ಪ್ರತಿನಿಧಿ ವರದಿ ಚಾಮರಾಜನಗರ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಮೇ 28ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಶಿವಪುರ ಮಹಾದೇವಪ್ಪ ಹೇಳಿದರು.
ಕೇಂದ್ರ ಮತ್ತು ರಾಜ್ಯಗಳಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ರೈತ ವಿರೋಧಿ ಧೋರಣೆಗಳು ಬದಲಾಗುತ್ತಿಲ್ಲ. ಕೃಷಿ ಕ್ಷೇತ್ರ ಇಂದು ಗಂಭೀರವಾದ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ರೈತ ಸಮುದಾಯವನ್ನು ಕೃಷಿ ಬಿಕಟ್ಟಿನಿಂದ ಹೊರ ತರುವಂತೆ ಒತ್ತಾಯಿಸಿ ದೇಶಾದ್ಯಂತ ಇಂದಿಗೂ ಹೋರಾಟ ಮುಂದುವರೆದಿದೆ. ಹೀಗಿದ್ದರೂ ಸಹ ರೈತರ ಬೇಡಿಕೆಗಳನ್ನು ರಾಜ್ಯ ಸರ್ಕಾರಗಳು ಈಡೇರಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮೇ 28 ರಂದು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರೈತರ ಕೃಷಿ ಪಂಪ್ ಸೆಟ್ ಗಳ ಅನಧಿಕೃತ ವಿದ್ಯುತ್ ಸಂಪರ್ಕವನ್ನು ಅಧಿಕೃತಗೊಳಿಸಲು ಹಾಗೂ ಹೊಸ ಸಂಪರ್ಕವನ್ನು ಪಡೆಯಲು ರೈತರು ಪೂರ್ಣ ವೆಚ್ಚವನ್ನು ಭರಿಸಬೇಕೆಂದು ಹೊರಡಿಸಿರುವ ಆದೇಶವನ್ನು ಕೂಡಲೇ ಕೈಬಿಟ್ಟು, ಸಾಂಕೇತಿಕ ಮೊತ್ತವನ್ನು ಪಡೆದುಕೊಂಡು ಸಂಪರ್ಕವನ್ನು ಕಲ್ಪಿಸಿಕೊಡಬೇಕು. ಪೂರ್ವ ಮುಂಗಾರಿನಲ್ಲಿ ಜಿಲ್ಲಾದ್ಯಂತ ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆ ಅಡಿ ರೈತರು ವಿವಿಧ ಬೆಳೆ ವಿಮೆ ಪಾಲಿಸಿ ಕಟ್ಟಿದ್ದು, ವಿಮಾ ಕಂಪನಿಯವರು ರೈತರ ಖಾತೆಗೆ ಪರಿಹಾರದ ಮೊತ್ತವನ್ನು ಕೂಡಲೇ ಪಾವತಿಸಬೇಕು ಮತ್ತು ಫಸಲು ಭೀಮಾ ಯೋಜನೆಯನ್ನು ರೈತ ಬೆಳೆಯುವ ಎಲ್ಲ ಬೆಳೆಗಳಿಗೂ ವರ್ಷಪೂರ್ತಿ ಅನ್ವಯವಾಗುವಂತೆ ವಿಮಾ ಯೋಜನೆಯನ್ನು ಪರಿಷ್ಕರಣೆ ಮಾಡಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನೀಡುವ ತನಕ ಸ್ವಾಮಿನಾಥನ್ ವರದಿಯನ್ವಯ ಕನಿಷ್ಠ ಬೆಂಬಲ ಬೆಲೆಯನ್ನು ನೀಡಿ, ಎಲ್ಲ ಬೆಳೆಗಳನ್ನು ಸಕಾಲದಲ್ಲಿ ಖರೀದಿಸಬೇಕು. ಕಳೆದ ವರ್ಷ ಸಕ್ಕರೆ ಕಾರ್ಖಾನೆಗಳು ಕೊಡಬೇಕಾಗಿರುವ ಉಪ ಉತ್ಪನ್ನಗಳ ಬಾಕಿ ಹಣವಾದ ಪ್ರತಿ ಟನ್ ಗೆ 150 ರೂ.ಗಳನ್ನು ಶೀಘ್ರವಾಗಿ ರೈತರ ಖಾತೆಗೆ ಜಮಾ ಮಾಡಬೇಕು. ಈ ವರ್ಷ ಪ್ರತಿ ಟನ್ ಕಬ್ಬಿಗೆ 5 ಸಾವಿರ ರೂ.ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು
ಮಾನವ ಮತ್ತು ವನ್ಯಜೀವಿ ಸಂಘರ್ಷವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕು. ವನ್ಯಜೀವಿಗಳಿಂದ ರೈತರಿಗೆ ಉಂಟಾಗುವ ಬೆಳೆ, ಆಸ್ತಿ, ಪ್ರಾಣಹಾನಿಗೆ ಹೆಚ್ಚಿನ ಪರಿಹಾರವನ್ನು ಸಕಾಲದಲ್ಲಿ ಪಾವತಿಸಬೇಕು. ವನ್ಯಜೀವಿಗಳಿಂದ ಮೃತಪಟ್ಟ ಕುಟುಂಬದ ಒಬ್ಬ ಸದಸ್ಯರಿಗೆ ಕಾಯಂ ಉದ್ಯೋಗ ನೀಡಬೇಕು. ಆ ಕುಟುಂಬದ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಸರ್ಕಾರವೇ ಹೊರಬೇಕು. ವನ್ಯಜೀವಿಗಳಿಂದ ಸತ್ತ ಜಾನುವಾರುಗಳಿಗೆ ಸೂಕ್ತ ಪರಿಹಾರ ನೀಡಬೇಕು. ಅಲ್ಲದೆ ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ಬಿಜೆಪಿ ಪಕ್ಷದ ಕೆಲವು ಪುಂಡರು ರೈತ ಮುಖಂಡರ ಮೇಲೆ ಹಲ್ಲೆ ಮಾಡಿದ್ದು, ಆ ಪುಂಡರ ವಿರುದ್ಧ ಕಟ್ಟುನಿಟಿನ ಕಾನೂನು ಕ್ರಮ ಜರುಗಿಸಬೇಕು. ಅವರು ರೈತ ಮುಖಂಡರ ವಿರುದ್ದ ದಾಖಲಿಸಿರುವ ಸುಳ್ಳು ಪ್ರಕರಣವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಸಿದ್ದಸ್ವಾಮಿಗೌಡ, ಪ್ರಧಾನ ಕಾರ್ಯದರ್ಶಿ ಭಾಸ್ಕರ್, ಶೈಲೇಂದ್ರ, ಉಪಾಧ್ಯಕ್ಷ ಗೌಡೇಗೌಡ,ಮಹೇಶ್ ಇದ್ದರು.
24ಸಿಎಚ್ಎನ್.1:
ಚಿತ್ರವಿದೆ