಸಂವಹನ, ಪತ್ರಿಕೋದ್ಯಮ, ಮಹಿಳಾ ಸಾಹಿತ್ಯ, ಬೌದ್ಧ ಸಾಹಿತ್ಯ, ಅಂಬೇಡ್ಕರ್ ಸಾಹಿತ್ಯ ಮೊದಲಾದ ಕ್ಷೇತ್ರಗಳಿಗೆ ಮೌಲಿಕ ಕೊಡುಗೆಗಳನ್ನು ನೀಡಿದ್ದಾರೆ.
ಸುಮಾರು ೧೨೦ಕ್ಕೂ ಹೆಚ್ಚು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ವಿಚಾರಸಂಕಿರಣಗಳಲ್ಲಿ ಪ್ರಬಂಧ ಮಂಡಿಸಿದ್ದಾರೆ. ಸುಮಾರು ೨೦೦ಕ್ಕೂ ಹೆಚ್ಚು ಲೇಖನಗಳು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಪ್ರತಿಷ್ಠಿತ ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ.
ಇವರ ಮಾರ್ಗದರ್ಶನದಲ್ಲಿ ಸುಮಾರು ೩೨ ಸಂಶೋಧನಾ ವಿದ್ಯಾರ್ಥಿಗಳು ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪಿಎಚ್.ಡಿ ಪದವಿ ಗಳಿಸಿದ್ದಾರೆ.