ಪ್ರತಿನಿಧಿ ವರದಿ ಮದ್ದೂರು
ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಬಗ್ಗೆ ಲಘುವಾಗಿ ಮಾತನಾಡಿ, ಮಾತನಾಡುವ ಭರಾಟೆಯಲ್ಲಿ ದೇವೇಗೌಡರ ಸಾವನ್ನು ಬಯಸಿದ್ದಾರೆ ಎಂದು ಆರೋಪಿಸಿ ಬೆಸಗರಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಜೆಡಿಎಸ್ ಕಾರ್ಯಕರ್ತರು ಬೆಸಗರಹಳ್ಳಿ ಗ್ರಾಮದಲ್ಲಿ ರಸ್ತೆತಡೆ ಮಾಡಿ ಪ್ರತಿಭಟಿಸಿದರು.
ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಭಿತ್ತಿ ಪತ್ರಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಜೆಡಿಎಸ್ ಪಕ್ಷದ ಯುವ ನಾಯಕ ಕೋಣಸಾಲೆ ಕೆ.ಜಿ.ಮಧುಸೂದನ್ ಮಾತನಾಡಿ, ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಬಗ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕುಟುಂಬದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಸರಿಯಲ್ಲ. ಮಾತಿನ ಮೇಲೆ ಹಿಡಿತವಿಲ್ಲದೆ ಮಾತನಾಡಿದರೆ ಮುಂದಿನ ದಿನಗಳಲ್ಲಿ ಜೆಡಿಎಸ್ ಮುಖಂಡರು ಶಿವರಾಮೇಗೌಡರಿಗೆ ತಕ್ಕ ಶಾಸ್ತಿ ಮಾಡಲಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರದ್ದೋ ಸಮಾಧಿಯ ಮೇಲೆ ರಾಜಕಾರಣ ಮಾಡಲು ಹೊರಟಿರುವುದು ಅವರಿಗೆ ಶೋಭೆ ತರುವುದಿಲ್ಲ. ಎಚ್.ಡಿ. ದೇವೇಗೌಡ ಅವರು ಪ್ರಧಾನಮಂತ್ರಿಯಾಗಿ, ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಹಲವು ಮಂದಿಗೆ ರಾಜಕೀಯ ಜನ್ಮ ನೀಡಿರುವ ಎಚ್.ಡಿ. ದೇವೇಗೌಡ ಅವರ ಸಾವನ್ನು ಬಯಸಿರುವುದು ಹೇಯ ಕೃತ್ಯ ಎಂದು ಬೇಸರ ವ್ಯಕ್ತಪಡಿಸಿದರು.
ಜೆಡಿಎಸ್ ಪಕ್ಷ ಎಲ್.ಆರ್. ಶಿವರಾಮೇಗೌಡ ಅವರಿಗೆ ಕಳೆದ ಲೋಕಸಭೆಯ ಉಪಚುನಾವಣೆಯಲ್ಲಿ ಟಿಕೆಟ್ ನೀಡಿ, ಅವರ ಗೆಲುವಿಗೆ ಕಾರಣವಾಗಿತ್ತು. ಜೆಡಿಎಸ್ ಪಕ್ಷದಿಂದ ಗೆದ್ದು ಸಂಸತ್ ಪ್ರವೇಶಿಸಿದ್ದರು. ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್ ವರಿಷ್ಠರನ್ನು ಮನಬಂದಂತೆ ನಿಂದಿಸಿ ಪಕ್ಷದಿಂದ ಉಚ್ಚಾಟನೆಯಾಗಿದ್ದರು. ಈಗ ಬಿಜೆಪಿ ಪಕ್ಷದಲ್ಲಿದ್ದು ಕಾಂಗ್ರೆಸ್ ಪಕ್ಷಕ್ಕೆ ಕೆಲಸ ಮಾಡುತ್ತಿರುವ ಇವರು ಅಪ್ರಭುದ್ಧ ರಾಜಕಾರಣಿಯಾಗಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ರಾಜಕಾರಣಿಗಳಿಗೆ ಯಾವುದೇ ನೆಲೆ ಇರುವುದಿಲ್ಲ. ಕೂಡಲೇ ಬಹಿರಂಗವಾಗಿ ಇಲ್ಲವೇ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕಾಲಿಗೆ ಬಿದ್ದು ರಾಜ್ಯದ ಜನರ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಮಂಡ್ಯ ಜಿಲ್ಲೆಗೆ ಬಂದಾಗ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಯಶ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಕೆ.ವಿ. ಪ್ರಸಾದ್, ಗ್ರಾ.ಪಂ. ಸದಸ್ಯರಾದ ಎಂ.ಎಸ್. ಲೋಕೇಶ್, ಎಚ್.ಎಲ್. ದಯಾನಂದ, ಚನ್ನಕೇಶವ, ಮುಖಂಡರಾದ ಚುಂಚೇಗೌಡನದೊಡ್ಡಿ ನಾಗೇಶ, ಪಣ್ಣೆದೊಡ್ಡಿ ಹನುಮಂತ, ಶಿವನಂಜಯ್ಯ, ಹೊಸಕೆರೆ ಪ್ರಸನ್ನ, ಕಮಲಿ ಗಿರೀಶ್, ನಿಲುವಾಗಿಲು ರಾಧಾಕೃಷ್ಣ, ಹೊಟ್ಟೆಕುಮಾರ, ವೆಂಕಟೇಶ್, ಬಿ.ಆರ್. ವಾಸು, ಅಭಿಷೇಕ್ ಗೌಡ, ಕೋಣಸಾಲೆ ಬಾಬು, ಜಿ.ಕೆ ಬೇಕರಿ ಗೋವಿಂದ, ಬಿ.ಎಸ್.ಹರಿಪ್ರಸಾದ್ ಸೇರಿದಂತೆ ಇತರರಿದ್ದರು.
ಪೋಟೋ
ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಬಗ್ಗೆ ಲಘುವಾಗಿ ಮಾತನಾಡಿ, ಮಾತನಾಡುವ ಭರಾಟೆಯಲ್ಲಿ ದೇವೇಗೌಡರ ಸಾವನ್ನು ಬಯಸಿದ್ದಾರೆ ಎಂದು ಆರೋಪಿಸಿ ಬೆಸಗರಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಜೆಡಿಎಸ್ ಕಾರ್ಯಕರ್ತರು ಬೆಸಗರಹಳ್ಳಿ ಗ್ರಾಮದಲ್ಲಿ ರಸ್ತೆತಡೆ ಮಾಡಿ ಪ್ರತಿಭಟಿಸಿದರು.