ಪ್ರತಿನಿಧಿ ವರದಿ ಚಾಮರಾಜನಗರ
ಹುಬ್ಬಳ್ಳಿ ಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹೀರೆಮಠ ಅವರ ಹತ್ಯೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಸಂಘಟನೆಯ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಸಂಜೆ ದಿಢೀರ್ ಪ್ರತಿಭಟನೆ ನಡೆಸಿದರು.
ನಗರದ ಚಾಮರಾಜೇಶ್ವರಸ್ವಾಮಿ ದೇಗುಲದ ಎದುರು ಜಮಾಯಿಸಿದ ಹಿಂದೂ ಜಾಗರಣ ವೇದಿಕೆ ಸಂಘಟನೆಯ ಕಾರ್ಯಕರ್ತರು ರಾಜ್ಯ ಸರ್ಕಾರ ಹಾಗೂ ಗೃಹ ಸಚಿವರ ವಿರುದ್ದ ಧಿಕ್ಕಾರದ ಘೋಷಣೆ ಕೂಗಿದರು. ಬಳಿಕ ಮೆರವಣಿಗೆ ಹೊರಟು ಭುವನೇಶ್ಚರಿ ವೃತ್ತದಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ನೇಹಾ ಹಿರೇಮಠ ಎಂಬ ವಿದ್ಯಾರ್ಥಿನಿಯನ್ನು ಮುಸ್ಲಿಂ ಸಮುದಾಯದ ಭಗ್ನ ಪ್ರೇಮಿಯು ಹತ್ಯೆ ಗೈದಿದ್ದಾನೆ. ಈ ಘಟನೆಯನ್ನು ಸಿಎಂ ಹಾಗೂ ಗೃಹಸಚಿವರು ಸಮರ್ಥಿಸಿಕೊಳ್ಳುವ ಹೇಳಿಕೆ ನೀಡುತ್ತಿದ್ದು, ಈ ಕುರಿತು ಗೃಹಸಚಿವರು ಕ್ಷುಲ್ಲಕ ಹೇಳಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ನೇಹಾ ಹೀರೆಮಠ್ ಹತ್ಯೆ ಗೈದವನನ್ನು ಬಂಧಿಸಿ ಗಲ್ಲಿಗೇರಿಸಬೇಕು. ಸರ್ಕಾರ ಹಿಂದುಗಳಿಗೆ ರಕ್ಷಣೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಸುಂದರ್ ರಾಜ್, ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ವಕೀಲ ನಂದೀಶ್,ಚಂದ್ರಶೇಖರ್, ಶಿವರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ಮನೋಜ್ ಪಾಟೀಲ್, ಸೂರ್ಯಕುಮಾರ್, ಮಂಜು, ನಟರಾಜು, ಭಾಸ್ಕರ್, ರುದ್ರ, ದಾಕ್ಷಾಯಣಿ, ವನಜಾಕ್ಷಿ ಸೇರಿದಂತೆ ಇತರರು ಇದ್ದರು.
19ಸಿಎಚ್ಎನ್.3:ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹೀರೆಮಠ ಅವರ ಹತ್ಯೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಸಂಘಟನೆಯ ಕಾರ್ಯಕರ್ತರು ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು.