ನಂಜನಗೂಡು: ನಂಜನಗೂಡು ತಾಲ್ಲೂಕಿನ ವೀರದೇವನಪುರ ಗ್ರಾಮದಲ್ಲಿ ಸಾರಿಗೆ ಬಸ್ ತಡೆಹಿಡಿದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮದಲ್ಲಿ ಸಾರಿಗೆ ಬಸ್ ನಿಲ್ಲಿಸುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಗ್ರಾಮದಲ್ಲಿ ಬಸ್ ನಿಲ್ಲಿಸುವಂತೆ ಸಾಕಷ್ಟು ಬಾರಿ ಮನವಿ ಮಾಡಿದ್ದರು ಕೆ ಎಸ್ ಆರ್ ಟಿ ಸಿ ಸಿಬ್ಬಂದಿಗಳು ಕ್ಯಾರೇ ಎನ್ನುತ್ತಿಲ್ಲ. ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಿಬ್ಬಂದಿಗಳ ಈ ವರ್ತನೆಯಿಂದ ತೊಂದರೆಯಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ಇದ್ದರೂ ಕೂಡ ಬಸ್ ನಿಲ್ಲಿಸದೇ ಕೆಎಸ್ಆರ್ಟಿಸಿ ಸಿಬ್ಬಂದಿ ದುಂಡಾ ವರ್ತನೆಯನ್ನು ತೋರುತ್ತಿದ್ದಾರೆ. ಕಳೆದ ಬಾರಿಯೂ ರಸ್ತೆ ತಡೆದು ಪ್ರತಿಭಟನೆ ಮಾಡಿದ್ದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಕೂಡಲೇ ಇಂತಹ ದುರ್ವರ್ತನೆ ತೋರುವ ಕೆಎಸ್ಆರ್ಟಿಸಿ ಸಿಬ್ಬಂದಿಯನ್ನು ವಜಾ ಮಾಡುವಂತೆ ಆಗ್ರಹಿಸಿ ಸಾರಿಗೆ ಬಸ್ ತಡೆದು ದಿಢೀರ್ ಪ್ರತಿಭಟನೆಯನ್ನು ಗ್ರಾಮದ ಯುವಕರು ನಡೆಸಿದ್ದಾರೆ. ಅಲ್ಲದೆ ಸಾರಿಗೆ ವ್ಯವಸ್ಥಾಪಕರು ಬರುವ ತನಕ ಬಸ್ ಬಿಡುವುದಿಲ್ಲ ಎಂದು ಯುವಕರು ಪಟ್ಟು ಹಿಡಿದಿದ್ದರು.